ಸರ್ಕಾರಿ ನೌಕರರ ಮನವೊಲಿಸಲು ಸರ್ಕಾರದ ಕಸರತ್ತು; ಸಂಜೆ ಮತ್ತೆ ಸಭೆ

ಸಂಜೆ ಮತ್ತೊಂದು ಸುತ್ತಿನ ಸಭೆ ನಡೆಸಲು ಸರ್ಕಾರ ಮುಂದಾಗಿದೆ. ಸಿಎಸ್​ ಷಡಕ್ಷರಿ ಜತೆ ವಂದಿತಾ ಶರ್ಮಾ ಅವರು ಸಂಜೆ ಸಭೆ ನಡೆಸಲಿದ್ದಾರೆ.

ಸರ್ಕಾರಿ ನೌಕರರ ಮನವೊಲಿಸಲು ಸರ್ಕಾರದ ಕಸರತ್ತು; ಸಂಜೆ ಮತ್ತೆ ಸಭೆ
ವಿಧಾನಸೌಧ

Updated on: Feb 28, 2023 | 4:37 PM

ಬೆಂಗಳೂರು: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಿಯೇ ಸಿದ್ಧ ಎಂದು ಪಟ್ಟು ಹಿಡಿದಿರುವ ಸರ್ಕಾರಿ ನೌಕರರ (government employees) ಮನವೊಲಿಸಲು ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್​ ಷಡಕ್ಷರಿ, ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಸೇರಿದಂತೆ ಹಲವು ನೌಕರ ಮುಖಂಡರ ಜತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಇಂದು (ಮಂಗಳವಾರ) ಮಧ್ಯಾಹ್ನ ನಡೆಸಿದ್ದ ಸಭೆ ವಿಫಲವಾಗಿದೆ. ಇದರ ಬೆನ್ನಲ್ಲೇ ಸಂಜೆ ಮತ್ತೊಂದು ಸುತ್ತಿನ ಸಭೆ ನಡೆಸಲು ಸರ್ಕಾರ ಮುಂದಾಗಿದೆ. ಸಿಎಸ್​ ಷಡಕ್ಷರಿ ಜತೆ ವಂದಿತಾ ಶರ್ಮಾ ಅವರು ಸಂಜೆ ಸಭೆ ನಡೆಸಲಿದ್ದಾರೆ.

ಈ ಮಧ್ಯೆ, ನಾಳೆ ಸರ್ಕಾರಿ ನೌಕರರು ಕೆಲಸ ಮಾಡುವುದಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳ ಮುಂದೆ ನಮ್ಮ ತಂಡ​ ಇರುತ್ತದೆ. ರಾಜ್ಯಾದ್ಯಂತ ನಮ್ಮ ತಂಡ ಕೆಲಸ ಮಾಡಲಿದೆ ಎಂದು ಸಿಎಸ್​ ಷಡಕ್ಷರಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ್ದ ಅವರು, ಮುಖ್ಯ ಕಾರ್ಯದರ್ಶಿಗಳ ಜತೆ ನಡೆದ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದರು. ಜತೆಗೆ, ಬೇಡಿಕೆಗಳ ಪರವಾಗಿ ಸರ್ಕಾರದ ಆದೇಶ ಬಂದರೆ ಮಾತ್ರ ಪ್ರತಿಭಟನೆ ವಾಪಸ್ ಪಡೆಯುತ್ತೇವೆ ಎಂಬುದಾಗಿ ಹೇಳಿದ್ದೆವು. ಸಮಯಾವಕಾಶ ನೀಡಿ ಅಂತ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೇಳಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಹೇಳಿದ್ದೇವೆ‌. ಐದು ರಾಜ್ಯಗಳ ಮಾದರಿಯಂತೆ ಎನ್​ಪಿಎಸ್ ರದ್ದು ಮಾಡಿ, ಒಪಿಎಸ್​ ಜಾರಿ ಮಾಡಿ ಎಂದು ಮನವಿ ಮಾಡಿದ್ದೆವು. ಅದರ ಬಗ್ಗೆ ಮುಖ್ಯಮಂತ್ರಿಗಳು ಮಾತೇ ಆಡುತ್ತಿಲ್ಲ. ಹೀಗಾಗಿ ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: Government Employees Strike: ಪಟ್ಟು ಬಿಡದ ಸರ್ಕಾರಿ ನೌಕರರು; ಸಂಧಾನ ಮಾತುಕತೆ ವಿಫಲ, ಮುಷ್ಕರ ಅಚಲ

ರಾಜ್ಯಾದ್ಯಂತ ಸುಮಾರು 10 ಲಕ್ಷ ಸರ್ಕಾರಿ ನೌಕರರು ಮಾರ್ಚ್​ 1ರಂದು ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಬಿಬಿಎಂಪಿ, ಬಿಡಿಎ ಸೇರಿದಂತೆ ಅನೇಕ ಇಲಾಖೆಗಳ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us