ಗ್ರಾ. ಪಂ PDO ಗೆ ಶಾಸಕನಾಗುವ ಲಾಲಸೆ! ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ರೂ ವಂಚಿಸಿದ ಅಭಿನವ ಸ್ವಾಮೀಜಿ? ಗದಗ SP ಹೇಳಿದ್ದೇನು

ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯ್ತಿ ಪಿಡಿಒ ಸಂಜಯ್ ಚವಡಾಳ ಎಂಬಾತ ಇದೀಗ ಅಭಿನವ ಹಾಲಶ್ರೀ ವಿರುದ್ಧ ವಂಚನೆ ಆರೋಪ ಹೊರಿಸಿ, ಮುಂಡರಗಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ಕರ್ತವ್ಯ ಲೋಪದ ಆರೋಪದಲ್ಲಿ ಸಂಜಯ್‌ ಸದ್ಯ ಅಮಾನತುಗೊಂಡಿದ್ದಾರೆ. ಶಿರಹಟ್ಟಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಂತಾ ಬಿಂಬಿಸಿಕೊಂಡಿದ್ದ ಸಂಜಯ್, ಚುನಾವಣೆಗೆ ಮುಂಚಿತವಾಗಿ 1 ಕೋಟಿ ರೂಪಾಯಿ ಹಣವನ್ನ ಶ್ರೀಗಳಿಗೆ ನೀಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಗ್ರಾ. ಪಂ PDO ಗೆ ಶಾಸಕನಾಗುವ ಲಾಲಸೆ! ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ರೂ ವಂಚಿಸಿದ ಅಭಿನವ ಸ್ವಾಮೀಜಿ? ಗದಗ SP ಹೇಳಿದ್ದೇನು
ಶಾಸಕನಾಗುವ ಲಾಲಸೆಯಲ್ಲಿ ಕೋಟಿ ರೂ ವಂಚನೆಯಾಗಿದೆ ಎಂದು ಆರೋಪಿಸಿರುವ ಗ್ರಾಮ ಪಂಚಾಯ್ತಿ PDO ಸಂಜಯ್ ಚವಡಾಳ
Edited By: ಸಾಧು ಶ್ರೀನಾಥ್​

Updated on: Sep 22, 2023 | 4:47 PM

ಗದಗ, ಸೆಪ್ಟೆಂಬರ್​​ 22: ಅತ್ತ ಕಾಸಿಗಾಗಿ ಟಿಕೆಟ್​​ ಲಾಲಸೆ ತೋರಿ ಉದ್ಯಮಿಯಿಂದ ಐದಾರು ಕೋಟಿ ಪೀಕಿರುವ ಮಿಸ್​​ ಚೈತ್ರಾ ಕುಂದಾಪುರ ಟೀಮ್​ ಬಾನಗಢಿ ಹೊರಬೀಳುತ್ತಿದ್ದಂತೆ ಅದೇ ತಂಡದಲ್ಲಿದ್ದ ಅಭಿನವ ಹಾಲಶ್ರೀ ಸ್ವಾಮೀಜಿ (Halashree Abhinava Swamiji), ತನ್ನದೇ ಪ್ರತ್ಯೇಕ ಪ್ರಯತ್ನದಲ್ಲಿ ಮತ್ತೊಬ್ಬ ಮಿಕಕ್ಕೆ ಗಾಳ ಹಾಕಿ 1 ಕೋಟಿ ರೂಪಾಯಿ ವಂಚಿಸಿರುವ ಬಗ್ಗೆ ಆರೋಪ ಕೇಳಿಬಂದಿದೆ. ಹೌದು, ಎಸ್ ಸಿ ಮೀಸಲು ಕ್ಷೇತ್ರದಿಂದ (Shirahatti BJP ticket) ಸ್ಪರ್ಧಿಸುವ ಆಸಕ್ತಿ ಹೊಂದಿದ್ದ ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯ್ತಿ ಪಿಡಿಒ (Gram Panchayat PDO) ಸಂಜಯ್ ಚವಡಾಳ ಎಂಬಾತ ಇದೀಗ ಹಾಲಶ್ರೀ ವಿರುದ್ಧ ವಂಚನೆ ಆರೋಪ ಹೊರಿಸಿ, ಮುಂಡರಗಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ. ಅರುಂಧತಿ ಫೌಂಡೇಷನ್ ಹೆಸರಲ್ಲಿ ಸಾಮಾಜಿಕ‌ ಸೇವೆಯಲ್ಲಿ ತೊಡಗಿರುವ ಸಂಜಯ್ ಚವಡಾಳ, ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದವರು.

ಅಂದಹಾಗೆ, ಕರ್ತವ್ಯ ಲೋಪದ ಆರೋಪದಲ್ಲಿ ಸಂಜಯ್‌ ಸದ್ಯ ಅಮಾನತುಗೊಂಡಿದ್ದಾರೆ. ಶಿರಹಟ್ಟಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಂತಾ ಬಿಂಬಿಸಿಕೊಂಡಿದ್ದ ಸಂಜಯ್, ಚುನಾವಣೆಗೆ ಮುಂಚಿತವಾಗಿ 1 ಕೋಟಿ ರೂಪಾಯಿ ಹಣವನ್ನ ಶ್ರೀಗಳಿಗೆ ನೀಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೆಪ್ಟೆಂಬರ್ 19 ನೇ ತಾರೀಕು ಮಧ್ಯರಾತ್ರಿ ಠಾಣೆಗೆ ಬಂದು ಸಂಜಯ್ ದೂರು ನೀಡಿದ್ದಾರೆ.

