ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಎಡಕುಮೇರಿ ಗುಡ್ಡಕುಸಿತದಿಂದ ಇಂದೂ ಹಲವು ರೈಲುಗಳ ಸಂಚಾರ ಬಂದ್
ಸಕಲೇಶಪುರದ ಎಡಕುಮೇರಿ ಬಳಿ ರೈಲ್ವೆ ಹಳಿಗೆ ಗುಡ್ಡಕುಸಿತವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು–ಬೆಂಗಳೂರು ಮಾರ್ಗದಲ್ಲಿ ಇಂದು ಕೂಡ ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಕೆಲವು ರೈಲುಗಳ ಮಾರ್ಗ ಬದಲಿಸಲಾಗಿದೆ. ಶನಿವಾರ ರಾತ್ರಿ ಗುಡ್ಡ ಕುಸಿತ ಸಂಭವಿಸಿ ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ನಿರಂತರ ಮಳೆಯಿಂದಾಗಿ ಮಣ್ಣು ತೆರವು ಕಾರ್ಯಾಚರಣೆಗೂ ಅಡ್ಡಿಯಾಗುತ್ತಿದೆ.

ಮುಖ್ಯಾಂಶಗಳು
- ಎಡಕುಮೇರಿ ಬಳಿ ಇನ್ನೂ ಮುಗಿಯದ ಮಣ್ಣು ತೆರವು ಕಾರ್ಯ
- ಹಲವು ರೈಲುಗಳ ಸಂಚಾರ ಇಂದು ಸ್ಥಗಿತ
- ಕೆಲವು ರೈಲುಗಳಿಗೆ ಬದಲಿ ಮಾರ್ಗ ನಿಗದಿ
ಹಾಸನ, ಆಗಸ್ಟ್ 3: ಹಾಸನ ಜಿಲ್ಲೆಯ (Hassan) ಸಕಲೇಶಪುರ ತಾಲೂಕಿನ ಎಡಕುಮೇರಿ–ಶಿರಿಬಾಗಿಲು ಬಳಿ ರೈಲ್ವೆ ಹಳಿ ಮೇಲೆ ಗುಡ್ಡಕುಸಿತವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು–ಬೆಂಗಳೂರು ಮಾರ್ಗದಲ್ಲಿ (Mangalore Bangalore Train) ರೈಲು ಸಂಚಾರಕ್ಕೆ ಮತ್ತೆ ಅಡಚಣೆ ಉಂಟಾಗಿದೆ. ಶನಿವಾರ ರಾತ್ರಿ ಕುಸಿದ ಮಣ್ಣು ತೆರವು ಕಾರ್ಯಾಚರಣೆ ಮಳೆಯ ನಡುವೆಯೂ ಮುಂದುವರಿದಿದ್ದು, ಇಂದು ಕೂಡ ಕೆಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಹಾಗೂ ಹಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
ಗುಡ್ಡದಿಂದ ಮತ್ತೆ ಮತ್ತೆ ಮಣ್ಣು ಕುಸಿಯುತ್ತಿರುವುದರಿಂದ ತೆರವು ಕಾರ್ಯಾಚರಣೆಗೆ ಮಳೆ ಅಡ್ಡಿಯಾಗುತ್ತಿದೆ. ರೈಲ್ವೆ ಹಳಿ ಮೇಲೆ ಕೆಸರು ತುಂಬಿದ್ದು, ಹಳಿಯ ಪಕ್ಕದಲ್ಲೇ ಮೇಲಿನಿಂದ ನೀರು ಧುಮ್ಮಿಕ್ಕುತ್ತಿದೆ. ಮಣ್ಣು ಮತ್ತಷ್ಟು ಕುಸಿಯದಂತೆ ರೈಲ್ವೆ ಇಲಾಖೆ ಸಿಬ್ಬಂದಿ ಮರಳಿನ ಮೂಟೆಗಳನ್ನು ಜೋಡಿಸಿ ತಡೆಗೋಡೆ ನಿರ್ಮಿಸುತ್ತಿದ್ದಾರೆ.
ಇಂದು ಕೂಡ ಕೆಲವು ರೈಲುಗಳ ಸಂಚಾರ ಬಂದ್
ಗುಡ್ಡಕುಸಿತದ ಹಿನ್ನೆಲೆಯಲ್ಲಿ ಯಶವಂತಪುರ–ಕಾರವಾರ ಎಕ್ಸ್ಪ್ರೆಸ್, ಮಂಗಳೂರು–ಯಶವಂತಪುರ ಗೊಮ್ಮಟೇಶ್ವರ ಎಕ್ಸ್ಪ್ರೆಸ್ ಹಾಗೂ ಕಾರವಾರ–ಕೆಎಸ್ಆರ್ ಬೆಂಗಳೂರು ಪಂಚಗಂಗಾ ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ಇಂದು ಕೂಡ ಸ್ಥಗಿತಗೊಳಿಸಲಾಗಿದೆ.
ಹಲವು ರೈಲುಗಳ ಮಾರ್ಗ ಬದಲು
ಇನ್ನು ಬೆಂಗಳೂರು–ಮುರ್ಡೇಶ್ವರ ಎಕ್ಸ್ಪ್ರೆಸ್, ರೈಲು ಸಂಖ್ಯೆ 17377 ವಿಜಯಪುರ–ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ಹಾಗೂ 17378 ಮಂಗಳೂರು ಸೆಂಟ್ರಲ್–ವಿಜಯಪುರ ಎಕ್ಸ್ಪ್ರೆಸ್ ರೈಲುಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಮಾಡಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ.
ಇದನ್ನೂ ಓದಿ: ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ, ರೈಲು ಸಂಚಾರ ಸ್ಥಗಿತ!
ಮಳೆಯ ನಡುವೆ ಎಡಕುಮೇರಿ ಭಾಗದಲ್ಲಿ ತೆರವು ಮತ್ತು ಸುರಕ್ಷತಾ ಕಾರ್ಯಾಚರಣೆ ಮುಂದುವರಿದಿರುವುದರಿಂದ, ಮಂಗಳೂರು–ಬೆಂಗಳೂರು ಮಾರ್ಗದಲ್ಲಿ ಪ್ರಯಾಣಿಸುವವರು ರೈಲು ಸಂಚಾರದ ಸ್ಥಿತಿಯನ್ನು ಪರಿಶೀಲಿಸಿ ಪ್ರಯಾಣಿಸುವಂತೆ ಸೂಚಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




