AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ ಪ್ರಕರಣದಲ್ಲಿ ರಾಜ್ಯಪಾಲರ ಮಧ್ಯಪ್ರವೇಶ, ವರದಿ ನೀಡುವಂತೆ ಮುಖ್ಯಕಾರ್ಯದರ್ಶಿಗೆ ಸೂಚನೆ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಸೈಟ್‌ ಹಗರಣದಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿದ್ದಾರೆ. ಮುಡಾ ಹಗರಣ ಸಂಬಂಧ ಸಂಪೂರ್ಣವಾಗಿ ವಿವರ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಳಿ ವರದಿ ಕೇಳಿದ್ದಾರೆ.

ಮುಡಾ ಹಗರಣ ಪ್ರಕರಣದಲ್ಲಿ ರಾಜ್ಯಪಾಲರ ಮಧ್ಯಪ್ರವೇಶ, ವರದಿ ನೀಡುವಂತೆ ಮುಖ್ಯಕಾರ್ಯದರ್ಶಿಗೆ ಸೂಚನೆ
ಮುಡಾ ಹಗರಣ
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ|

Updated on: Jul 22, 2024 | 8:44 PM

Share

ಬೆಂಗಳೂರು.ಮೈಸೂರು, (ಜುಲೈ 22): ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಜೊತೆಗೆ ಮುಡಾ ಹಗರಣ ಸಹ ಕರ್ನಾಟಕದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಸಂಬಂಧ ವಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಸಿಎಂ ಸಿದ್ದದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಡಾ ಹಗರಣದಲ್ಲಿ ಮಧ್ಯಪ್ರವೇಶ ಮಾಡಿದ್ದು, ಹಗರಣ ಸಂಬಂಧ ಸಂಪೂರ್ಣ ವಿವರ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್​ ಅವರಿಗೆ ವರದಿ ಕೇಳಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಬಹುಕೋಟಿ ಹಗರಣ ಆರೋಪ ಕೇಳಿಬಂದಿದೆ. 50:50 ಅನುಪಾತದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ನಿಯಮಬಾಹಿರವಾಗಿ ನಿವೇಶಗಳನ್ನು ಹಂಚಿಕೆ ಮಾಡಿದೆ ಎಂದು ತಿಳಿದುಬಂದಿದೆ. ಈ ಹಗರಣದಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬಸ್ಥರ ಹೆಸರು ಕೇಳಿಬಂದಿದೆ. ಹೀಗಾಗಿ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಹಗರಣದಲ್ಲಿ ಸಿಎಂ ಕುಟುಂಬದ ಹೆಸರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂಪಾಯಿ. ಬೆಲೆಬಾಳುವ 14 ನಿವೇಶನ​ಗಳನ್ನು ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ ಹಂಚಿಕೆ ಮಾಡಲಾಗಿದೆ. ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿದ್ದು ಕೇವಲ ಎರಡು ಜಮೀನು ಮಾತ್ರ. ಆದರೆ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್‌ ಗಂಭೀರ ಆರೋಪ ಮಾಡುತ್ತಿದೆ.

ಈ ಆರೋಪಕ್ಕೆ ಸಿದ್ದರಾಮಯ್ಯ, ನಿಯಮದ ಪ್ರಕಾರವೇ ಎಲ್ಲರಿಗೂ ಹಂಚಿಕೆಯಾಗುವಂತೆ ಮುಡಾದಿಂದ ಸೈಟ್‌ ಹಂಚಿಕೆಯಾಗಿದೆ. ನಾವು ಯಾವುದೇ ತಪ್ಪು ಮಾಡಿಲ್ಲ. ನಾವು ಅಲ್ಲೇ ಸೈಟ್‌ ನೀಡಬೇಕೆಂದು ಕೇಳಿಕೊಂಡಿಲ್ಲ. ಮುಡಾದವರು ಹಂಚಿಕೆ ಮಾಡಿದ್ದಾರೆ. ಯಾವುದೇ ಅಕ್ರಮ ನಡೆಸಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಕಾಂಗ್ರೆಸ್​ ನಾಯಕರ ಸಮರ್ಥನೆ

2004ರಲ್ಲಿ ಕೆಸರೆ ಗ್ರಾಮದ ಸರ್ವೆ ನಂ.464ರಲ್ಲಿ 3.16 ಎಕರೆ, ಸರ್ವೆ ನಂ.464ರಲ್ಲಿ 3.16 ಎಕರೆ ಮಲ್ಲಿಕಾರ್ಜುನ್​ ಎಂಬುವರಿಗೆ ಸೇರಿದೆ. 1988ರಲ್ಲಿ ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಪಾರ್ವತಿ ಅವರಿಗೆ ಜಾಗವನ್ನು ದಾನ ಪತ್ರ ಮೂಲಕ ಕೊಟ್ಟಿದ್ದಾರೆ. 2007ರಲ್ಲಿ 50:50 ಅನುಪಾತದಲ್ಲಿ ಕಾನೂನಿನ ಮೂಲಕ ಪರಿಹಾರವಾಗಿ 71,457 ಚದರ ಅಡಿ ಜಾಗ ಕೊಡಬೇಕಿತ್ತು. ಆದರೆ, 38,284 ಚದರ ಅಡಿ ಜಾಗ ಕೊಟ್ಟಿದ್ದಾರೆ. ವಿಜಯನಗರ ಬಡಾವಣೆಯಲ್ಲಿ 14 ನಿವೇಶನ ಕೊಟ್ಟಿದ್ದಾರೆ. ಇದರಿಂದ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಷ್ಟವೇ ಆಗಿದೆ. ಸಿಎಂ ಪತ್ನಿ ಪಾರ್ವತಿ ಅವರಿಗೆ 2021ರಲ್ಲಿ ಜಾಗ ಕೊಡಲಾಗಿದೆ. ಆಗ ಬಿಜೆಪಿ ಸರ್ಕಾರವೇ ಇತ್ತು, ಮುಡಾ ಪುಕ್ಕಟೆಯಾಗಿ ಕೊಟ್ಟಿಲ್ಲ ಎಂದು ಕಾಂಗ್ರೆಸ್ ನಾಯಕರ ಸಮರ್ಥನೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