ಅರ್ಜುನನಿಗೆ ಗುಂಡೇಟು ಬಿದ್ದಿಲ್ಲ: ಹಾಗಾದ್ರೆ ಅಂಬಾರಿ ಆನೆ ಮೃತಪಟ್ಟಿದ್ದು ಹೇಗೆ? ಸಾವಿನ ರಹಸ್ಯ ಬಿಚ್ಚಿಟ್ಟ ವೈದ್ಯ

ಹಾಸನ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಸಾವಿನ ಬಳಿಕ ಹರಡಿದ್ದ ಹಲವು ವದಂತಿಗಳಿಗೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ವನ್ಯಜೀವಿ ವೈದ್ಯ ಡಾ. ರಮೇಶ್​ ಸ್ಪಷ್ಟನೆ ನೀಡಿದ್ದಾರೆ. ಅರ್ಜುನನ ಕಾಲಿಗೆ ಯಾವುದೇ ಗುಂಡೇಟು ಬಿದ್ದಿಲ್ಲ. ಕಾಡಾನೆ ದಾಳಿಯಿಂದ ಅರ್ಜುನ ಮೃತಪಟ್ಟಿದೆ ಎಂದು ಹೇಳಿದ್ದಾರೆ.

ಅರ್ಜುನನಿಗೆ ಗುಂಡೇಟು ಬಿದ್ದಿಲ್ಲ: ಹಾಗಾದ್ರೆ ಅಂಬಾರಿ ಆನೆ ಮೃತಪಟ್ಟಿದ್ದು ಹೇಗೆ? ಸಾವಿನ ರಹಸ್ಯ ಬಿಚ್ಚಿಟ್ಟ ವೈದ್ಯ
ಮೃತ ಆನೆ ಅರ್ಜುನ, ಡಾ. ರಮೇಶ್​
Edited By:

Updated on: Dec 10, 2023 | 3:53 PM

ಹಾಸನ, ಡಿಸೆಂಬರ್​​ 10: ಅರ್ಜುನನ (Arjuna) ಕಾಲಿಗೆ ಯಾವುದೇ ಗುಂಡೇಟು ಬಿದ್ದಿಲ್ಲ. ನಮ್ಮ ಕಾರ್ಯಾಚರಣೆ ತಂಡದ ಬಳಿ ಬಂದೂಕು ಇರಲಿಲ್ಲ. ನಮ್ಮ ಸಿಬ್ಬಂದಿ ಬಳಿ ಇದ್ದದ್ದು ಡಬಲ್ ಬ್ಯಾರೆಲ್ ಚರ್ರೆ ಕೋವಿ ಮಾತ್ರ ಅದರಲ್ಲಿ ಆನೆ ಸಾಯುವುದಿಲ್ಲ ಎಂದು ವನ್ಯಜೀವಿ ವೈದ್ಯ ರಮೇಶ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾರ್ಯಾಚರಣೆ ವೇಳೆ ಯಾವುದೇ ಲೋಪ ಆಗಿಲ್ಲ. ಕಾಡಾನೆ ದಾಳಿಯಿಂದ ಅರ್ಜುನ ಮೃತಪಟ್ಟಿದೆ. ಬಹುಶಃ ಮಾವುತ ವಿನು ಅರ್ಜುನನ ಮೇಲೆ ಇದ್ದಿದ್ದರೆ ಹೋರಾಟ ಮಾಡಬಹುದಿತ್ತಾ ಅಥವಾ ಆಗಲು ಹೀಗೆ ಆಗುತ್ತಿತ್ತ ಎಂದು ಹೇಳುವುದು ಕಷ್ಟ ಎಂದಿದ್ದಾರೆ. ಆ ಮೂಲಕ ಅರ್ಜುನನ ಸಾವಿನ ಬಗ್ಗೆ ಹರಡಿದ್ದ ಹಲವು ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಕಾರ್ಯಾಚರಣೆಯ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ವೈದ್ಯ ರಮೇಶ್  

ಕಾರ್ಯಾಚರಣೆ ದಿನ ಡಿಸೆಂಬರ್ 4 ರಂದು ನಾನು ಆನೆ ಮಾವುತ ವಿನು, ಹಾಗೂ ಕರ್ನಾಟಕ ಭೀಮ ಆನೆ ಮಾವುತ ಗುಂಡ ಅರ್ಜುನನ ಮೇಲೆ ಕುಳಿತ್ತಿದ್ದೆವು. ಪ್ರಶಾಂತ್ ಆನೆ ಮೇಲೆ ಕೊಡಗಿನ ಡಿಆರ್​ಎಫ್​ಓ ರಂಜನ್ ಇದ್ದರು. ವಿಕ್ರಾಂತ್ ಹೆಸರಿನ ಒಂದು ಹಾಗೂ ಮತ್ತೊಂದು ಸಲಗ ಸೇರಿ ಎರಡು ಆನೆಗಳ ಸೆರೆಗೆ ಟಾರ್ಗೆಟ್ ಫಿಕ್ಸ್ ಆಗಿತ್ತು ಎಂದು ಕಾರ್ಯಾಚರಣೆಯ ಇಂಚಿಂಚೂ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ:  ಅರ್ಜುನ ಆನೆ ಸಾವು: ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ – ಈಶ್ವರ ಖಂಡ್ರೆ

