ಸರ್ಕಾರಕ್ಕೆ ಹಿನ್ನಡೆ: ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ರಾಜ್ಯಪಾಲರು
ಕರ್ನಾಟಕ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಇದರ ಬೆನ್ನಲ್ಲೇ ಇದೀಗ ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಅಂಕಿತ ಹಾಕದೇ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧದ ನಡುವೆ ಬಿಲ್ ಪಾಸ್ ಮಾಡಿಕೊಂಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಬೆಂಗಳೂರು, (ಮಾರ್ಚ್ 26): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು (Greater Bengaluru Governance Bill 2024) ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. BBMP ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧದ ನಡುವೆ ರಾಜ್ಯ ಸರ್ಕಾರ ಬಿಲ್ ಪಾಸ್ ಮಾಡಿಕೊಂಡಿತ್ತು. ಆದ್ರೆ, ಇದೀಗ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ (governor thawar chand gehlot) ಅವರು ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಾಪಸ್ ಕಳುಹಿಸಿದ್ದಾರೆ. ಇದರಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಅಲ್ಲದೇ ರಾಜಭವನ ಮತ್ತು ಸರಕಾರದ ನಡುವಿನ ಸಂಘರ್ಷದ ಮತ್ತೊಂದು ಅಧ್ಯಾಯ ಆರಂಭವಾದಂತಾಗಿದೆ.
ಬಿಬಿಎಂಪಿ ವಿಭಜನೆ ಮಾಡಿ ಬೆಂಗಳೂರು ನಗರ ವಿಸ್ತೀರ್ಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಜಾರಿಗೆ ಮುಂದಾಗಿತ್ತು. ಬಜೆಟ್ ಅಧಿವೇಶನದಲ್ಲಿ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಈ ಮಸೂದೆ ಅಂಗೀಕಾರವಾಗಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಸದ್ಯ ರಾಜ್ಯಪಾಲರು ಅಂಕಿತ ಹಾಕಲು ನಿರಾಕರಿಸಿ ಬಿಲ್ ವಾಪಸ್ ಕಳುಹಿಸಿದ್ದಾರೆ. ಹೀಗಾಗಿ ವಿಪಕ್ಷಗಳ ಮನವಿಯನ್ನು ರಾಜ್ಯಪಾಲರು ಪುರಸ್ಕರಿಸಿದ್ದಾರೆ.
ಇದನ್ನೂ ಓದಿ: ರಾಮನಗರದ ಈ ಪ್ರದೇಶಗಳ ಜನರೇ ಗಮನಿಸಿ: ಭೂ ಸ್ವಾಧೀನ ಅಧಿಸೂಚನೆ ಹೊರಡಿಸಿದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ
ವಿಪಕ್ಷಗಳ ವಿರೋಧದ ನಡುವೆಯೂ ವಿಧಾನಸಭೆ ಹಾಗೂ ವಿಧಾನಪತಿಷತ್ನಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪಾಸ್ ಮಾಡಿಕೊಂಡು ರಾಜ್ಯಪಾಲರಿಗೆ ಅಂಕಿತಕ್ಕೆ ಕಳುಹಿಸಿಲಾಗಿತ್ತು. ಮತ್ತೊಂದೆಡೆ ಯಾವುದೇ ಕಾರಣಕ್ಕೂ ಗ್ರೇಟರ್ ಬೆಂಗಳೂರು ಬಿಲ್ಗೆ ಒಪ್ಪಿಗೆ ನೀಡಬೇಡಿ ಎಂದು ಬಿಜೆಪಿ ಹಾಗೂ ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯಪಾಲರು ಗ್ರೇಟರ್ ಬೆಂಗಳೂರು ಮಸೂಧೆಯನ್ನು ವಾಪಸ್ ಕಳುಹಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ವಿಪಕ್ಷಗಳು ಮೇಲುಗೈ ಸಾಧಿಸಿವೆ.
ಬೆಂಗಳೂರು ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿದ್ದು. ಈ ಅಭಿವೃದ್ಧಿಗೆ ಅನುಗುಣವಾಗಿ ಬೆಂಗಳೂರಿನ ಆಡಳಿತವನ್ನು ವಿಕೇಂದ್ರೀಕರಣ ಮಾಡಬೇಕು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಂಗಡಣೆ ಮಾಡಬೇಕು ಎನ್ನುವು ವಿಚಾರವು ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಲ್ಲೇ ಇದೆ. ಇದೀಗ ಬೆಂಗಳೂರನ್ನು ಏಳು ಭಾಗವಾಗಿ ಅಥವಾ ಇರುವ ಒಂದು ಪಾಲಿಕೆಯನ್ನು 7 ಪಾಲಿಕೆಗಳನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ. ಈ ಬೆಳವಣಿಗೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಅನ್ನು ಸರ್ಕಾರ ಪರಿಚಯಿಸಿದೆ. ಇದರ ಅಡಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಲು ಮುಂದಾಗಿದ್ದು, ಬೆಂಗಳೂರಿಗೆ ಮೂರು ಹಂತದ ಆಡಳಿತ ನೀಡುವುದು ಇದರ ಉದ್ದೇಶವಾಗಿದೆ.
ಇನ್ನು ಗ್ರೇಟರ್ ಬೆಂಗಳೂರು ಸಮಿತಿಯು ಮಂಡನೆ ಮಾಡಿರುವ ವರದಿಯಲ್ಲಿ 7 ಪಾಲಿಕೆಗಳನ್ನು ರಚನೆ ಮಾಡುವ ಶಿಫಾರಸ್ಸು ಮಾಡಲಾಗಿದೆ. ಅಲ್ಲದೆ ಈ ರೀತಿ ಪಾಲಿಕೆಗಳನ್ನು ರಚನೆ ಮಾಡುವ ಸಂದರ್ಭದಲ್ಲಿ ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಹ ಸಲ್ಲಿಸಲಾಗಿದೆ. ಅದರಲ್ಲಿ ಮುಖ್ಯವಾಗಿ 7 ಪಾಲಿಕೆಗಳಿಗೆ ಪ್ರತಿ ಪಾಲಿಕೆಗೂ 100ರಿಂದ 125 ವಾರ್ಡ್ಗಳನ್ನು ರಚನೆ ಮಾಡಬೇಕು ಎನ್ನುವ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಆದರೆ, ಇದೀಗ ಗ್ರೇಟರ್ ಬೆಂಗಳೂರು ಬಿಲ್ಗೆ ಅಂಕಿತ ಹಾಕದೇ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:51 pm, Wed, 26 March 25