ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗಲು ಸಮನ್ಸ್

| Updated By: Ganapathi Sharma

Updated on: Feb 28, 2025 | 12:04 PM

ಪೋಕ್ಸೋ ಕೇಸ್​​ನಲ್ಲಿ ಬಂಧನದಿಂದ ಪಾರಾಗಿದ್ದರೂ ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪಗೆ ಸಂಪೂರ್ಣ ರಿಲೀಫ್ ಸದ್ಯಕ್ಕೆ ದೊರೆಯುವಂತೆ ಕಾಣಿಸುತ್ತಿಲ್ಲ. ಇದೀಗ ಅವರ ವಿರುದ್ಧದ ವಿಚಾರಣೆಗೆ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್​​ 15 ರಂದು ದಿನಾಂಕ ನಿಗದಿಪಡಿಸಿದ್ದು, ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿದೆ.

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗಲು ಸಮನ್ಸ್
ಬಿಎಸ್ ಯಡಿಯೂರಪ್ಪ
Follow us on

ಬೆಂಗಳೂರು, ಫೆಬ್ರವರಿ 28: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್ 15ರಂದು ನಿಗದಿಪಡಿಸಿದೆ. ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯ ವಿಚಾರಣೆಗೆ ಕೋರ್ಟ್ ಸಮ್ಮತಿಸಿದ್ದು, ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಸಮನ್ಸ್ ನೀಡಿದೆ.

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಕೆಲವೇ ದಿನಗಳ ಹಿಂದಷ್ಟೇ ಕರ್ನಾಟಕ ಹೈಕೋರ್ಟ್​ನಲ್ಲಿ ರಿಲೀಫ್ ದೊರೆತಿತ್ತು. ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠ, ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ, ಪ್ರಕರಣ ರದ್ದು ಮಾಡಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿತ್ತು. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾದರೂ ವಿಚಾರಣೆ ಎದುರಿಸಲೇಬೇಕಾಗಿದೆ. ಆದ್ದರಿಂದ ಇದೀಗ ಬೆಂಗಳೂರಿನ ನ್ಯಾಯಾಲಯ ವಿಚಾರಣೆಗೆ ದಿನ ನಿಗದಿಪಡಿಸಿದೆ.

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ಹಿನ್ನೆಲೆ

ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ 2024 ರ ಮಾರ್ಚ್​ನಲ್ಲಿ ಕೇಳಿಬಂದಿತ್ತು. ಸಂತ್ರಸ್ತೆಯ ತಾಯಿ ಈ ಆರೋಪ ಮಾಡಿದ್ದರು. ಬಳಿಕ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ
ಬಾಡಿಗೆತಾಯಿಯಿಂದ ಮಗು ಕೊಡಿಸುತ್ತೇನೆಂದು ಕದ್ದ ಶಿಶು ನೀಡಿದ ವೈದ್ಯೆಗೆ ಜೈಲು
ಪೋಕ್ಸೋ ಕೇಸ್​: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್
ಬಿಎಸ್​ವೈ ಪೋಕ್ಸೋ ಕೇಸ್​​ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಖಡಕ್ ಮಾತು!
ಬಿಎಸ್ ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ದೂರುದಾರೆ ಸಾವು

ಏನು ಹೇಳಿದ್ದರು ಸಂತ್ರಸ್ತೆಯ ತಾಯಿ?

ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸದಾಶಿವನಗರ ಠಾಣೆಗೆ ದೂರು ನೀಡಲಾಗಿತ್ತು.

ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದು ಕೆಲವು ದಿನಗಳ ಮಟ್ಟಿಗೆ ರಾಜಕೀಯವಾಗಿಯೂ ಸದ್ದು ಮಾಡಿತ್ತು. ಏತನ್ಮಧ್ಯೆ, ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ 2024ರ ಮೇ ತಿಂಗಳಲ್ಲಿ ಮೃತಪಟ್ಟಿದ್ದರು.

ಇದನ್ನೂ ಓದಿ: ಪೋಕ್ಸೋ ಕೇಸ್​: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

ಇದೀಗ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿರುವುದರಿಂದ ಯಡಿಯೂರಪ್ಪನವರು ಮತ್ತೆ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