ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರ ಪ್ರವಾಸ ಕಥನ!

ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕೆಲ ಸದಸ್ಯರು ಪಂಚಾಯತಿ ಚುನಾವಣೆಯಲ್ಲಿ ತಮ್ಮ ಜೊತೆ ಗೆದ್ದಿರುವ ಕೆಲವರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರ ಪ್ರವಾಸ ಕಥನ!
ಗ್ರಾಮ ಪಂಚಾಯತಿ ಕಾರ್ಯಾಲಯ (ಪ್ರಾತಿನಿಧಿಕ ಚಿತ್ರ)
Edited By:

Updated on: Apr 06, 2022 | 8:54 PM

ಕಲಬುರಗಿ: ಗ್ರಾಮ ಪಂಚಾಯತಿ ಚುನಾವಣೆ ಮುಗಿದಿದ್ದು, ಇದೀಗ ಚುನಾವಣೆಯಲ್ಲಿ ಆಯ್ಕೆಯಾದವರು ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಇನ್ನು ಕೂಡ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಾರಂಭವಾಗಿಲ್ಲ. ಆದರೂ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಕೆಲ ಸದಸ್ಯರು ಪಂಚಾಯತಿ ಚುನಾವಣೆಯಲ್ಲಿ ತಮ್ಮ ಜೊತೆ ಗೆದ್ದಿರುವ ಕೆಲ ಸದಸ್ಯರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ಆ ಮೂಲಕ ತಾವು ಕೂಡ ರಾಜ್ಯ ಮತ್ತು ಕೇಂದ್ರದ ರಾಜಕಾರಣಿಗಳಿಗಿಂತ ಕಡಿಮೆ ಇಲ್ಲ ಅನ್ನುವುದನ್ನು ತೋರಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯರು ಜಿದ್ದಿಗೆ ಬಿದ್ದವರಂತೆ ತಮ್ಮ ಬೆಂಬಲಿಗರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ 242 ಗ್ರಾಮ ಪಂಚಾಯತಿಗಳಿಗೆ ಕಳೆದ ಡಿಸೆಂಬರ್​ನಲ್ಲಿ ಮತದಾನ ನಡೆದಿತ್ತು. ಇಂದಿನಿಂದ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗಿದಿಗೊಳಿಸುವ ಕೆಲಸವನ್ನು ಜಿಲ್ಲಾಧಿಕಾರಿಗಳು ಮಾಡುತ್ತಿದ್ದಾರೆ. ಯಾವ ಗ್ರಾಮ ಪಂಚಾಯತಿಯ ಅಧ್ಯಕ್ಷ್ಯ ಮತ್ತು ಉಪಾಧ್ಯಕ್ಷ ಸ್ಥಾನ, ಯಾವ ವರ್ಗಕ್ಕೆ ಮೀಸಲಾಗಿದೆ ಅನ್ನುವುದನ್ನು ನಿಗದಿಪಡಿಸುತ್ತಿದ್ದಾರೆ. ಒಂದಡೆ ಮೀಸಲಾತಿ ನಿಗದಿ ಕಾರ್ಯ ಪ್ರಾರಂಭವಾಗಿದ್ದರೆ, ಮತ್ತೊಂದಡೆ ವಾರದ ಹಿಂದೆಯೇ ಅನೇಕ ಗ್ರಾಮಗಳಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತಿ ಸದಸ್ಯರು ಪ್ರವಾಸಕ್ಕೆ ಹೋಗಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ ಕೆಲ ಸದಸ್ಯರು, ಬಹುಮತಕ್ಕೆ ಬೇಕಾಗುವಷ್ಟು ಸದಸ್ಯರನ್ನು ವಾರದ ಹಿಂದೇಯೇ ಪ್ರವಾಸದ ಹೆಸರಲ್ಲಿ ದೇವಸ್ಥಾನಗಳಿಗೆ, ಅನೇಕ ಪ್ರೇಕ್ಷಣಿಯ ಸ್ಥಳಗಳಿಗೆ ಕರೆದುಕೊಂಡು ಹೋಗಿದ್ದಾರೆ.

ಎದುರಾಳಿಗಳ ಕೈಗೆ ತಮ್ಮ ಬೆಂಬಲಿಗರು ಸಿಗದಂತೆ ಮಾಡುವ ಉದ್ದೇಶದಿಂದ ಪ್ರವಾಸ ಭಾಗ್ಯವನ್ನು ಕಲ್ಪಿಸಲಾಗಿದೆ. ಆಪರೇಷನ್ ಕಮಲ ನಡೆಸಿದ್ದ ಬಿಜೆಪಿ ನಾಯಕರು, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಮುಂಬೈನ ಹೋಟೆಲ್​ನಲ್ಲಿಟ್ಟು ಅವರಿಗೆ ಸತ್ಕರಿಸಿದಂತೆ ಇದೀಗ ಗ್ರಾಮ ಪಂಚಾಯತಿ ಸದಸ್ಯರನ್ನು ಕೂಡಾ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟವರು ನೋಡಿಕೊಳ್ಳುತ್ತಿದ್ದಾರೆ. ಕೆಲ ಪ್ರೇಕ್ಷಣಿಯ ಸ್ಥಳಗಳಿಗೆ ಹೋಗಿ, ಅಲ್ಲಿಯೇ ಬೀಡು ಬಿಟ್ಟಿದ್ದಾರೆ. ಯಾವಾಗ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತದೆಯೋ ಆವಾಗ ಅವರೆಲ್ಲರನ್ನು ಕೂಡಾ ಕರೆದುಕೊಂಡು ಬರುವ ಯೋಚನೆಯಲ್ಲಿದ್ದಾರೆ. ಮೀಸಲಾತಿ ತಮ್ಮ ಪರವಾಗಿ ಬಂದರೆ ತಾವೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗುವದು. ಮೀಸಲಾತಿ ಬೇರೆ ವರ್ಗಕ್ಕೆ ಬಂದರೆ, ತಮ್ಮ ಬೆಂಬಲಿಗರನ್ನು ಆ ಸ್ಥಾನದಲ್ಲಿ ಕೂರಿಸುವ ಕೆಲಸ ಮಾಡುತ್ತಿದ್ದಾರೆ.

