ಹಾವೇರಿ ಕಡಕೋಳದಲ್ಲಿ ವಕ್ಫ್ ಗಲಾಟೆ: ಮನೆ ಖಾಲಿ ಮಾಡಿಸಬಹುದೆಂಬ ಭೀತಿಯಿಂದ ಕಲ್ಲು ತೂರಾಟ

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಬೋರ್ಡ್ ಆಸ್ತಿ ತಗಾದೆ ಸಂಬಂಧ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, 15 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಧಿಕಾರಿ ಮತ್ತು ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ.

ಹಾವೇರಿ ಕಡಕೋಳದಲ್ಲಿ ವಕ್ಫ್ ಗಲಾಟೆ: ಮನೆ ಖಾಲಿ ಮಾಡಿಸಬಹುದೆಂಬ ಭೀತಿಯಿಂದ ಕಲ್ಲು ತೂರಾಟ
ಹಾವೇರಿ ಕಡಕೋಳದಲ್ಲಿ ವಕ್ಫ್ ಗಲಾಟೆ: ಮನೆ ಖಾಲಿ ಮಾಡಿಸಬಹುದೆಂಬ ಭೀತಿಯಿಂದ ಕಲ್ಲು ತೂರಾಟ

Updated on: Oct 31, 2024 | 7:23 AM

ಹಾವೇರಿ, ಅಕ್ಟೋಬರ್ 31: ಬಿಜಯಪುರ, ಕಲಬುರಗಿ, ಮಂಡ್ಯ ಸೇರಿದಂತೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಸದ್ದು ಮಾಡುತ್ತಿರುವ ವಕ್ಫ್ ಬೋರ್ಡ್​ ನೋಟಿಸ್ ವಿಚಾರ ಇದೀಗ ಹಾವೇರಿ ಜಿಲ್ಲೆಗೂ ಕಾಲಿಟ್ಟಿದೆ. ಆದರೆ, ಹಾವೇರಿಯಲ್ಲಿ ಒಂದು ಹಂತ ಮುಂದಕ್ಕೆ ಹೋಗಿದ್ದು, ಬುಧವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್​ ಬೋರ್ಡ್​​ ಹೆಸರಿನಲ್ಲಿ ಖಾತೆ ಇಂದೀಕರಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ವಾಸವಿದ್ದ ಮನೆಗಳನ್ನು ಖಾಲಿ‌ ಮಾಡಿಸಬಹುದು ಎಂಬ ಭೀತಿಯಿಂದ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ನಡೆಸಿದೆ.

ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡ ಮೊಹಮ್ಮದ್ ರಫಿ ಎಂಬುವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದೆ. ಅಲ್ಲದೆ, ಮನೆ ಮುಂದಿದ್ದ ಬೈಕ್ ಅನ್ನು ಜಖಂ ಮಾಡಲಾಗಿದೆ.

ಕಲ್ಲು ತೂರಾಟ ಹಾಗೂ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ, ರಾತ್ರೋರಾತ್ರಿ ಹಾವೇರಿ ಡಿಸಿ, ಎಸ್​​ಪಿ, ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್, ಎಸ್​ಪಿ ಅಂಶುಕುಮಾರ್ ಕಡಕೋಳ ಗ್ರಾಮಕ್ಕೆ ದೌಡಾಯಿಸಿದರು. ಮತ್ತೆ ಅಹಿತಕರ ಘಟನೆ ನಡೆಯದಂತೆ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದರು. ಗಲಾಟೆಗೆ ಕಾರಣರಾದವರನ್ನು ಬಂಧಿಸಲು ಮುಂದಾದ ಪೊಲೀಸರು, ಗಲಾಟೆಗೆ ಪ್ರಚೋದನೆ ನೀಡಿದರನ್ನೂ ಪತ್ತೆ ಮಾಡಲು ಮುಂದಾಗಿದ್ದಾರೆ. ಸದ್ಯ ಸವಣೂರು ತಾಲೂಕಿನ ಕಡಕೋಳ ಗ್ರಾಮ ಬೂದಿಮುಚ್ಚಿದ ಕೆಂಡದಂತಿದೆ.

ಗಲಾಟೆ ಬಗ್ಗೆ ಹಾವೇರಿ ಎಸ್​ಪಿ ಹೇಳಿದ್ದೇನು?