ಇದನ್ನೂ ಓದಿ: ಅಸಲಿಗೆ ಸರ್ಕಾರಿ ಅತಿಥಿಗೃಹ ಕೆಕೆ ಗೆಸ್ಟ್ ಹೌಸ್​​ ನಲ್ಲಿ ಚೈತ್ರಾ ಮೇಡಂಗೆ ರೂಮ್​ ಸಿಕ್ಕಿದ್ದು ಹೇಗೆ? ಯಾರ, ಯಾವ ಪ್ರಭಾವ ಅಲ್ಲಿ ಕೆಲಸ ಮಾಡಿತ್ತು?

ಮೂರು ಹಂತದಲ್ಲಿ ಹಣ ನೀಡಿದ್ದಾಗಿ ದೂರಿನಲ್ಲಿ‌ ದಾಖಲಿಸಿರುವ ಬಗ್ಗೆ ಮಾಹಿತಿಯಿದೆ. ಸೂಕ್ತ ದಾಖಲೆ ಇಲ್ಲದ ಕಾರಣ ಮುಂಡರಗಿ ಪೊಲೀಸರು ಕೇವಲ ಎನ್ ಸಿ ದಾಖಲಿಸಿ ಕಳುಹಿಸಿದ್ದಾರೆ. ಸಸ್ಪೆಂಡ್​ ಆಗಿರುವ ಪಿಡಿಒ ಸಂಜಯ್ ಚವಡಾಳಗೆ ಸಮರ್ಪಕ ದಾಖಲೆ ತೆಗೆದುಕೊಂಡು ಬರುವಂತೆ ಮುಂಡರಗಿ ಪೊಲೀಸರು ಸೂಚಿಸಿದ್ದಾರೆ. ಪಿಟಿಷನ್ ದಾಖಲಿಸಿಕೊಂಡು, ಮುಂಡರಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇತ್ತ ಸಂಜಯ್‌‌, ದೂರು ನೀಡಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಗದಗ ಎಸ್​ಪಿ ಬಿ ಎಸ್ ನೇಮಗೌಡ ಹೇಳಿಕೆ:

ಅಸೆಂಬ್ಲಿ ಟಿಕೆಟ್​​ಗಾಗಿ ಹಣ ಪಡೆದು ವಂಚಿಸಿರುವ ಅಭಿನವ ಹಾಲಶ್ರೀ ವಿರುದ್ಧ ಮತ್ತೊಂದು ದೂರು ದಾಖಲಾದ ಹಿನ್ನೆಲೆಯಲ್ಲಿ ದೂರು ನೀಡಿದ ಪಿಡಿಓ ಸಂಜಯ ಚವಡಾಳಗೆ ಗದಗ ಪೊಲೀಸರು ನೋಟಿಸ್ ನೀಡಿದ್ದು, ಹಣ ನೀಡಿದ ಬಗ್ಗೆ ದಾಖಲೆ ಒದಗಿಸುವಂತೆ ಸೂಚಿಸಿದ್ದಾರೆ. ಈ ಸಂಬಂಧ ಗದಗದಲ್ಲಿ ಟಿವಿ 9 ಜೊತೆ ಮಾತನಾಡಿರುವ ಎಸ್​ಪಿ ಬಿ ಎಸ್ ನೇಮಗೌಡ ಹೀಗೆ ಹೇಳಿದ್ದಾರೆ:

ಸಂಜಯ ಚವಡಾಳ ನೀಡಿದ ದೂರಿನ ಅನ್ವಯ ವಿಚಾರಣೆ ಆರಂಭಿಸಿದ್ದೇವೆ. ಶಿರಹಟ್ಟಿ ಮೀಸಲು ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಕೇಳಿದ್ದ ಸಂಜಯ್‌, ವಿವಿಧ ಹಂತದಲ್ಲಿ ನಗದು ರೂಪದಲ್ಲಿ ಹಣವನ್ನ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಈಗಾಗಲೇ ಸಂಜಯ್ ಚವಡಾಳಗೆ ನೋಟಿಸ್ ಸಹ ಕೊಟ್ಟಿದೇವೆ. ಸಮಂಜಸ ದಾಖಲೆಗಳನ್ನ ಪೊಲೀಸರಿಗೆ ಸಲ್ಲಿಸುವಂತೆ ನೋಟಿಸ್ ಕೊಟ್ಟಿದೇವೆ. ಇದುವರೆವಿಗೂ ಯಾವುದೇ ದಾಖಲೆಯನ್ನು ದೂರುದಾರರು ನಮಗೆ ಕೊಟ್ಟಿಲ್ಲ. ದಾಖಲೆಗಳನ್ನ ಕೊಟ್ಟ ಮೇಲೆ ಮುಂದಿನ ತನಿಖೆ ಆರಂಭಿಸುತ್ತೇವೆ ಎಂದು ಎಸ್​ಪಿ ನೇಮಗೌಡ ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:35 pm, Fri, 22 September 23

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us