ಚುನಾವಣಾ ಬಾಂಡ್ ಕೇಸ್: ನಳಿನ್ ಕುಮಾರ್ ಕಟೀಲ್​ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆಯಾಜ್ಞೆ

| Updated By: ರಮೇಶ್ ಬಿ. ಜವಳಗೇರಾ

Updated on: Sep 30, 2024 | 5:46 PM

ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಕ್ಷೇತ್ರದ ಮಾಜಿ ಬಿಜೆಪಿ ಸಂಸದ, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್​ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ನಳಿನ್ ಕುಮಾರ್ ಕಟೀಲ್ ವಿರುದ್ಧದ​ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಚುನಾವಣಾ ಬಾಂಡ್ ಕೇಸ್: ನಳಿನ್ ಕುಮಾರ್ ಕಟೀಲ್​ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆಯಾಜ್ಞೆ
ನಳಿನ್ ಕುಮಾರ್ ಕಟೀಲ್
Follow us on

ಬೆಂಗಳೂರು, (ಸೆಪ್ಟೆಂಬರ್ 30): ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್​ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಆದರ್ಶ ಅಯ್ಯರ್ ಅವರು ಬೆಂಗಳೂರಿನ ತಿಲಕ್​ ನಗರ ಠಾಣೆಗೆ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಕಟೀಲ್​ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಇಂದು (ಸೆಪ್ಟೆಂಬರ್ 30) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ತನಿಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ನಳೀನ್ ಕುಮಾರ್ ಕಟೀಲ್, ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸೇರಿದಂತೆ ಇನ್ನಿತರರಿಗೂ ಬಿಗ್​ ರಿಲೀಫ್ ಸಿಕ್ಕಂತಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ತಿಲಕನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್.22 ಕ್ಕೆ ಮುಂದೂಡಿದೆ. ನಳಿನ್ ಕುಮಾರ್ ಕಟೀಲು ಪರ ಕೆ.ಜಿ.ರಾಘವನ್ ವಾದ ಮಂಡನೆ ಮಾಡಿದ್ದು, ಸುಲಿಗೆ ವ್ಯಾಖ್ಯಾನದ ಸನಿಹದಲ್ಲೂ ಆರೋಪ ಬರುವುದಿಲ್ಲ. ಜಾರಿ ನಿರ್ದೇಶನಾಲಯವನ್ನೂ ಆರೋಪಿಯನ್ನಾಗಿ FIR ದಾಖಲಿಸಲಾಗಿದೆ ಎಂದರು.

ಇನ್ನು ದೂರುದಾರ ಆದರ್ಶ್ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ ಭೂಷಣ್ ವಾದ ಮಂಡಿಸಿದ್ದು, ಇಡಿ ಭಯದಲ್ಲಿ ರಾಜಕೀಯ ಪಕ್ಷಕ್ಕೆ ದೇಣಿಗೆ ಸಂಗ್ರಹಿಸಲಾಗಿದೆ. ಇದು ಸುಲಿಗೆ ಅಲ್ಲದೇ ಮತ್ತೇನೂ ಅಲ್ಲವೆಂದು ಹೇಳಿದರು. ಇದಕ್ಕೆ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ಸುಲಿಗೆ ಎಂದರೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿರಬೇಕು. ಸುಲಿಗೆಗೆ ಒಳಗಾದವರೇ ಪೊಲೀಸರಿಗೆ ದೂರು ನೀಡಬೇಕು. ಆದರೆ ದೂರುದಾರ ತಾವು ಸುಲಿಗೆಗೆ ಒಳಗಾಗಿದ್ದೇನೆಂದು ಹೇಳಿಲ್ಲ ಎಂದು ಅಭಿಪ್ರಾಯಪಟ್ಟರು.

ಬೆಂಗಳೂರು: ಚುನಾವಣಾ ಬಾಂಡ್‌ (Electoral Bonds) ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಇಂದು ಶನಿವಾರ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ (JSP) ಆದರ್ಶ ಅಯ್ಯರ್ ಎಂಬುವವರು ದೂರು ದಾಖಲಿಸಿದ್ದರು.

Published On - 5:25 pm, Mon, 30 September 24