ಗಲಾಟೆ ಬಗ್ಗೆ ಕಡಕೋಳ ಗ್ರಾಮದಲ್ಲಿ ಹಾವೇರಿ ಎಸ್​ಪಿ ಅಂಶು ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಗ್ರಾಮದ ಕೆಲವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ನಮಗೆ ಸಂಜೆ 7.30ಕ್ಕೆ ಮಾಹಿತಿ ಬಂತು. ಕೂಡಲೇ ಸ್ಥಳಕ್ಕೆ ಧಾವಿಸಿದೆವು. ಗಲಾಟೆಯಲ್ಲಿ ಐವರಿಗೆ ಗಾಯಗಳಾಗಿವೆ. ಗಲಾಟೆಗೆ ಸಂಬಂಧಿಸಿದಂತೆ ದೂರು ಕೊಡಲು ಯಾರೂ ಸಿದ್ಧರಿಲ್ಲ. ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

15 ಜನ ಪೊಲೀಸ್ ವಶಕ್ಕೆ

ಹಲ್ಲೆಗೊಳಗಾದವರಿಂದಲೂ ಮಾಹಿತಿ ಪಡೆದು ದೂರು ಸ್ವೀಕರಿಸುತ್ತೇವೆ. ಗಲಾಟೆಗೆ ಸಂಬಂಧಿಸಿದಂತೆ 15 ಜನರನ್ನು ವಶಕ್ಕೆ ಪಡೆದಿದ್ದೇವೆ. ಭದ್ರತೆಗೆ 4 ಕೆಎಸ್​ಆರ್​ಪಿ ತುಕಡಿ, 200 ಪೊಲೀಸ್​ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಡಕೋಳ ಗ್ರಾಮದಲ್ಲಿ ರೂಟ್​ಮಾರ್ಚ್ ಕೂಡಾ‌ ಮಾಡಲಾಗುತ್ತದೆ. ಗಲಾಟೆಯಲ್ಲಿ ದುಷ್ಕರ್ಮಿಗಳು ಕೆಲವರ ಮನೆಗಳ ಗಾಜು ಒಡೆದಿದ್ದಾರೆ. ಸದ್ಯ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಹಲ್ಲೆಗೊಳಗಾದವರಿಗೆ ಎಕ್ಸ್​ರೇ ಮಾಡಿಸುತ್ತೇವೆ ಎಂದು ಎಸ್​ಪಿ ಅಂಶು ಕುಮಾರ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಮಹಾಂತೇಶ್ ಹೇಳಿದ್ದೇನು?

ಗ್ರಾಮದಲ್ಲಿ ಗರಡಿ ಮನೆ ಸಂಬಂಧಿಸಿದಂತೆ ಗೊಂದಲ ಇತ್ತು. ವಕ್ಫ್​ ಆಸ್ತಿ ಸಂಬಂಧಿಸಿದಂತೆ ಜನರು ಪ್ರತಿ ದಿನ ಪತ್ರಿಕೆಗಳಲ್ಲಿ ಓದಿ ಭಯಗೊಂಡಿದ್ದಾರೆ. ವಕ್ಫ್​ ಆಸ್ತಿ ಎಂದು ಹೆಸರು ನಮೂದಿಸುತ್ತಾರೆಂದು ಭಯಗೊಂಡು ಗಲಾಟೆ ಮಾಡಿದ್ದಾರೆ. ಕಡಕೋಳದಲ್ಲಿ ಮೂರು ವಕ್ಫ್​ ಆಸ್ತಿ ಇದೆ ಎಂದು ಹಾವೇರಿ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ಹೇಳಿದ್ದಾರೆ.

ಇದನ್ನೂ ಓದಿ: ಯಾರದೋ ಹೆಣ ತಂದು ಹೂತು ನಮ್ಮದು ಎನ್ನುತ್ತಾರೆ: ವಕ್ಫ್ ಆಸ್ತಿ ವಿಚಾರವಾಗಿ ಪ್ರತಾಪ್ ಸಿಂಹ ವಾಗ್ದಾಳಿ

ವೈಯಕ್ತಿಕವಾಗಿ ಯಾರಿಗೂ ನಾವು ನೋಟಿಸ್ ಕೊಟ್ಟಿರಲಿಲ್ಲ. ಹಿಂದೆ ಇದ್ದ ಪಟ್ಟಿ ಮೇಲೆ ಮುಂದಿನ ಕ್ರಮಕ್ಕೆ ಪತ್ರ ಬರೆದಿದ್ದೆವು. ವಕ್ಫ್​ ಆಸ್ತಿ ಎಂದು ಮನೆ ದಾಖಲೆಗಳಲ್ಲೂ ನಮೂದಿಸುತ್ತಾರೆಂದು ಜನ ಭಯಗೊಂಡಿದ್ದಾರೆ. ಆ ಭಯದಿಂದ ಗಲಾಟೆ ಮಾಡಿದ್ದಾರೆ. ಯಾರಿಗೂ ನೋಟಿಸ್ ಕೊಟ್ಟಿರಲಿಲ್ಲ, ಈಗ ಪರಿಸ್ಥಿತಿ ತಿಳಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us