ಹಾಸನ: ಬೇಲೂರಿನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಇಬ್ಬರು ಕಾಂಗ್ರೆಸ್ ನಾಯಕರ ಬೆಂಬಲಿಗರು ಪರಸ್ಪರ ಕೈಮಿಲಾಯಿಸಿಕೊಂಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೇಲೂರು ತಾಲ್ಲೂಕಿನ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದರು.

ಹಾಸನ: ಬೇಲೂರಿನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ
ಪರಸ್ಪರ ಕೈಮಿಲಾಯಿಸಿಕೊಂಡ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು
Updated By: Ganapathi Sharma

Updated on: Dec 09, 2023 | 1:11 PM

ಹಾಸನ, ಡಿಸೆಂಬರ್ 9: ಲೋಕಸಭೆ ಚುನಾವಣೆ ಸಿದ್ಧತೆಗಾಗಿ ಬೇಲೂರಿನಲ್ಲಿ (Belur) ಶನಿವಾರ ಆಯೋಜಿಸಿದ ಕಾಂಗ್ರೆಸ್​ (Congress) ಕಾರ್ಯಕರ್ತರ ಸಭೆಯಲ್ಲಿ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿದೆ. ಇಬ್ಬರು ಕಾಂಗ್ರೆಸ್ ನಾಯಕರ ಬೆಂಬಲಿಗರು ಪರಸ್ಪರ ಕೈಮಿಲಾಯಿಸಿಕೊಂಡಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ ಶಿವರಾಂ ಬೇಲೂರು ತಾಲ್ಲೂಕಿನ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದರು. ಟಿಕೆಟ್ ಆಕಾಂಕ್ಷಿ ಜತ್ತೇನಹಳ್ಳಿ ರಾಮಚಂದ್ರ ಕೂಡ ಸಭೆಯಲ್ಲಿ ಭಾಗಿಯಾಗಿದ್ದರು. ಇದೇ ಸಭೆಗೆ ಸ್ಥಳೀಯ ಮುಖಂಡ ಹಾಗೂ ಕಳೆದ ವಿದಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಗ್ರಾನೈಟ್ ರಾಜಶೇಖರ್ ಸಹ ಆಗಮಿಸಿದ್ದರು.

ರಾಜಶೇಖರ್ ಬಂದ ವೇಳೆ ಸಭೆಯಲ್ಲಿ ಬಿ ಶಿವರಾಂ ಮಾತನಾಡುತ್ತಿದ್ದರು. ನಮ್ಮ ಕಾರ್ಯಕರ್ತರು, ಮುಖಂಡರಲ್ಲಿ ಒಗ್ಗಟ್ಟು ಇಲ್ಲದಿರುವುದೇ ಬೇಲೂರಿನಲ್ಲಿ ಕಾಂಗ್ರೆಸ್ ಸೋಲಲು ಕಾರಣ ಎಂದು ಬಿ ಶಿವರಾಂ ಹೇಳಿದರು. ಇದರಿಂದ ಕೆರಳಿದ ರಾಜಶೇಖರ್ ಬೆಂಬಲಿಗಳು, ಶಿವರಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಬಿ ಶಿವರಾಂ ಹಾಗೂ ರಾಜಶೇಖರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿ: ಕಾರು ಇಲ್ಲದೇ ಬೈಕ್​​ನಲ್ಲೇ 350 ಕಿ.ಮೀ ದೂರದಿಂದ ವಿಧಾನಸಭೆಗೆ ಬಂದ ನೂತನ ಶಾಸಕ

ಉಭಯ ಬಣಗಳ ಕಾರ್ಯಕರ್ತರ ನಡುವಣ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಇಬ್ಬರು ನಾಯಕರ ಬೆಂಬಲಿಗರು ಕೈಕೈ ಮಿಲಾಯಿಸಿದರು. ಕುರ್ಚಿಗಳನ್ನು ಹಿಡಿದು ಹೊಡೆದಾಡಿಕೊಂಡರು. ಘಟನೆಯಲ್ಲಿ ಹತ್ತಾರು ಕುರ್ಚಿಗಳು ಪುಡಿಯಾಗಿವೆ.

ಗಲಾಟೆ ಜೋರಾಗುತ್ತಿದ್ದಂತೆ ನಾಯಕರು ಸಭೆಯಿಂದ ಕಾಲ್ಕಿತ್ತಿದ್ದಾರೆ. ಗಲಾಟೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