ಡಿಕೆಶಿಗೆ ಕನಸಿನಲ್ಲಿ ಮಹಿಳೆಯರು, ದೇವರು ಬಂದು ಹೇಳಿದ್ದಾರೋ? ಶಕ್ತಿ ಯೋಜನೆ ಸ್ಥಗಿತ ಸುಳಿವಿಗೆ ಕುಮಾರಸ್ವಾಮಿ ಕಿಡಿ

ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಸ್ಥಗಿತಗೊಳಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿರುವುದಕ್ಕೆ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸುವ ಮೊದಲ ಹೆಜ್ಜೆ ಎಂದು ಅವರು ಆರೋಪಿಸಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹದಗೆಡಿಸದೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಡಿಕೆಶಿಗೆ ಕನಸಿನಲ್ಲಿ ಮಹಿಳೆಯರು, ದೇವರು ಬಂದು ಹೇಳಿದ್ದಾರೋ? ಶಕ್ತಿ ಯೋಜನೆ ಸ್ಥಗಿತ ಸುಳಿವಿಗೆ ಕುಮಾರಸ್ವಾಮಿ ಕಿಡಿ
ಹೆಚ್​ಡಿ ಕುಮಾರಸ್ವಾಮಿ

Updated on: Oct 31, 2024 | 8:10 AM

ಬೆಂಗಳೂರು, ಅಕ್ಟೋಬರ್ 31: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಕೊಟ್ಟ ಸುಳಿವಿಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಹೇಳಿ ಬಗ್ಗೆ ಬೆಂಗಳೂರನಲ್ಲಿ ‘ಟಿವಿ9’ಗೆ ಪ್ರತಿಕ್ರಿಯಿಸಿದ ಅವರು, ಅವರಿಗೆ (ಡಿಸಿಎಂಗೆ) ಕನಸಿನಲ್ಲಿ ಬಂದು ಮಹಿಳೆಯರು ಹೇಳಿದ್ದಾರೋ? ಅಥವಾ ದೇವರು ಬಂದು ಜ್ಞಾನೋದಯ ಮಾಡಿದ್ದಾನೆಯೇ? ಒಂದೊಂದೇ ಗ್ಯಾರಂಟಿ ಯೋಜನೆಗಳನ್ನು ಮರೆಯಾಗಿಸಲು ಇದೊಂದು ಕಾರಣ ಅಷ್ಟೆ ಎಂದಿದ್ದಾರೆ.

ಟ್ವೀಟ್ ಮೂಲಕ ಮಹಿಳೆಯರು ತಿಳಿಸಿದ್ದಾರೆಂದು ಹೇಳುತ್ತಾರೆ. ಇವರಿಗೆ ಈಗ ಜ್ಞಾನೋದಯ ಆಗಿದೆಯಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ರದ್ದತಿಯ ಮೊದಲ ಹಂತ: ಹೆಚ್​ಡಿಕೆ

