ಮದುವೆಗೆಂದು ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ: ಬೇಲೂರಿನ ಕಲ್ಕೆರೆ ಸಮೀಪ ಒಳ ಉಡುಪು, ಚಪ್ಪಲಿ, ಬ್ಯಾಗ್ ಪತ್ತೆ

ವಿವಾಹ ಸಮಾರಂಭದಲ್ಲಿ ಭಾಗವಹಿಸುವುದಕ್ಕೆಂದು ಚಿಕ್ಕಮಗಳೂರಿಗೆ ತೆರಳಿದ್ದ ಕುಣಿಗಲ್ ಮೂಲದ ಪ್ರಿಯಾಂಕಾ ಎಂಬಾಕೆ ನಿಗೂಢವಾಗಿ ನಾಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮತ್ತೊಂದೆಡೆ, ಕಾಣೆಯಾದ ಮರುದಿನ ಬೇಲೂರಿನ ಕಲ್ಕೆರೆ ಸಮೀಪ ಆಕೆಯ ಒಳ ಉಡುಪು, ಚಪ್ಪಲಿ, ಬ್ಯಾಗ್ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮೈಮೆಲಿನ ಚಿನ್ನಾಭರಣ, ಹಣಕ್ಕಾಗಿ ಅಪಹರಿಸಿ ಕೊಲೆ ಮಾಡಿರಬಹುದೇ ಎಂಬ ಸಂಶಯ ಮೂಡಿದೆ.

ಮದುವೆಗೆಂದು ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ: ಬೇಲೂರಿನ ಕಲ್ಕೆರೆ ಸಮೀಪ ಒಳ ಉಡುಪು, ಚಪ್ಪಲಿ, ಬ್ಯಾಗ್ ಪತ್ತೆ
ಸಾಂದರ್ಭಿಕ ಚಿತ್ರ
Image Credit source: tv9
Edited By:

Updated on: Feb 14, 2026 | 12:26 PM

ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತಯಾದ ಘಟನೆ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕಾ (29) ಎಂಬ ಮಹಿಳೆ ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸಿದ್ದ ವೇಳೆ ಕಾಣೆಯಾಗಿದ್ದಾರೆ. ಫೆಬ್ರವರಿ 12ರ ರಾತ್ರಿ 8 ಗಂಟೆ ಸುಮಾರಿಗೆ ಹಾಸನ ಜಿಲ್ಲೆಯ (Hassan) ಬೇಲೂರು ಬಸ್ ನಿಲ್ದಾಣದ ಬಳಿಯಿಂದ ಅವರು ನಿಗೂಢವಾಗಿ ಕಣ್ಮರೆಯಾಗಿರುವುದು ತಿಳಿದುಬಂದಿದೆ.

ಕಾಣೆಯಾಗುವ ಮುನ್ನ ಸಂಜೆ 7.30ರ ಸುಮಾರಿಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕಾ, ‘ಯಾರೋ ಒಬ್ಬರ ಜೊತೆಯಲ್ಲಿ ಸಿಕ್ಕಿದ್ದೇನೆ’ ಎಂದು ಹೇಳಿ ಫೋನ್ ಕಟ್ ಮಾಡಿದ್ದರು. ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಎಂದು ಸಂಬಂಧಿಕರು ತಿಳಿಸಿದ್ದಾರೆ. ಈ ಕುರಿತು ದೂರು ನೀಡಲು ಮುಂದಾದರೂ ಪೊಲೀಸರು ತಕ್ಷಣ ಸ್ಪಂದಿಸಿಲ್ಲ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಕಲ್ಕೆರೆ ಸಮೀಪ ಒಳ ಉಡುಪು, ಚಪ್ಪಲಿ, ಬ್ಯಾಗ್ ಪತ್ತೆ

ಇನ್ನೊಂದೆಡೆ, ಬೇಲೂರು ತಾಲೂಕಿನ ಕಲ್ಕೆರೆ ಸಮೀಪ ಮಹಿಳೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿದ್ದು, ಪ್ರಕರಣದ ಬಗ್ಗೆ ಮತ್ತಷ್ಟು ಸಂಶಯ ಮೂಡುವಂತೆ ಮಾಡಿದೆ. ಸ್ಥಳದಲ್ಲಿ ಮೊದಲ ದಿನ ಯಾವುದೇ ಬಟ್ಟೆಗಳು ಕಾಣಿಸದಿದ್ದರೂ, ಬಳಿಕ ಅವು ಪತ್ತೆಯಾಗಿರುವುದರಿಂದ ಅನುಮಾನಗಳು ಹೆಚ್ಚಿವೆ ಎಂದು ಸ್ಥಳೀಯರು ಹೇಳಿದ್ದಾರೆ.

ಮಹಿಳೆ ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಧರಿಸಿದ್ದಾಗಿ ತಿಳಿದುಬಂದಿದ್ದು, ಆಭರಣಗಳಿಗಾಗಿ ಅಪಹರಣ ಅಥವಾ ದೌರ್ಜನ್ಯ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು, ಶ್ವಾನ ದಳ ಹಾಗೂ ಫೋರೆನ್ಸಿಕ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ.

ಇದನ್ನೂ ಓದಿ: ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆ

ಪ್ರಿಯಾಂಕಾ ಕುಟುಂಬ ಸದಸ್ಯರು ಅರೆಹಳ್ಳಿ ಪೊಲೀಸ್ ಠಾಣೆ ಮತ್ತು ಬೇಲೂರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣ ದೂರು ಸ್ವೀಕರಿಸಿ ತನಿಖೆ ಕೈಗೊಂಡಿದ್ದರೆ ಮಹಿಳೆಯನ್ನು ಪತ್ತೆಹಚ್ಚಬಹುದಿತ್ತು ಎಂದು ಆರೋಪಿಸಿದ್ದಾರೆ. ಸದ್ಯ ಮಹಿಳೆಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Manjunath KB
Follow Us