
ದಾವಣಗೆರೆ, ಸೆಪ್ಟೆಂಬರ್ 27: ಕಾರ್ಲ್ ಮಾರ್ಕ್ಸ್ ನಗರದಲ್ಲಿ ‘ಐ ಲವ್ ಮೊಹಮ್ಮದ್ (I Love Muhammad)’ ಎಂಬ ಬರಹವುಳ್ಳ ಫ್ಲೆಕ್ಸ್ ವಿಚಾರವಾಗಿ ಸೆ. 24ರ ರಾತ್ರಿ ನಡೆದಿದ್ದ ಕಲ್ಲು ತೂರಾಟ ಘಟನೆ ಸಂಬಂಧ ಈವರೆಗೆ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಜಾದನಗರ ಠಾಣಾ ವ್ಯಾಪ್ತಿಯಲ್ಲಿ 2 ಕೋಮಿನವರಿಂದ ಪ್ರತ್ಯೇಕ ದೂರು ಆಧರಿಸಿ ಬಂಧನ ನಡೆದಿದೆ. ಕಾರ್ಲ್ ಮಾರ್ಕ್ಸ್ ನಗರದ ವಿಚಾರವಾಗಿ ಸುಳ್ಳು ಸುದ್ದಿ ಹಬ್ಬಿಸುವ ಹಾಗೂ ಅನಗತ್ಯ ಮಾಹಿತಿ ಹಂಚಿಕೊಳ್ಳುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಖಡಕ್ ಎಚ್ಚರಿಕೆಯನ್ನೂ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೀಡಿದ್ದಾರೆ.
ಕಾರ್ಲ್ ಮಾರ್ಕ್ಸ್ ನಗರದಲ್ಲಿ ಹಾಕಲಾಗಿದ್ದ ‘ಐ ಲವ್ ಮೊಹಮ್ಮದ್ (I Love Muhammad)’ ಎಂಬ ಬರಹವುಳ್ಳ ಫ್ಲೆಕ್ಸ್ ಹರಿಯಲಾಗಿದೆ ಎಂಬ ಸುದ್ದಿ ಹರಿದಾಡಿದ ಪರಿಣಾಮ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಸುದ್ದಿ ಕೇಳಿ ಗುಂಪು ಗುಂಪಾಗಿ ಜನರು ಸೇರಿದ್ದು, ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವ ಬಗ್ಗೆಯೂ ಆರೋಪ ಕೇಳಿಬಂದಿತ್ತು. ಗಲಾಟೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ವಾಹನಗಳು ಜಖಂಗೊಂಡಿದ್ದವು. ಘಟನೆ ಸಂಬಂಧ ಎರಡೂ ಕೋಮಿನ 107 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಘಟನೆ ಬಳಿಕ ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಿದ್ದ ಪೊಲೀಸರು, ಯಾವುದೇ ಅಹಿತಕರ ಸುದ್ದಿ ಹರಡದಂತೆ ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಿದ್ದರು. ಆ ಬಳಿಕ ಘಟನಾ ಸ್ಥಳದಲ್ಲಿ ಪರಿಸ್ಥಿತಿ ಶಾಂತಗೊಂಡಿತ್ತು.
ಇದನ್ನೂ ಓದಿ: ಉಚಿತ ಅಕ್ಕಿ ಅನ್ನ ತಿಂದು, ಬಸ್ಸಲ್ಲಿ ಓಡಾಡ್ಕೊಂಡಿದ್ರೆ ಸಾಕಾ, ಉದ್ಯೋಗ ಬೇಡವಾ: ಸಿದ್ದರಾಮಯ್ಯ ಸರ್ಕಾರಕ್ಕೆ ಯತ್ನಾಳ್ ಪ್ರಶ್ನೆ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರವಾದಿ ಮೊಹಮ್ಮದ್ ಅವರ ಜನ್ಮದಿನವಾದ ಈದ್ ಮಿಲಾದ್ ಉನ್ ನಬಿ ಹಬ್ಬದ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ‘ಐ ಲವ್ ಮೊಹಮ್ಮದ್’ ಎಂಬ ಬರಹ ಇರುವ ನಾಮಫಲಕ ರಾರಾಜಿಸಿತ್ತು. ಇದಕ್ಕೆ ಹಿಂದೂ ಸಮಾಜದ ಕೆಲವರು ಆಕ್ಷೇಪವನ್ನೂ ವ್ಯಕ್ತ ಪಡಿಸಿದ್ದರು. ಮುಸ್ಲಿಂ ಯುವಕರು ಹಿಂದೂ ಧಾರ್ಮಿಕ ಪೋಸ್ಟರ್ ಹರಿದಿದ್ದಾರೆಂಬ ವಿಚಾರವಾಗಿ ಗಲಾಟೆ ನಡೆದ ಪರಿಣಾಮ ಸ್ಥಳಕ್ಕೆ ಬಂದ ಪೊಲೀಸರು ಫಲಕ ತೆಗೆಸಿದ್ದರು. ಘಟನೆ ಸಂಬಂಧ 24 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪೊಲೀಸರ ಈ ಕ್ರಮಕ್ಕೆ ಮುಸ್ಲಿಮರಿಂದ ಭಾರೀ ಆಕ್ರೋಶವೂ ವ್ಯಕ್ತವಾಗಿತ್ತು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.