AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್‌ಎಸ್‌ಎಲ್​​ಸಿಗೆ ಪರೀಕ್ಷೆ: ಇದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆ ನಿರ್ಧಾರ, ಬೃಹಸ್ಪತಿ ಶಿಕ್ಷಣ ಸಚಿವರ ನಿರ್ಧಾರ ಎಂದ ಹೆಚ್‌.ಡಿ. ಕುಮಾರಸ್ವಾಮಿ

HD Kumaraswamy: ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ವಿಷಯದಲ್ಲಿ ಮೌನಿ ಆಗಿರುವ ಸಚಿವ ಸುರೇಶ್‌ಕುಮಾರ್‌, ಬಿಸಿ ಊಟ ಸಿಗದೆ ಕಂಗಾಲಾಗಿರುವ ಬಡ ವಿದ್ಯಾರ್ಥಿಗಳ ಬಗ್ಗೆ ಮಾತನಾಡುವುದಿಲ್ಲ. ಪರೀಕ್ಷೆಯಲ್ಲಿ ಪಾಸಾಗುವ ಏಳೆಂಟು ಲಕ್ಷ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನಾಯಸವಾಗಿ ಸೀಟು ದಕ್ಕಿಸಿಕೊಳ್ಳಲು ವ್ಯವಸ್ಥೆ ಇದಾಗಿದೆ - ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಟ್ವೀಟ್‌

ಎಸ್‌ಎಸ್‌ಎಲ್​​ಸಿಗೆ ಪರೀಕ್ಷೆ: ಇದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆ ನಿರ್ಧಾರ, ಬೃಹಸ್ಪತಿ ಶಿಕ್ಷಣ ಸಚಿವರ ನಿರ್ಧಾರ ಎಂದ ಹೆಚ್‌.ಡಿ. ಕುಮಾರಸ್ವಾಮಿ
ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
TV9 Web
| Updated By: ಆಯೇಷಾ ಬಾನು|

Updated on: Jun 04, 2021 | 4:46 PM

Share

ಬೆಂಗಳೂರು: ಕೊರೊನಾಸೋಂಕಿನ ಮಧ್ಯೆಯೇ ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಟ್ವೀಟ್‌ ಮಾಡಿ, ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯ ಸರ್ಕಾರದ ಬುದ್ಧಿ ಭ್ರಮಣೆಯ ನಿರ್ಧಾರ ಎಂದು ಜರಿದಿದ್ದಾರೆ.  ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಮತಿಗೆಟ್ಟಂತೆ ವರ್ತಿಸುತ್ತಿದ್ದಾರೆ. ಸಚಿವರ ಐಲು-ಪೈಲು ನಿರ್ಧಾರ ಕಂಡು ನಗಾಡುವಂತಾಗಿದೆ. ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಸರ್ಕಾರ ಇಂಥ ಮತಿಹೀನ ನಿರ್ಧಾರದಿಂದ ಹಿಂದೆ ಸರಿಯಲಿ.  PUCಗೆ ಪರೀಕ್ಷೆ ಇಲ್ಲ, ಎಸ್‌ಎಸ್‌ಎಲ್‌ಸಿಗೆ ಮಾತ್ರ ಪರೀಕ್ಷೆಯಂತೆ. ಅದೂ ಸೀಮಿತ ವಿಷಯಗಳ ಪರೀಕ್ಷೆ ಎಂಬ ಮೊಂಡುತನ ಕೈಬಿಡಲಿ ಎಂದು ಹೆಚ್‌ಡಿಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

’SSLC ಮಕ್ಕಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಬೃಹಸ್ಪತಿ ಶಿಕ್ಷಣ ಸಚಿವ’ ಮಕ್ಕಳ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಕೈಬಿಟ್ಟು, ಸಚಿವರ ಎಡಬಿಡಂಗಿ ನಿರ್ಧಾರಕ್ಕೆ ಸಿಎಂ ಕಡಿವಾಣ ಹಾಕಲಿ. SSLC, PUCಗೆ ಏಕರೂಪ ಪರೀಕ್ಷಾ ಪದ್ಧತಿ ಜಾರಿ ಆಗಲಿ. ರಾಜ್ಯದಲ್ಲಿ ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲವೆಂದಾದ್ರೆ, ಅವರಿಗಿಂತ ಕಿರಿಯರಾದ SSLC ಮಕ್ಕಳಿಗೂ  ಅದು ಅನ್ವಯಿಸಲಿ.

ಪಿಯು ಪರೀಕ್ಷೆ ರದ್ದುಪಡಿಸಿದ್ದಕ್ಕೆ ಪ್ರಧಾನಿ ‘ಗುಮ್ಮ’ ಕಾರಣವಾಗಿದೆ. SSLC ಮಕ್ಕಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಬೃಹಸ್ಪತಿ ಶಿಕ್ಷಣ ಸಚಿವರೋ? ಅಥವಾ ಪೋಷಕರು, ಮಕ್ಕಳ ತಾಳ್ಮೆ ಕೆಣಕುವ ಪರೀಕ್ಷಾ ಮಂತ್ರಿಯೋ? ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ವಿಷಯದಲ್ಲಿ ಮೌನಿ ಆಗಿರುವ ಸಚಿವ ಸುರೇಶ್‌ಕುಮಾರ್‌, ಬಿಸಿ ಊಟ ಸಿಗದೆ ಕಂಗಾಲಾಗಿರುವ ಬಡ ವಿದ್ಯಾರ್ಥಿಗಳ ಬಗ್ಗೆ ಮಾತನಾಡುವುದಿಲ್ಲ. ಪರೀಕ್ಷೆಯಲ್ಲಿ ಪಾಸಾಗುವ ಏಳೆಂಟು ಲಕ್ಷ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನಾಯಸವಾಗಿ ಸೀಟು ದಕ್ಕಿಸಿಕೊಳ್ಳಲು ವ್ಯವಸ್ಥೆ ಇದಾಗಿದೆ. ಸೀಟು ದಕ್ಕಿಸಿಕೊಳ್ಳಲು ವ್ಯವಸ್ಥೆ ಮಾಡುವ ಕಡೆ ಚಿತ್ತ ಹರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಟ್ವೀಟ್‌ ಮೂಲಕ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

(hd kumaraswamy criticizes karnataka government decision to conduct sslc exam 2021)

Also Read:

2nd PUC Exam 2021: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, ಎಸ್ಎಸ್ಎಲ್​ಸಿಗೆ 2 ಪೇಪರ್​ ಪರೀಕ್ಷೆ- ಸಚಿವ ಸುರೇಶ್ ಕುಮಾರ್