ಶಕ್ತಿ ಯೋಜನೆ ಮೂಲಕ ಅವರನ್ನು ಬಲಾಢ್ಯರನ್ನಾಗಿ ಮಾಡಿದ್ದೀರಾ? ಸರ್ಕಾರಕ್ಕೆ ಈ ಯೋಜನೆಯನ್ನು ದೀರ್ಘಾವಧಿಗೆ ಮಾಡಲು ಸಾಧ್ಯ ಆಗುತ್ತಿಲ್ಲ. ಒಂದೊಂದಾಗಿ ಗ್ಯಾರಂಟಿಗಳನ್ನು ರದ್ದುಗೊಳಿಸಲು ಮೊದಲ ಹಂತಂದ ಪ್ರಕ್ರಿಯೆ ಇದು. ಇದು ಗ್ಯಾರಂಟಿ ನಿಲ್ಲಿಸಲು ಒಂದು ಪೀಠಿಕೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈವರೆಗೆ ಗ್ಯಾರಂಟಿ ಯೋಜನೆಗಳನ್ನೇ ಪ್ರಮುಖವಾಗಿ ಹೇಳುತ್ತಿದ್ದರು. ನುಡಿದಂತೆ ನಡೆದಿದ್ದೇವೆ ಎಂದು ಜನರ ಬ್ರೈನ್ ವಾಷ್ ಮಾಡುತ್ತಿದ್ದರು. ಇದರಿಂದ ಅಭಿವೃದ್ಧಿ ಕೆಲಸ ನಿಲ್ಲಿಸಿದ್ದರು, ಎಲ್ಲಾ ಸ್ಥಗಿತಗೊಳಿಸಿದ್ದರು. ತೆರಿಗೆಯವರಿಗೆ 10 ಸಾವಿರ ಕೋಟಿ ಹೆಚ್ಚಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಇದು ಯಾವ ಪುರುಷಾರ್ಥಕ್ಕೆ? ಗ್ಯಾರಂಟಿ ಹೆಸರು ಹೇಳಿಕೊಂಡು ಜನರಿಗೆ ಹೊರೆ ಮಾಡಿ, ಜನರ ಹಣ ಕಿತ್ತು ಕಾರ್ಯಕ್ರಮ ಮುಂದುವರಿಸುವುದರಲ್ಲಿ ಅರ್ಥ ಇಲ್ಲ. ಇದರಿಂದ ಕ್ಯಾಪಿಟಲ್ ಅಸೆಟ್ ಆಗುತ್ತಿಲ್ಲ, ಕೇವಲ ಖರ್ಚಾಗುತ್ತಿದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ನಾನು ಗ್ಯಾರಂಟಿ ಕೊಡುವುದನ್ನು ವಿರೋಧಿಸುತ್ತಿಲ್ಲ. ಗ್ಯಾರಂಟಿ ಕೊಡಿ, ಆದರೆ ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ. ಮುಂದಿನ ಅಧಿಕಾರ ನಡೆಸುವ ಪೀಳಿಗೆ ಭವಿಷ್ಯ ಹಾಳು ಮಾಡಬೇಡಿ ಎಂದು ಅವರು ಹೇಳಿದ್ದಾರೆ.

ರಾಜ್ಯವನ್ನು ದಿವಾಳಿ ಮಾಡಬೇಡಿ: ಕುಮಾರಸ್ವಾಮಿ

ಅನ್ನ ಭಾಗ್ಯ ಯೋಜನೆಗೂ ಷರತ್ತು, ಮಾರ್ಗಸೂಚಿ ಅಳವಡಿಸಿದ್ದಾರೆ. ಅಕ್ಕಿ ಕೊಡುವುದನ್ನು ಕಡಿತಗೊಳಿಸಿದ್ದಾರೆ. ಇದು ಮುಂದೆ ಯಾವ ಹಂತಕ್ಕೆ ಹೋಗುತ್ತದೆ ಎಂದು ಕಾದು ನೋಡಿ. ನಮಗೆ ಗ್ಯಾರಂಟಿ ಬಗ್ಗೆ ಯಾವುದೇ ಹೊಟ್ಟೆ ಉರಿ ಇಲ್ಲ. ಗ್ಯಾರಂಟಿ ಬೇಕಾದರೆ ಡಬಲ್ ಮಾಡಿಕೊಳ್ಳಿ, ಆದರೆ ರಾಜ್ಯವನ್ನು ದೀವಾಳಿ ಮಾಡಬೇಡಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಸ್ಥಗಿತ? ಡಿಕೆ ಶಿವಕುಮಾರ್​ ಸುಳಿವು

ಸರ್ಕಾರದ ಅಭಿವೃದ್ಧಿ ಶೂನ್ಯ ಆಗಿದೆ. ಜನರ ತೆರಿಗೆ ಹಣವನ್ನು ಗ್ಯಾರಂಟಿ ಹೆಸರಲ್ಲಿ ವ್ಯಯಿಸಿ ರಾಜ್ಯದ ಆರ್ಥಿಕ ಶಕ್ತಿ ಕುಂದಿಸುತ್ತಿದ್ದಾರೆ. ಬೇರೆ ದೇಶಗಳ ಅರಾಜಕತೆ ನಮ್ಮ ರಾಜ್ಯಕ್ಕೆ ಬರಬಾರದು ಎಂಬುದು ನಮ್ಮ ಕಳಕಳಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us