ಪ್ರತಿ ಜಿಲ್ಲೆಯಲ್ಲಿ ಕಿಮೋಥೆರಪಿ ಡೇಕೇರ್ ಸೆಂಟರ್‌; ಆರೋಗ್ಯ ಸಚಿವರಿಂದ ಮಹತ್ವದ ಘೋಷಣೆ

ಜನರಿಗೆ ಆರೋಗ್ಯ ಭಾಗ್ಯ ಕರುಣಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವ ಕರ್ನಾಟಕ ಸರ್ಕಾರ ಇದೀಗ ಪ್ರತಿ ಜಿಲ್ಲೆಯಲ್ಲಿ ಕಿಮೋಥೆರಪಿ ಡೇಕೇರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. ವಿವರ ಇಲ್ಲಿದೆ.

ಪ್ರತಿ ಜಿಲ್ಲೆಯಲ್ಲಿ ಕಿಮೋಥೆರಪಿ ಡೇಕೇರ್ ಸೆಂಟರ್‌; ಆರೋಗ್ಯ ಸಚಿವರಿಂದ ಮಹತ್ವದ ಘೋಷಣೆ
ಸಾಂದರ್ಭಿಕ ಚಿತ್ರ

Updated on: Aug 28, 2024 | 9:44 AM

ಬೆಂಗಳೂರು, ಆಗಸ್ಟ್ 28: ಮುಂದಿನ ತಿಂಗಳೊಳಗೆ ಕರ್ನಾಟಕದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇಕೇರ್ ಸೆಂಟರ್‌ಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಶವಾಗಾರ, ಅಡುಗೆ ಕೋಣೆ, ಬೋಧನಾ ಬ್ಲಾಕ್, ಲಾಂಡ್ರಿ ಬ್ಲಾಕ್ ಮತ್ತು ಜೈವಿಕ ವೈದ್ಯಕೀಯ ತ್ಯಾಜ್ಯ ಕೊಠಡಿ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದ್ದಾರೆ.

ಈಗಿನ ಸ್ಥಿತಿಯಲ್ಲಿ ಗ್ರಾಮೀಣ ಭಾಗದ ಕ್ಯಾನ್ಸರ್ ರೋಗಿಗಳು ಚಿಕಿತ್ಸೆಗಾಗಿ ನಗರಗಳಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಬರಬೇಕಾಗುತ್ತದೆ. ರಾಜ್ಯಾದ್ಯಂತ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇಕೇರ್ ಕೇಂದ್ರಗಳನ್ನು ಸ್ಥಾಪಿಸಿದರೆ, ಕ್ಯಾನ್ಸರ್ ರೋಗಿಗಳು ದೂರ ಪ್ರಯಾಣಿಸುವ ಅಗತ್ಯವಿಲ್ಲ. ಹೀಗಾಗಿ ಒಂದು ತಿಂಗಳ ಅವಧಿಯಲ್ಲಿ ಕಿಮೋಥೆರಪಿ ಡೇಕೇರ್ ಸೆಂಟರ್‌ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಅಪಘಾತಕ್ಕೀಡಾದವರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ಆಂಬ್ಯುಲೆನ್ಸ್ ಸೇವೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಅಪಘಾತ ಸಂತ್ರಸ್ತರಿಗೆ ಮಾತ್ರ ಚಿಕಿತ್ಸೆ ನೀಡುವುದಕ್ಕಾಗಿ 65 ಆಂಬ್ಯುಲೆನ್ಸ್‌ಗಳು ಕಾರ್ಯನಿರ್ವಹಿಸಲಿವೆ. ಇದು ರಾಜ್ಯ ಸರ್ಕಾರದ ಹೊಸ ಯೋಜನೆಯಾಗಿದ್ದು, ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಅವರು ಸೇವೆಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಈ ಮಧ್ಯೆ, ಖಾಸಗಿ ವೈದ್ಯರಿಗಿಂತ ಸರ್ಕಾರಿ ಆಸ್ಪತ್ರೆ ವೈದ್ಯರು ಅನುಭವಿಗಳಾಗಿರಬೇಕು. ಆರೋಗ್ಯ ಸೇವೆ ನೀಡುವಲ್ಲಿ ಖಾಸಗಿ ಆಸ್ಪತ್ರೆಗಳಿಗಿಂತ ಹಿಂದೆ ಬೀಳಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ಸರಿಸಮನಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹೈಟೆಕ್ ಆರೋಗ್ಯ ಸೇವೆಗಳು ಲಭ್ಯವಾಗಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ರೊಬೊಟಿಕ್ ಸರ್ಜರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ಗೃಹ ಆರೋಗ್ಯ ಯೋಜನೆ: ಮುಂದಿನ ತಿಂಗಳಿನಿಂದ ಮನೆ ಮನೆಗೆ ಬರಲಿದೆ ಕ್ಲಿನಿಕ್, ಚಿಕಿತ್ಸೆ ಜೊತೆ ಮನೆ ಬಾಗಿಲಿಗೆ ಉಚಿತ ಔಷಧಿ

ಮತ್ತೊಂದೆಡೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ‘ಗೃಹ ಆರೋಗ್ಯ’ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಮುಂದಿನ ತಿಂಗಳಿನಿಂದ ಮನೆ ಬಾಗಿಲಿನಲ್ಲಿಯೇ ಚಿಕಿತ್ಸೆ ಹಾಗೂ ಉಚಿತ ಔಷಧ ನೀಡುವ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಕೆಲವು ದಿನಗಳ ಹಿಂದಷ್ಟೇ ಆರೋಗ್ಯ ಸಚಿವರು ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:42 am, Wed, 28 August 24

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us