ಪ್ರವಾಸಿಗರ ಗಮನಕ್ಕೆ: ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ; ಅಲರ್ಟ್​ ಘೋಷಣೆ, ಹಲವಡೆ ರಸ್ತೆ ಬಂದ್, ಮುಳುಗಿದ ದೇವಸ್ಥಾನದ ಆವರಣ

| Updated By: ವಿವೇಕ ಬಿರಾದಾರ

Updated on: Jul 23, 2023 | 12:25 PM

ಕರ್ನಾಟಕದ ಮಲೆನಾಡು ಜಿಲ್ಲೆಗಳಾದ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಅಬ್ಬರದ ಮಳೆ ಮುಂದುವರಿದಿದೆ. ಕೊಡಗಿನಲ್ಲಿ ಭಾರೀ ಗಾಳಿ ಸಹಿತ ಸುರಿದ ಮಳೆಗೆ ಹಲವು ಕಡೆ ಮರ, ವಿದ್ಯುತ್ ಕಂಬಗಳು ರಸ್ತೆಗೆ ಉರುಳಿ ಬಿದ್ದಿವೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಮತ್ತಷ್ಟು ಚುರುಕಾಗಿದೆ.

ಪ್ರವಾಸಿಗರ ಗಮನಕ್ಕೆ: ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ; ಅಲರ್ಟ್​ ಘೋಷಣೆ, ಹಲವಡೆ ರಸ್ತೆ ಬಂದ್, ಮುಳುಗಿದ ದೇವಸ್ಥಾನದ ಆವರಣ
ಕೊಡಗಿನ ರಾಜ್ಯ ಹೆದ್ದಾರಿ ಮೇಲೆ ಬಿದ್ದ ವಿದ್ಯುತ್​ ಕಂಬ ಮತ್ತು ಮರ
Follow us on

ಬೆಂಗಳೂರು ಜು.23: ಕರ್ನಾಟಕದ (Karnataka) ಮಲೆನಾಡು (Malenadu) ಜಿಲ್ಲೆಗಳಾದ ಕೊಡಗು (Kodagu) ಮತ್ತು ಚಿಕ್ಕಮಗಳೂರಿನಲ್ಲಿ (Chikkamagaluru) ಅಬ್ಬರದ ಮಳೆ ಮುಂದುವರಿದಿದೆ. ಕೊಡಗಿನಲ್ಲಿ ಭಾರೀ ಗಾಳಿ ಸಹಿತ ಸುರಿದ ಮಳೆಗೆ ಹಲವು ಕಡೆ ಮರ, ವಿದ್ಯುತ್ ಕಂಬಗಳು ರಸ್ತೆಗೆ ಉರುಳಿ ಬಿದ್ದು ಗ್ರಾಮಗಳಲ್ಲಿ ಕತ್ತಲು ಆವರಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಮತ್ತಷ್ಟು ಚುರುಕಾಗಿದೆ. ಇದರಿಂದ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಒಳಹರಿವು ಹೆಚ್ಚಾದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆ ದೇವಾಲಯ ಬಳಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ದೇವಾಲಯದ ವಾಹನ ಪಾರ್ಕಿಂಗ್​ನಲ್ಲಿ ನಿಲ್ಲಿಸಿದ್ದ ಪ್ರವಾಸಿಗರ ವಾಹನಗಳು ಮುಳುಗಡೆಯಾಗಿವೆ. ಹಾಗೆ ಗಾಂಧಿ ಮೈದಾನ, ಪ್ಯಾರ್ಲಲ್ ರಸ್ತೆಗೂ ನದಿ ನೀರು ನುಗ್ಗಿದೆ. ಪ್ಯಾರಲ್ ರಸ್ತೆ ಮುಳುಗಡೆಯಿಂದ ದೇವಸ್ಥಾನ ಬಳಿ ಟ್ರಾಫಿಕ್​ಜಾಮ್ ಆಗಿದೆ.

ಇನ್ನು ಕುದುರೆಮುಖದಲ್ಲಿ ಭಾರಿ ಮಳೆ ಹಿನ್ನೆಲೆ ಭದ್ರಾ ನದಿಯ ಹರಿವಿನಲ್ಲಿ ಏರಿಕೆಯಾಗಿದೆ. ಭದ್ರಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಜಾಂಬಳೆ ಸಮೀಪದ ಕಳಸ-ಕುದುರೆಮುಖ-ಮಂಗಳೂರು ರಸ್ತೆ ಮೇಲೆ ನೀರು ಹರಿಯುತ್ತಿದೆ. ನೀರಿನ ಮಧ್ಯೆಯೂ ವಾಹನಗಳು ಸಂಚರಿಸುತ್ತಿವೆ.

