ಶೀಥಿಲಾವಸ್ಥೆಯ ಮನೆಗಳಲ್ಲಿ ವಾಸಬೇಡ: ಗದಗ ಜಿಲ್ಲಾಧಿಕಾರಿ ವೈಶಾಲಿ ಎಂಎಲ್ ಎಚ್ಚರಿಕೆ

| Updated By: ಗಣಪತಿ ಶರ್ಮ

Updated on: Jul 25, 2023 | 10:39 PM

ಅತಿವೃಷ್ಟಿ ನಿರ್ವಹಣೆಗಾಗಿ ಗದಗ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆಸಲಾಗಿದ್ದು, ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನ-ಜಾನುವಾರುಗಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ.

ಶೀಥಿಲಾವಸ್ಥೆಯ ಮನೆಗಳಲ್ಲಿ ವಾಸಬೇಡ: ಗದಗ ಜಿಲ್ಲಾಧಿಕಾರಿ ವೈಶಾಲಿ ಎಂಎಲ್ ಎಚ್ಚರಿಕೆ
ಗದಗ ಜಿಲ್ಲಾಧಿಕಾರಿ ವೈಶಾಲಿ ಎಂಎಲ್
Follow us on

ಗದಗ: ಗದಗ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ (Gadag Rains) ನದಿ ಹಾಗೂ ಹಳ್ಳಗಳ ಪಾತ್ರದಲ್ಲಿ ವಾಸಿಸುವ ಜನರು ಸುರಕ್ಷಿತ ತಾಣಗಳಿಗೆ ಸ್ಥಳಾಂತರವಾಗಬೇಕು. ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ (Gadag DC) ವೈಶಾಲಿ ಎಂಎಲ್ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜನ-ಜಾನುವಾರುಗಳ ಜೀವ ಹಾನಿ ಆಗದಂತೆ ಮುಂಜಾಗ್ರತೆ ಕ್ರಮಗಳನ್ನು ವಹಿಸಬೇಕು. ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮಳೆ ಹಾಗೂ ಪ್ರವಾಹದಿಂದ ಜನ-ಜಾನುವಾರು ಜೀವ ಹಾನಿ ಆಗದಂತೆ ನಿಗಾವಹಿಸಬೇಕು ಎಂದು ತಿಳಿಸಿದ್ದಾರೆ.

ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಯಲ್ಲಿ ವಾಸಿಸುವ ಕುಟುಂಬಗಳನ್ನು ಗುರುತಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಕಾರ್ಯ ನಡೆಯಬೇಕು. ವಿದ್ಯುತ್ ಕಂಬಗಳಿಗೆ ಜಾನುವಾರುಗಳನ್ನು ಕಟ್ಟದಂತೆ ಹಾಗೂ ಜನರು ಸ್ಪರ್ಶಿಸದಂತೆ ಜಾಗೃತಿ ಮೂಡಿಸಬೇಕು. ಅಗತ್ಯ ಬಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಜನ ಜಾನುವಾರುಗಳನ್ನು ಸ್ಥಳಾಂತರಿಸಿ ಸಂಭವನೀಯ ಜೀವಹಾನಿ ತಡೆಗಟ್ಟಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಎಲ್ಲ ಚರಂಡಿ ಹಾಗೂ ರಾಜ ಕಾಲುವೆಗಳನ್ನು ಸ್ವಚ್ಛಗೊಳಿಸಲು ಸ್ಥಳಿಯ ಆಡಳಿತಕ್ಕೆ ಸೂಚಿಸಲಾಗಿದೆ. ಒಟ್ಟಾರೆಯಾಗಿ ಎಲ್ಲ ಅಧಿಕಾರಿ ಸಿಬ್ಬಂದಿಗಳೆಲ್ಲರೂ ನಿರಂತರವಾಗಿ ಸಮನ್ವಯ ಸಾಧಿಸುವದರ ಮೂಲಕ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಅತಿವೃಷ್ಟಿ ನಿರ್ವಹಣೆಗಾಗಿ ಸಿದ್ಧತೆ

ಜಿಲ್ಲೆಯಲ್ಲಿ ಪ್ರವಾಹ ಸಂಭವಿಸಬಹುದಾದ 25 ಗ್ರಾಮ ಪಂಚಾಯತ್​​​ಗಳಲ್ಲಿ ವಿಪತ್ತು ನಿರ್ವಹಣಾ ಯೋಜನೆ ತಯಾರಿಸಲಾಗಿದೆ. ಪ್ರವಾಹ ಪರಿಸ್ಥಿತಿ ನಿರ್ವಹಣೆಗಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ 56 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು ಪ್ರತಿ ಕೇಂದ್ರಕ್ಕೂ ಪ್ರತ್ಯೇಕ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಬೆಳೆ ಹಾಗೂ ಮನೆ ಹಾನಿ ಸಂಭವಿಸಿದ್ದಲ್ಲಿ ಸಮೀಕ್ಷೆಗಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.

ಗದಗ ಜಿಲ್ಲೆಯ ಮಳೆ ವಿವರ

ಜುಲೈ 1 ರಿಂದ ಈವರೆಗೆ ಜಿಲ್ಲೆಯಲ್ಲಿ 91 ಮೀ.ಮೀ. ಮಳೆಯಾಗಿದ್ದು ವಾಡಿಕೆ ಮಳೆ 51 ಮೀ.ಮೀ ಇದ್ದು ಶೇ. 79 ರಷ್ಟು ಹೆಚ್ಚಿಗೆ ಮಳೆಯಾಗಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ 24 ಮನೆಗಳು ಭಾಗಶಃ ಹಾನಿಗಿಡಾಗಿವೆ.

ಜಲಾಶಯ ಮಟ್ಟ

ನವೀಲು ತೀರ್ಥ ಜಲಾಶಯ 37.785 ಟಿ.ಎಂ.ಸಿ. ಸಾಮರ್ಥ್ಯ ಹೊಂದಿದ್ದು ಈವರೆಗೆ 9.314 ಟಿ.ಎಂ.ಸಿ. ನೀರು ಸಂಗ್ರವಾಗಿದೆ. ನೀರಿನ ಒಳ ಹರಿವು 21247 ಕ್ಯೂಸೆಕ್ಸ್ ಇದ್ದು ಹೊರ ಹರಿವು 194 ಕ್ಯೂಸೆಕ್ಸ್ ಇದೆ. ಭದ್ರಾ ಜಲಾಶಯ 71.535 ಟಿ.ಎಂ.ಸಿ. ಸಾಮರ್ಥ್ಯ ಹೊಂದಿದ್ದು ಈ ವರೆಗೆ 29.653 ಟಿ.ಎಂ.ಸಿ. ನೀರು ಸಂಗ್ರಹವಾಗಿದ್ದು ನೀರಿನ ಒಳ ಹರಿವು 39348 ಕ್ಯೂಸೆಕ್ಸ್ ಇದ್ದು ಹೊರ ಹರಿವು 167 ಕ್ಯೂಸೆಕ್ಸ್ ಇದೆ.

ಬಿತ್ತನೆ ಪ್ರದೇಶದ ವಿವರ

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 309810 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯ ಗುರಿ ಹೊಂದಲಾಗಿದ್ದು ಈ ಪೈಕಿ 101905 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಶೇ 32.89 ರಷ್ಟು ಬಿತ್ತನೆಯಾಗಿದೆ. ಅದೇ ರೀತಿ 60575 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಈ ಪೈಕಿ 14294 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಶೇ 23.60 ರಷ್ಟು ಗುರಿ ಸಾಧನೆಯಾಗಿದೆ.

ಗದಗ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