ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 800 ಹುದ್ದೆಗಳು ಶೀಘ್ರದಲ್ಲೆ ಭರ್ತಿ: ದಿನೇಶ್ ಗುಂಡೂರಾವ್

ಕಳೆದ ಐದು ವರ್ಷಗಳಲ್ಲಿ ಯಾವುದೇ ಸಿಬ್ಬಂದಿ ನೇಮಕಾತಿ ಮಾಡಲಾಗಿಲ್ಲ. ಇದು ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯಕೀಯ ಸೇವೆಯ ಗುಣಮಟ್ಟದ ಮೇಲೆ ತೀವ್ರ ಪರಿಣಾಮ ಬೀರಿದೆ. ಹೀಗಾಗಿ ಹಂತ ಹಂತವಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಅಗತ್ಯವಿದೆ. ಮೊದಲ ಹಂತದಲ್ಲಿ ರಾಜ್ಯಾದ್ಯಂತ 800 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುತ್ತಿದ್ದೇವೆ ಎಂದು ಸಚಿವ ದಿನೇಶ್​ ಗುಂಡುರಾವ್​ ಹೇಳಿದರು.

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 800 ಹುದ್ದೆಗಳು ಶೀಘ್ರದಲ್ಲೆ ಭರ್ತಿ: ದಿನೇಶ್ ಗುಂಡೂರಾವ್
ಸಚಿವ ದಿನೇಶ್​ ಗುಂಡುರಾವ್​
ವಿವೇಕ ಬಿರಾದಾರ

Updated on: Dec 03, 2023 | 2:54 PM

ಮಂಗಳೂರು ಡಿ.03: ಆರೋಗ್ಯ ಇಲಾಖೆಯಲ್ಲಿ (Health Department) ಖಾಲಿ ಇರುವ 800 ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಈಗಾಗಲೇ ಪ್ರಕ್ರಿಯೆ ಆರಂಭವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದರು. ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿರುವ ಸರಕಾರಿ ಸಂಯುಕ್ತ ಆಯುಷ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ, ಫಿಸಿಯೋಥೆರಪಿ ಘಟಕಗಳು ಹಾಗೂ ಪ್ರಯೋಗಾಲಯ ಸೇರಿದಂತೆ ನಾನಾ ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಶುಶ್ರೂಷಕರು, ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ, ಪ್ರಯೋಗಾಲಯ ತಂತ್ರಜ್ಞರು ಸೇರಿದಂತೆ 800 ಅಭ್ಯರ್ಥಿಗಳ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದರು.

ನಾವು ರಾಜ್ಯದಲ್ಲಿ ಅತ್ಯುತ್ತಮ ಮೂಲಸೌಕರ್ಯವನ್ನು ಹೊಂದಿದ್ದೇವೆ, ಆದರೆ ಕಳೆದ ಐದು ವರ್ಷಗಳಲ್ಲಿ ಯಾವುದೇ ಸಿಬ್ಬಂದಿ ನೇಮಕಾತಿ ಮಾಡಲಾಗಿಲ್ಲ. ಇದು ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯಕೀಯ ಸೇವೆಯ ಗುಣಮಟ್ಟದ ಮೇಲೆ ತೀವ್ರ ಪರಿಣಾಮ ಬೀರಿದೆ. ಹೀಗಾಗಿ ಹಂತ ಹಂತವಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಅಗತ್ಯವಿದೆ. ಮೊದಲ ಹಂತದಲ್ಲಿ ರಾಜ್ಯಾದ್ಯಂತ 800 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಈ ವರ್ಷ ದಕ್ಷಿಣ ಕನ್ನಡದ ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕುಗಳಿಗೆ ಮೂರು ಸಂಚಾರಿ ಆಯುಷ್ ಘಟಕಗಳನ್ನು ಒದಗಿಸಲಾಗುವುದು. ಈ ಮೊಬೈಲ್ ಘಟಕಗಳು ಹಳ್ಳಿಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರು ಮತ್ತು ಬಹುಪಯೋಗಿ ಸಿಬ್ಬಂದಿಗಳನ್ನು ಹೊಂದಿರುತ್ತವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ರಾಜ್ಯಾದ್ಯಂತ ಡಯಾಲಿಸಿಸ್​ ಕೇಂದ್ರಗಳ ಸಿಬ್ಬಂದಿ ಮುಷ್ಕರ: ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಿಷ್ಟು

ಆಯುಷ್ ಆಸ್ಪತ್ರೆಯಲ್ಲಿ ಲಭ್ಯವಿರುವ ಸಾಂಪ್ರದಾಯಿಕ ಚಿಕಿತ್ಸಾ ವಿಧಾನದ ಬಗ್ಗೆ ಸಚಿವರು, ಸೌಲಭ್ಯಗಳನ್ನು ಮೇಲ್ದರ್ಜೆಗೆ ಏರಿಸುವ ಮತ್ತು ಸಂಶೋಧನೆಗೆ ಹೆಚ್ಚಿನ ಅವಕಾಶವನ್ನು ನೀಡುವ ಅಗತ್ಯವಿದೆ. ಎಂಸಿಎಫ್, ಎಂಆರ್‌ಪಿಎಲ್ ಮತ್ತು ಇತರ ಖಾಸಗಿ ಕಂಪನಿಗಳು ತಮ್ಮ ಸಿಎಸ್‌ಆರ್ ನಿಧಿಯನ್ನು ಬಳಸಿಕೊಂಡು ಸಮುದಾಯಕ್ಕೆ ಸೇವೆ ಸಲ್ಲಿಸಲು ಕೈಜೋಡಿಸುತ್ತಿವೆ. ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಆಯುಷ್ ಆಸ್ಪತ್ರೆಗೆ ಸುಮಾರು 38.5 ಲಕ್ಷದ ರೂ. ದೊರೆಯಲಿದೆ. ಆಸ್ಪತ್ರೆಗೆ ಈಗಾಗಲೇ ಆಯುಷ್ ಸ್ಪೋರ್ಟ್ಸ್ ಮೆಡಿಸಿನ್ ಮತ್ತು ರಿಸರ್ಚ್ ಸೆಂಟರ್ ಮಂಜೂರಾಗಿದ್ದು, ವಿವರವಾದ ಯೋಜನೆಗೆ ಶೀಘ್ರವೇ ರಾಜ್ಯ ಸರ್ಕಾರದಿಂದ ಅನುಮೋದನೆ ದೊರೆಯಲಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಅಧಿಕಾರಿ ಮೊಹಮ್ಮದ್ ಇಕ್ಬಾಲ್ ಮಾತನಾಡಿ, ಮಂಗಳೂರಿನ ಆಯುಷ್ ಆಸ್ಪತ್ರೆಯಲ್ಲಿ ಒಂದೇ ಸೂರಿನಡಿ ಆಯುಷ್ (ಆಯುರ್ವೇದ, ಯೋಗ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ) ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಸಂಧಿವಾತ ಮತ್ತು ಅಸ್ತಮಾದ ಅತ್ಯುತ್ತಮ ಕೇಂದ್ರವಾಗಿ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಲಾಗುವುದು. ಈ ಸಂದರ್ಭದಲ್ಲಿ ಎಂಆರ್‌ಪಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ (ರಿಫೈನರಿ) ಮುಂಡ್ಕೂರು ಶ್ಯಾಮಪ್ರಸಾದ್ ಕಾಮತ್ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Follow Us