ವಿಕ್ರಾಂತ್ ಆನೆ ಎದುರಾದರೆ ನಾನು ಹಾಗೂ ಇನ್ನೊಂದು ಆನೆ ಎದುರಾದರೆ ರಂಜನ್ ಅರವಳಿಕೆ ಮದ್ದು ನೀಡುವ ನಿರ್ಧಾರ ಆಗಿತ್ತು. ಅದರಂತೆ ನಾವು ಕಾಡಿನೊಳಗೆ ಎಂಟ್ರಿ ಆದಾಗ ಒಂದು ಆನೆ ಗುಂಪು ಕಾಣಿಸಿತು. ಅದರಲ್ಲಿ ವಿಕ್ರಾಂತ್ ಆನೆ ಇರಲಿಲ್ಲ. ನಾವು 400 ಮೀಟರ್ ಮುಂದೆ ಹೋದಾಗ ಒಂದು ಆನೆ ಕಾಣಿಸಿತು. ಕಾಡಿನಲ್ಲಿ ಲಂಟಾನ ಹೆಚ್ಚಾಗಿ ಬೆಳೆದಿದ್ದರಿಂದ ಆನೆಯ ಮುಖ ಕಾಣಲಿಲ್ಲ.

ಆನೆಯ ಹಿಂಬದಿಯ ಸ್ವಲ್ಪ ಭಾಗ ಕಾಣುತ್ತಿದ್ದಾಗ ಅದು ಸಣ್ಣ ಆನೆ ಎಂದು ಭಾವಿಸಿದೆವು. ಅಲ್ಲಿರುವ ಆನೆ ನಮ್ಮ ಟಾರ್ಗೆಟ್ ಆನೆಯಾ ಅಥವಾ ಸಲಗವೇ ಅಥವಾ ಹೆಣ್ಣಾನೆಯಾ ಎನ್ನೋದು ಖಾತ್ರಿ ಆಗಬೇಕಿತ್ತು. ನಾವು ಮೇಲಿದ್ದವು ಆ ಒಂಟಿ ಸಲಗ ಕೆಳಗೆ ಇತ್ತು. ಇದು ದೊಡ್ಡ ಆನೆ ಎಂದು ಖಾತ್ರಿ ಆದಾಗ ಆನೆ ಸುತ್ತುವರೆದೆವು. ಇದನ್ನು ಡಾಟ್ ಮಾಡುವ ಬಗ್ಗೆ ರಂಜನ್ ಮತ್ತು ನಾವು ಮಾತಾಡಿಕೊಂಡೆವು.

ಏಕಾಏಕಿ ದಾಳಿ

ನಾನು ಡಾಟ್ ಮಾಡುತ್ತೇನೆ ಎಂದು ಹೇಳಿ ನಾನು ನನ್ನ ಅರವಳಿಕೆ ಸಜ್ಜು ಮಾಡಿಕೊಂಡೆ. ಪ್ರಸರ್ ಫಿಕ್ಸ್ ಮಾಡಿ ಡಾಟ್ ಮಾಡಲು ರೆಡಿಯಾಗಿದ್ದ ವೇಳೆಗೆ ಆ ಆನೆ ಏಕಾಏಕಿ ದಾಳಿ ಮಾಡಿತು. ಅದು ಮುಖವನ್ನು ಮುಂದೆ ಮಾಡಿ ಬಂದಿದ್ದರಿಂದ ನಾನು ಮುಖಕ್ಕೆ ಡಾಟ್ ಮಾಡಲು ಆಗಲಿಲ್ಲ. ಯಾವುದೇ ಆನೆಯ ಮುಖದ ಭಾಗಕ್ಕೆ ಹುಟ್ಟೆಗೆ ಇಂಜೆಕ್ಷನ್ ಹೊಡೆಯುವ ಹಾಗಿಲ್ಲ. ಆಕಸ್ಮಾತ್ ಹಾಗೆ ಇಂಜೆಕ್ಟ್ ಆದರೆ ಆನೆ ಜೀವಕ್ಕೆ ಅಪಾಯ ಇದೆ ಹಾಗಾಗಿ ಆಗ ಡಾಟ್ ಮಾಡಲು ಆಗಲಿಲ್ಲ. ಏಕಾಏಕಿ ಅರ್ಜುನನ ಮೇಲೆ ಆನೆ ದಾಳಿ ಮಾಡಿದಾಗ ನಾವೆಲ್ಲ ಕೆಳಗೆ ಬೀಳುವಂತೆ ಆದೆವು. ಈ ವೇಳೆಯಲ್ಲಿ ನನ್ನ ಕೈಯಲ್ಲಿದ್ದ ಅರವಳಿಕೆ ಟ್ರಿಗರ್ ಆಗಿ ಫೈರ್ ಆಗಿದೆ. ಅದು ಆಕಾಶದ ಕಡೆಗೆ ಹಾರಿ ಕೆಳಗೆ ಬೀಳುವಾಗ ಪ್ರಶಾಂತ್ ಆನೆ ಕಾಲಿಗೆ ಬಿದ್ದಿದೆ. ಅದು ನನಗೆ ಮಾಹಿತಿ ಇರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅರ್ಜುನನ ಸಮಾಧಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಯದುವೀರ್ ದಂಪತಿ

