ಶಿರೂರು ಭೂಕುಸಿತಕ್ಕೆ ಪ್ರಮುಖ ಕಾರಣ ಪತ್ತೆ ಮಾಡಿದ ಭೂವೈಜ್ಞಾನಿಕ ಸಮೀಕ್ಷೆ

ಕೊನೆಗೂ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಸಂಭವಿಸಿದ ಭೂಕುಸಿತಕ್ಕೆ ಕಾರಣ ಏನೆಂಬುದನ್ನು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯ ಅಧ್ಯಯನ ಪತ್ತೆ ಮಾಡಿದೆ. ಆದರೆ, ಮಳೆಯ ಜತೆಗೆ ಮತ್ತೊಂದು ಪ್ರಮುಖ ಕಾರಣವನ್ನು ಅದು ವರದಿಯಲ್ಲಿ ಉಲ್ಲೇಖಿಸಿದೆ. ಅದೇನು? ಸಮೀಕ್ಷೆ ಸೂಚಿಸಿದ ಪರಿಹಾರವೇನು? ಇತ್ಯಾದಿ ಮಾಹಿತಿ ಇಲ್ಲಿದೆ.

ಶಿರೂರು ಭೂಕುಸಿತಕ್ಕೆ ಪ್ರಮುಖ ಕಾರಣ ಪತ್ತೆ ಮಾಡಿದ ಭೂವೈಜ್ಞಾನಿಕ ಸಮೀಕ್ಷೆ
ಶಿರೂರು ಭೂಕುಸಿತ ಸಂಭವಿಸಿದ ಪ್ರದೇಶ

Updated on: Jul 27, 2024 | 11:59 AM

ಬೆಂಗಳೂರು, ಜುಲೈ 27: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಸಂಭವಿಸಿದ ಭೂಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ಆದರೆ, ಇದೊಂದು ತಡೆಯಲಾಗದ ನೈಸರ್ಗಿಕ ವಿಕೋಪ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿಪಾದಿಸಿದೆ.

ಭೂಕುಸಿತದ ಬಗ್ಗೆ ಅಧ್ಯಯನ ನಡೆಸಿದ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಸರ್ಕಾರಕ್ಕೆ ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ. ಅದು ಕಾಮಗಾರಿಗಳ ವಿಧಾನದ ಬಗ್ಗೆ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಹೆಚ್ಚಿನ ಹಾನಿಯನ್ನು ತಡೆಯಲು ತಕ್ಷಣದ ಮತ್ತು ದೀರ್ಘಕಾಲೀನ ಕ್ರಮಗಳನ್ನು ಸೂಚಿಸಿದೆ.

ಕಾಮಗಾರಿಯಿಂದ ನೈಸರ್ಗಿಕ ಒಳಚರಂಡಿ ಹರಿವಿಗೆ ತೊಂದರೆಯಾಗಿದೆ. ಇಳಿಜಾರು ಪ್ರದೇಶ ಮತ್ತು ಎಡ ಪಾರ್ಶ್ವವು ರಚನಾತ್ಮಕವಾಗಿ ವಿರೂಪಗೊಂಡಿದೆ. ಇಳಿಜಾರು ಪ್ರದೇಶಗಳಲ್ಲಿ ಮಾನವ ಹಸ್ತಕ್ಷೇಪ ಎದ್ದು ಕಾಣಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂಬುದಾಗಿ ‘ಡೆಕ್ಕನ್ ಹೆರಾಲ್ಡ್’ ಪ್ರಕಟಿಸಿದೆ.

ಕಡಿಮೆ ಅವಧಿಯಲ್ಲಿ 503 ಮಿಮೀ ಮಳೆಯಾಗಿರುವುದು ಕೂಡ ಘಟನೆಗೆ ಕಾರಣ ಹೌದೆಂಬುದನ್ನು ಭೂವೈಜ್ಞಾನಿಕ ಸಮೀಕ್ಷೆ ವರದಿ ಒಪ್ಪಿಕೊಂಡಿದೆ. ಆದರೆ, ಇದರ ಹೊರತಾಗಿಯೂ ಮಳೆ ನೀರಿನ ಹರಿವಿನ ನೈಸರ್ಗಿಕ ತಡೆಗಳು ಮಾಯವಾಗಿರುವುದು ಮತ್ತು ಕಡಿದಾದ ಇಳಿಜಾರಿನ ಪ್ರದೇಶ ಸೃಷ್ಟಿಯಾಗಿರುವುದು ಭೂಕುಸಿತಕ್ಕೆ ಪ್ರಮುಖ ಕಾರಣವಾಗಿದೆ ಎಂದು ವರದಿ ಹೇಳಿದೆ.

ಈ ಮಧ್ಯೆ, ಕಾಮಗಾರಿಯ ಸಮಸ್ಯೆಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಭೂಕುಸಿತದ ಆತಂಕ: ಭೂವೈಜ್ಞಾನಿಕ ಸಮೀಕ್ಷೆಯಿಂದ ಆತಂಕಕಾರಿ ವರದಿ

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಕೆಲವು ಹೊಣೆಗಾರಿಕೆಯನ್ನು ವಹಿಸಿಕೊಳ್ಳಬೇಕಾದ ಅಗತ್ಯವಿದೆ. ಈಗ ಜನರ ಜೀವ ಕಳೆದುಕೊಂಡಾಗಿದೆ. ಈ ವಿಷಯವನ್ನು ಅನಗತ್ಯವಾಗಿ ರಾಜಕೀಯಗೊಳಿಸಲಾಗುತ್ತಿದೆ. ಇದು ಎನ್‌ಎಚ್‌ಎಐ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿಯಾಗಿರುವುದರಿಂದ, ನಾವು ಪ್ರಾದೇಶಿಕ ಪ್ರಾಧಿಕಾರದ ಬಳಿ ಈ ವಿಷಯವನ್ನು ಪ್ರಸ್ತಾಪಿಸಿದ್ದೇವೆ. ಸಮಸ್ಯೆ ಬಗೆಹರಿಯುವವರೆಗೆ ಆ ಬಗ್ಗೆ ಗಮನ ಸೆಳೆಯಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us