ಗ್ರಾಮೀಣ ಭಾಗದಲ್ಲಿ ಕೂಡಾ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಜಿದ್ದಾಜಿದ್ದಿ ಪ್ರಾರಂಭವಾಗಿದ್ದು, ಕಾಂಗ್ರೆಸ್ ಬೆಂಬಲಿಗರಿಗೆ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆ ಹೋಗದಂತೆ ಬಿಜೆಪಿ ಬೆಂಬಲಿಗರು ತಡೆಯುವ ಕೆಲಸ ಪ್ರಾರಂಭಿಸಿದ್ದಾರೆ. ಇತ್ತ ಬಿಜೆಪಿ ಬೆಂಬಲಿಗರು ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ತಪ್ಪಿಸಲು ಕಾಂಗ್ರೆಸ್ ಬೆಂಬಲಿಗರು ಕಸರತ್ತು ಪ್ರಾರಂಭಿಸಿದ್ದಾರೆ.

ಹಳ್ಳಿ ನಾಯಕರಿಗೆ ರಾಜಕೀಯ ನಾಯಕರ ಸಾಥ್
ಗ್ರಾಮ ಪಂಚಾಯತಿಯಲ್ಲಿ ತಮ್ಮ ಬೆಂಬಲಿಗರಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆ ಕೊಡಿಸಲು ಶಾಸಕರು ಮತ್ತು ಮಾಜಿ ಶಾಸಕರು ಕಸರತ್ತು ನಡೆಸುತ್ತಿದ್ದಾರೆ. ಆ ಮೂಲಕ ತಮ್ಮ ಬೆಂಬಲಿಗರಿಗೆ ಹುದ್ದೆ ಕೊಡಿಸಿದರೆ, ಮುಂದೆ ತಮಗೆ ಚುನಾವಣೆಯಲ್ಲಿ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ. ರಾಜಕೀಯ ನಾಯಕರು, ಪಂಚಾಯತಿ ಸದಸ್ಯರ ಬೆನ್ನಿಗೆ ನಿಂತಿದ್ದಾರೆ. ಹೀಗಾಗಿ ಅನೇಕ ಗ್ರಾಮ ಪಂಚಾಯತಿ ಸದಸ್ಯರನ್ನು ಅವರೇ ವಿಶ್ವಾಸಕ್ಕೆ ತಗೆದುಕೊಳ್ಳುವ ಕೆಲಸವನ್ನು ಪ್ರಾರಂಭಿಸಿದ್ದಾರೆ. ತಮ್ಮ ಬೆಂಬಲಿಗನನ್ನು ಬೆಂಬಲಿಸಿ, ಮುಂದೆ ನಿಮಗೆ ಬೇಕಾದ ಕೆಲಸವನ್ನು ಮಾಡಿಕೊಡುತ್ತೇವೆ ಎಂದು ಭರವಸೆ ನೀಡಲು ಪ್ರಾರಂಭಿಸಿದ್ದಾರೆ.

ಹಳ್ಳಿ ರಾಜಕೀಯ ಕೂಡಾ ಇದೀಗ ಹೆಚ್ಚಿನ ರಂಗು ಪಡೆದಿದೆ. ರಾಜ್ಯ ಮತ್ತು ಕೇಂದ್ರ ರಾಜಕೀಯಕ್ಕಿಂತ ಕಡಿಮೆ ಇಲ್ಲದಷ್ಟು ರೀತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆ ಪಡೆಯಲು ಕೆಲಸ ಪ್ರಾರಂಭಿಸಿದ್ದಾರೆ. ಹೀಗಾಗಿ ತಮಗೆ ಬೇಕಾದವರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರವಾಸದ ಖರ್ಚು ವೆಚ್ಚವನ್ನು ತಾವೇ ಭರಿಸುತ್ತಿದ್ದಾರೆ. ಅನೇಕ ಸದಸ್ಯರು ಪ್ರವಾಸಕ್ಕೆ ಹೋಗಿದ್ದು, ದೇವರ ದರ್ಶನ ಮಾಡುತ್ತಾ, ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ, ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಾರೆ.

ಗ್ರಾಮ ಪಂಚಾಯತಿ ಕಾರ್ಯಾಲಯ (ಪ್ರಾತಿನಿಧಿಕ ಚಿತ್ರ)

ಗ್ರಾಮ ಪಂಚಾಯತಿ ಕಾರ್ಯಾಲಯ (ಪ್ರಾತಿನಿಧಿಕ ಚಿತ್ರ)

ನೂತನ ಗ್ರಾಮ ಪಂಚಾಯತಿ ಸದಸ್ಯನ ಅಪಹರಣ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕಾಗಿ ಕೃತ್ಯವೆಸಗಿರುವ ಶಂಕೆ

Published On - 12:03 pm, Sun, 17 January 21

Web contact

TV9 Kannada

Read More
Follow Us