ಪ್ರಶಾಂತ್​ ಆನೆಗೆ ಅರವಳಿಕೆ ಮದ್ದು ಬಿದ್ದ ಬಗ್ಗೆ ಗೊತ್ತಾದ ಕೂಡಲೆ ನಾನು ಓಡಿದೆ. ಅಷ್ಟರಲ್ಲಿ ಅರ್ಜುನ ಕಾಡಾನೆ ಜೊತೆ ಫೈಟ್ ಮಾಡಿ ಓಡಿಸಿತು. ನಾವು ಪ್ರಶಾಂತ್ ಆನೆ ಬಳಿ ಬಂದೆವು. ಅಲ್ಲಿ ರಿವರ್ಸ್ ಇಂಜೆಕ್ಷನ್ ಕೊಡುವ ವೇಳೆಗೆ ಕಾಡಾನೆ ಮತ್ತೆ ಬಂದು ಜಗಳಕ್ಕೆ ಬಿದ್ದಿದೆ. ಅರ್ಜುನ ಮಾವುತ ವಿನು ಕೂಡ ನನ್ನೊಟ್ಡಿಗೆ ಇದ್ದಿದ್ದರಿಂದ ಅಲ್ಲಿ ಮತ್ತೊಬ್ಬ ಹುಡುಗ ಅರ್ಜುನನ ಮೇಲಿದ್ದ.

ವೈದ್ಯ ರಮೇಶ್ ಭಾವುಕ

ನಾವು ವಾಪಸ್ ಬರುವ ವೇಳೆಗೆ ಅಲ್ಲಿ ಎರಡೂ ಆನೆಗಳ ನಡುವೆ ಜಗಳ ಶುರುವಾಗಿತ್ತು. ನಾನು ಮತ್ತೊಂದು ಸುತ್ತು ಅರವಳಿಕೆ ಲೋಡ್ ಮಾಡಿ ಕಾಡಾನೆಗೆ ಹೊಡೆದೆ. ಆದರೆ ಆ ಆನೆ ಕೆಳಗೆ ಬೀಳಲಿಲ್ಲ ಅಷ್ಟೊತ್ತಿಗೆ ಅರ್ಜುನನಿಗೆ ಗಂಭೀರವಾಗಿ ಗಾಯವಾಗಿ ಕೆಳಗೆ ಬಿದ್ದಿದ್ದ. ಈ ಆನೆಗಳ ಕಾಳಗ ಶುರುವಾದಾಗ ಬೇರೆ ಆನೆಗಳು ಹೆದರಿ ಓಡಿವೆ. ಅರ್ಜುನ ತಾನು ಪ್ರಾಣ ಬಿಟ್ಟು ನಮ್ಮನ್ನ ಉಳಿಸಿದ್ದಾನೆ. ನಾನು ನಿತ್ಯ ಹೊರ ಬರುವಾಗ ಕೈ ಮುಗಿದು ಬರಬೇಕು ಎಂದು ವೈದ್ಯ ರಮೇಶ್ ಅರ್ಜುನನ ಸಾವು ನೆನೆದು ಭಾವುಕರಾಗಿದ್ದಾರೆ.

ಜನರು ದಸರಾ ಅಂಬಾರಿ ಹೊತ್ತಾಗ ಮಾತ್ರ ಅರ್ಜುನನ ನೋಡಿರುತ್ತಾರೆ. ನಾವು ನಿತ್ಯ ಅವನ ಜೊತೆ ಇರುವವರು ನಮಗೆ ಆಗಿರುವ ನೋವು ಹೇಳಲು ಆಗಲ್ಲ. ನಾನು ಇದುವರೆಗೆ 65 ಆನೆ ಸೆರೆ ಕಾರ್ಯಾಚರಣೆ ಮಾಡಿದ್ದೇನೆ. 40 ಆನೆಗಳಿಗೆ ನಾನೇ ಅರವಳಿಕೆ ಡಾಟ್ ಮಾಡಿದ್ದೇನೆ. 7 ಹುಲಿ, 50 ಕ್ಕೂ ಹೆಚ್ಚು ಚಿರತೆ, 10 ಕರಡಿ ಡಾಟ್ ಮಾಡಿದ್ದೇನೆ. ಎಲ್ಲವು ಕೂಡ ಯೋಜನೆಯಂತೆಯೇ ನಡೆಯುತ್ತೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:37 pm, Sun, 10 December 23

Loading...
Unable to load recommendations.
Follow Us