ಈಶ್ವರಪ್ಪನನ್ನು ಕೂಡಲೇ ಮಂತ್ರಿ ಮಂಡಲದಿಂದ ವಜಾ ಮಾಡಿ ಬಂಧಿಸಿ: ರಣದೀಪ್ ಸುರ್ಜೇವಾಲ ಒತ್ತಾಯ

ಬೊಮ್ಮಾಯಿ ಕ್ರಮ ಕೈಗೊಳ್ಳದೇ ಇದ್ದರೆ ಅದು ಸರಿ ಅಲ್ಲ. ಕಾಂಗ್ರೆಸ್ ಸುಮ್ಮನೆ ಕೂರುವುದಿಲ್ಲ. ನಾವು ಇಂದು ಸಂಜೆ ಒಳಗೆ ಬಂಧನ ಮಾಡದೇ ಇದ್ದರೆ ನಾವು ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ಬೆಂಗಳೂರಿನಲ್ಲಿ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

ಈಶ್ವರಪ್ಪನನ್ನು ಕೂಡಲೇ ಮಂತ್ರಿ ಮಂಡಲದಿಂದ ವಜಾ ಮಾಡಿ ಬಂಧಿಸಿ: ರಣದೀಪ್ ಸುರ್ಜೇವಾಲ ಒತ್ತಾಯ
ಬೆಂಗಳೂರಿನಲ್ಲಿ ರಣದೀಪ್ ಸುರ್ಜೇವಾಲ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Apr 12, 2022 | 1:56 PM

ಬೆಂಗಳೂರು: ಈಶ್ವರಪ್ಪ (KS Eshwarappa) ಅವರನ್ನು ಕೂಡಲೇ ಮಂತ್ರಿ ಮಂಡಲದಿಂದ ವಜಾ ಮಾಡಿ ಬಂಧಿಸಬೇಕು. ಮೋದಿ ಮೂಗಿನ ಕೆಳಗೆ ಕರ್ನಾಟಕದಲ್ಲಿ(Karnataka) ಭ್ರಷ್ಟಾಚಾರ ನಡೆಯುತ್ತಿದೆ. ಆದರೆ ಪ್ರಧಾನಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಬೊಮ್ಮಾಯಿ ಕ್ರಮ ಕೈಗೊಳ್ಳದೇ ಇದ್ದರೆ ಅದು ಸರಿ ಅಲ್ಲ. ಕಾಂಗ್ರೆಸ್ ಸುಮ್ಮನೆ ಕೂರುವುದಿಲ್ಲ. ನಾವು ಇಂದು ಸಂಜೆ ಒಳಗೆ ಬಂಧನ ಮಾಡದೇ ಇದ್ದರೆ ನಾವು ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ಬೆಂಗಳೂರಿನಲ್ಲಿ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಹೇಳಿದ್ದಾರೆ. ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರ ಅಡಿಯಿಂದ ಮುಡಿವರೆಗೆ ಭ್ರಷ್ಟಾಚಾರದಲ್ಲಿ ಮುಳುಗಿದೆ. ‘ಬಸವರಾಜ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದ ಸರ್ಕಾರ’. 40 ಪರ್ಸೆಂಟ್ ಕಮಿಷನ್ ಆರೋಪ ಕೇವಲ ಸಚಿವರ ವಿರುದ್ಧವಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಆರೋಪವಿದೆ. ಸಚಿವ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಭಾಗಿ ಎಂದು ಒಪ್ಪಿಕೊಂಡಂತೆ ಎಂದಿದ್ದಾರೆ  ಸುರ್ಜೇವಾಲ. ಸಚಿವ ಈಶ್ವರಪ್ಪ ಖುದ್ದು ಬಿಜೆಪಿ ಕಾರ್ಯಕರ್ತರನ್ನೇ ಬಿಡಲಿಲ್ಲ ಎಂದು ಸಂತೋಷ್ ಪಾಟೀಲ್ ನೇರವಾಗಿ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರೇ ಬಿಡಲಿಲ್ಲ ಅಂದರೆ ಜನರನ್ನು ಬಿಡ್ತಾರಾ? ನರೇಂದ್ರ ಮೋದಿ, ಅಮಿತ್ ಶಾ ಸ್ಪಂದಿಸದಿದ್ದಾಗ ಬಿಜೆಪಿ ಕಾರ್ಯಕರ್ತ ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಚಿವ ಈಶ್ವರಪ್ಪ ವಿರುದ್ಧ ಕೊಲೆ ಕೇಸ್ ದಾಖಲಿಸಿ ಬಂಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ರಣದೀಪ್ ಸಿಂಗ್ ಸುರ್ಜೇವಾಲ ಒತ್ತಾಯಿಸಿದ್ದಾರೆ.

ಏನಿದು ಪ್ರಕರಣ?  ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪರೇ ಕಾರಣ ಎಂದು ಗುತ್ತಿಗೆದಾರ ಸಂತೋಷ್ ಮಾಧ್ಯಮಗಳಿಗೆ ಆತ್ಮಹತ್ಯೆ ಸಂದೇಶವನ್ನು ಕಳುಹಿಸಿ, ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ . ವಾಟ್ಸಾಪ್ ಮೂಲಕ ಮೆಸೇಜ್ ಮಾಡಿರುವ ಸಂತೋಷ್, ನನ್ನ ಪತ್ನಿ, ಮಕ್ಕಳಿಗೆ ಸಹಾಯ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ. ನನ್ನ ಸಾವಿಗೆ ಸ್ನೇಹಿತರು ಕಾರಣರಲ್ಲ. ಸ್ನೇಹಿತರೊಂದಿಗೆ ನಾನು ಪ್ರವಾಸದಲ್ಲಿದ್ದ ಅವರಿಗೆ ಯಾವುದೇ ಸಂಬಂಧವಿಲ್ಲ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ. ನನ್ನ ಸಾವಿಗೆ ನೇರ ಕಾರಣ ಕೆಎಸ್ ಈಶ್ವರಪ್ಪ. ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿಎಸ್ ಯಡಿಯೂರಪ್ಪನವರು ಸಹಾಯ ಹಸ್ತ ನೀಡಬೇಕು. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು ಎಂದು ಸಂತೋಷ್ ಮಾಧ್ಯಮಕ್ಕೆ ಸಂದೇಶ್ ಕಳುಹಿಸಿದ್ದಾರೆ. ನನ್ನ ಗೆಳೆಯರನ್ನು ಪ್ರವಾಸ ಹೋಗೋಣ ಅಂತ ನನ್ನ ಜೊತೆಗೆ ಕಳೆದುಕೊಂಡ ಬಂದಿದ್ದೇನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೇ ಸಂಬಂಧ ಇರಲ್ಲ ಅಂತ ಸಂತೋಷ್ ಮೆಸೇಜ್ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಬೆಳಗಾವಿ ತಾಲೂಕಿನ ಬಡಸ ಗ್ರಾಮದ ನಿವಾಸಿ. ಬಡಸ ಗ್ರಾಮ ಬಿಟ್ಟು ಬೆಳಗಾವಿ ನಗರಕ್ಕೆ ಬಂದು ನೆಲೆಸಿದ್ದರು. ಮೂರು ವರ್ಷದ ಹಿಂದೆ ಮದುವೆಯಾಗಿದ್ದರು. ಒಂದೂವರೆ ವರ್ಷದ ಮಗು ಇದೆ.

ಇದನ್ನೂ ಓದಿ: ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ಮಾಧ್ಯಮಗಳಿಗೆ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಸಂತೋಷ್

Published On - 1:47 pm, Tue, 12 April 22