
ಬೆಂಗಳೂರು, ಅಕ್ಟೋಬರ್ 25: ಬೆಂಗಳೂರು ನಗರದಲ್ಲಿನ ಜೆಡಿಎಸ್ (JDS) ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆಗೆ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. “ಇದು ಸರ್ಕಾರದ 6ನೇ ಗ್ಯಾರಂಟಿ , ಜನತೆಗೆ ಟೋಪಿ ಹಾಕುವ ಯೋಜನೆ” ಎಂದು ವ್ಯಂಗ್ಯವಾಡಿರುವ ಅವರು, ಈ ಯೋಜನೆಯಿಂದ ಜನರಿಗೆ ಅನುಕೂಲಕ್ಕಿಂತ ಹೊರೆಯೇ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿರುವ ಅವರು, “ಐದು ಗ್ಯಾರಂಟಿಗಳ ಹೆಸರಿನಲ್ಲಿ ಈಗಾಗಲೇ ರಾಜ್ಯ ಖಜಾನೆ ಖಾಲಿ ಮಾಡಿದ್ದಾರೆ. ಈಗ A-ಖಾತಾ B-ಖಾತಾದಲ್ಲಿ ಲೂಟಿ ಮಾಡಲು ಮುಂದಾಗಿದ್ದಾರೆ. ಬೆಸ್ಕಾಂನಲ್ಲಿ 3–4 ಲಕ್ಷ ಅರ್ಜಿಗಳು ಬಂದಿವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಸರ್ಕಾರ 5% ಹೆಚ್ಚುವರಿ ಶುಲ್ಕ ಹೇರುತ್ತಿದೆ. ಇದು ಜನರಿಗೆ ಹೊರೆಯಾಗಲಿದೆ” ಎಂದು ಆರೋಪಿಸಿದರು.
ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರುತ್ತಾ, “ಬಿ ಖಾತಾ ಸಮಸ್ಯೆ 1995ರಿಂದಲೂ ಇದೆ. 1997ರಲ್ಲಿ ಈ ಬಗ್ಗೆ ಆದೇಶ ಹೊರಬಂದಿತ್ತು. ನಮ್ಮ ಆಡಳಿತದಲ್ಲಿ ನಗರಾಭಿವೃದ್ಧಿಗೆ ಹಲವಾರು ಕ್ರಮ ಕೈಗೊಂಡಿದ್ದೇವೆ. 7 ನಗರಸಭೆಗಳನ್ನು 9ಕ್ಕೆ ಏರಿಸಿದ್ದೇವೆ, 68 ವಾರ್ಡ್ಗಳನ್ನು 98ಕ್ಕೆ ವಿಸ್ತರಿಸಿದ್ದೇವೆ, 110 ಹಳ್ಳಿಗಳನ್ನು ಬಿಬಿಎಂಪಿಗೆ ಸೇರಿಸಿದ್ದೇವೆ. ಐದು ವರ್ಷಗಳಲ್ಲಿ ಸುಮಾರು ₹25 ಸಾವಿರ ಕೋಟಿ ಅನುದಾನ ತಂದಿದ್ದೆವು.” ಎಂದು ಹೇಳಿಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.