ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ, ಬಿಜೆಪಿ ಪಾದಯಾತ್ರೆಗೆ ಬೆಂಬಲವಿಲ್ಲ; ಹೆಚ್​ಡಿ ಕುಮಾರಸ್ವಾಮಿ

ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ಸಮಯದಲ್ಲೊಮ್ಮೆ ಮಿತ್ರಪಕ್ಷ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಹೆಚ್​ಡಿ ಕುಮಾರಸ್ವಾಮಿ ನಂತರ ಮುನಿಸು ತಣ್ಣಗಾಗಿಸಿಕೊಂಡಿದ್ದರು. ಇದೀಗ ಕೇಂದ್ರ ಸಚಿವರಾಗಿದ್ದುಕೊಂಡೇ ಬಿಜೆಪಿ ಪಾದಯಾತ್ರೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ ಹೇಳಿದ್ದೇನು? ವಿವರಗಳಿಗೆ ಮುಂದೆ ಓದಿ.

ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ, ಬಿಜೆಪಿ ಪಾದಯಾತ್ರೆಗೆ ಬೆಂಬಲವಿಲ್ಲ; ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Follow us
| Updated By: ಗಣಪತಿ ಶರ್ಮ

Updated on: Jul 31, 2024 | 11:39 AM

ನವದೆಹಲಿ, ಜುಲೈ 31: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಆದರೆ, ಇದಕ್ಕೆ ಜೆಡಿಎಸ್ ಬೆಂಬಲ ಇಲ್ಲ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕಡ್ಡಿಮುರಿದಂತೆ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು (ಜೆಡಿಎಸ್) ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಅದಕ್ಕೆ ನಮ್ಮ ಬೆಂಬಲವಿಲ್ಲ ಎಂದರು.

ಪಾದಯಾತ್ರೆಗೆ ಬೆಂಬಲ ನೀಡದೇ ಇರುವ ಬಗ್ಗೆ ಜೆಡಿಎಸ್ ಕೋರ್​ ಕಮಿಟಿ ಅಧ್ಯಕ್ಷರು ಮಂಗಳವಾರದ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ಕೇರಳದಲ್ಲಿ ಮಳೆಯಿಂದ ನೂರಾರು ಜನರ ಜೀವಕ್ಕೆ ಹಾನಿಯಾಗಿದೆ. ರಾಜ್ಯದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಆಗಿದೆ. ಮತ್ತೊಂದೆಡೆ, ಈಗ ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಸಮಯ. ಹೀಗಾಗಿ ಪಾದಯಾತ್ರೆಯಲ್ಲಿ ಜೆಡಿಎಸ್​​​ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದರು.

ಬಿಜೆಪಿಯ ಪಾದಯಾತ್ರೆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಮಾಡುತ್ತಿದ್ದಾರೆ. ಈ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ ಎಂಬುದು ನಮ್ಮ ನಿಲುವು. ಹೀಗಾಗಿ ಅದರಿಂದ ಹಿಂದೆ ಸರಿದಿದ್ದೇವೆ. ಆ ಭಾಗದ ಜನರ ಭಾವನೆ ಮುಖ್ಯ. ಹಾಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಈ ಹಿಂದೆ ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ಸಂದರ್ಭದಲ್ಲಿಯು ಬಿಜೆಪಿ ಬಗ್ಗೆ ಕುಮಾರಸ್ವಾಮಿ ತುಸು ಅಸಮಾಧಾನ ವ್ಯಕ್ತಪಡಿಸಿದ್ದರು. ಕೇವಲ 2 ಸೀಟಿಗಾಗಿ ಇಷ್ಟೆಲ್ಲ ಒದ್ದಾಡಬೇಕಾ ಎಂದಿದ್ದು ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅವರು ಕೇಂದ್ರ ಸಚಿವರಾಗಿದ್ದುಕೊಂಡು ಮೈತ್ರಿ ಪಕ್ಷದ ಬಗ್ಗೆ ಅಸಮಾಧಾನದ ಹೇಳಿಕೆ ನೀಡಿದ್ದಾರೆ.

ಬಿಜೆಪಿ ನಾಯಕರಿಂದಲೂ ಅಪಸ್ವರ

ಅತ್ತ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಪಾದಯಾತ್ರೆಗೆ ಅಪಸ್ವರ ತೆಗೆದಿದ್ದರು. ಅಲ್ಲದೆ, ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಪ್ರರ್ಯಾಯ ಪಾದಯಾತ್ರೆಯ ಬಗ್ಗೆ ಚರ್ಚೆ ನಡೆಸಿದ್ದು, ಕೂಡಲಸಂಗಮ ಅಥವಾ ಹುಬ್ಬಳ್ಳಿಯಿಂದ ಬಳ್ಳಾರಿಯವರೆಗೆ ಹೆಜ್ಜೆ ಹಾಕಲು ಸಮಾಲೋಚನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಬೆಂಗಳೂರು-ಮೈಸೂರು ಪಾದಯಾತ್ರೆಗೆ ಆರಂಭದಲ್ಲೇ ವಿಘ್ನ, ಅಪಸ್ವರ ಎತ್ತಿದ ಜೆಡಿಎಸ್

ಈ ಎಲ್ಲ ಬೆಳವಣಿಗೆಗಳು ರಾಜ್ಯ ಬಿಜೆಪಿ ಪಾದಯಾತ್ರೆ ಯಶಸ್ವಿಯಾಗುವ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