ಇದನ್ನೂ ಓದಿ: Karnataka Weather: ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಎರಡು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಹಾಗೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿಯ ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 173ರ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ರಸ್ತೆ ಬಂದ್ ಮಾಡಲಾಗಿದೆ. ಹೀಗಾಗಿ ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ. ಆಲ್ದೂರು ಮೂಲಕ ಮೂಡಿಗೆರೆ, ಮಂಗಳೂರಿಗೆ 20 ಕಿಮೀ ಸುತ್ತಿಕೊಂಡು ವಾಹನಗಳು ಹೋಗುತ್ತಿವೆ.

ಧರೆಗುರುಳಿದ ಮರ, ವಿದ್ಯುತ್ ಕಂಬ: ವಿದ್ಯುತ್​ ವ್ಯತ್ಯಯ, ರಸ್ತೆ ಬಂದ್​

ಕೊಡಗು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ಹಲವೆಡೆ ಮರ, ವಿದ್ಯುತ್ ಕಂಬ ರಸ್ತೆಗೆ ಮೇಲೆ ಬಿದ್ದಿವೆ. ಹೀಗೆ ಕೊಡಗು-ದಕ್ಷಿಣ ಕನ್ನಡ ಗಡಿ ಗ್ರಾಮ ಸಂಪಾಜೆಯಲ್ಲಿ ಹೆದ್ದಾರಿಗೆ ಬೃಹತ್ ಮರ ಉರುಳಿದೆ. ಇದರಿಂದ ಬಂಗ್ಲೆಗುಡ್ಡೆ ಬಳಿ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಅರಣ್ಯ ಇಲಾಖೆ, ಸೆಸ್ಕ್, ಸ್ಥಳೀಯಾಡಳಿತದಿಂದ ಮರ ತೆರವು ಮಾಡಲಾಗಿದೆ. ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ.

ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತ

ದಕ್ಷಿಣ ಮಂದಾಕಿನಿ ಕಾವೇರಿ ನದಿ ‌ನೀರಿನ‌ ಮಟ್ಟದಲ್ಲಿ ಗಣನೀಯ ಏರಿಕೆಯಾಗದ ಹಿನ್ನೆಲೆ ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಭಾಗಮಂಡಲ-ನಾಪೋಕ್ಲು ರಸ್ತೆ ಮುಳುಗಿದೆ. ಮಡಿಕೇರಿ ತಾಲೂಕಿನ ಹೊದವಾಡ ರಸ್ತೆಯೂ ಮುಳುಗಿದೆ. ಸುಂಟಿಕೊಪ್ಪ-ಮಾದಾಪುರ ರಸ್ತೆ ಮಧ್ಯೆ ಮರ ಧರೆಗುರುಳಿದೆ. ಗಾಳಿ ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ, ಕುಕ್ಕೆ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

ದಕ್ಷಿಣ ಕನ್ನಡ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಧಾರಾಕಾರ ಮಳೆ ಹಿನ್ನೆಲೆ ಘಟ್ಟ ಪ್ರದೇಶದಿಂದ ಭಾರಿ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಹೀಗಾಗಿ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ, ಈ ಹಿನ್ನೆಲೆ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ನದಿ ದಡಕ್ಕೆ ಹೋಗದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ.

ಸ್ನಾನಘಟ್ಟದ ಬಳಿ ಗೃಹರಕ್ಷಕ ಹಾಗೂ ಎಸ್‌ಡಿಆರ್‌ಎಫ್ ತಂಡವನ್ನು ನಿಯೋಜಿಸಲಾಗಿದೆ. ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

ಮಹಾಮಾಯ ದೇಗುಲದ ಆವರಣ ಜಲಾವೃತ

ಉತ್ತರ ಕನ್ನಡ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಕಾಳಿ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಕದ್ರಾ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಕದ್ರಾ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.

ಕದ್ರಾ ಡ್ಯಾಂನಿಂದ ನೀರು ಬಿಡುಗಡೆ ಹಿನ್ನೆಲೆ ಮಹಾಮಾಯ ದೇಗುಲದ ಆವರಣ ಜಲಾವೃತಗೊಂಡಿದೆ. ದ್ರಾ ಡ್ಯಾಂ ಸುತ್ತಮುತ್ತಲಿನ 100ಕ್ಕೂ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗ್ರಾಮಸ್ಥರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:41 am, Sun, 23 July 23