Karnataka Weather Forecast: ಕರ್ನಾಟಕದಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
Monsoon 2026: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಕೆಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಮಳೆಯಾಗಲಿದೆ? ಎನ್ನುವ ವಿವರ ಇಲ್ಲಿದೆ.

ಬೆಂಗಳೂರು, (ಮೇ 21): ಕರ್ನಾಟಕದಾದ್ಯಂತ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ (karnataka Rains) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂಗಾರು ಪೂರ್ವ (pre monsoon) ಮಾರುಗಳ ತೀವ್ರತೆ ಹೆಚ್ಚಾಗಿರುವುದರಿಂದ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು (Bengaluru), ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.
ಮುಖ್ಯಾಂಶಗಳು
- ಇಂದಿನಿಂದ ರಾಜ್ಯಾದ್ಯಂತ 4 ದಿನ ಭಾರಿ ಮಳೆಯಾಗುವ ಸಾಧ್ಯತೆ
- ಮಳೆಯಾಗುವ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ
- ಬೆಂಗಳೂರಿನಲ್ಲಿ ಇಂದು ಆರೆಂಜ್ ಅಲರ್ಟ್, 3 ದಿನ ಯೆಲ್ಲೋ ಅಲರ್ಟ್
- 4 ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ
- ಇಂದು ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಎಲ್ಲೆಲ್ಲಿ ಮಳೆ?
ಬೆಂಗಳೂರಿನಲ್ಲಿ ಇಂದು (ಮೇ 21) ಆರೆಂಜ್ ಹಾಗೂ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರ ಮಾತ್ರವಲ್ಲದೇ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್, ಇನ್ನುಳಿದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಮೇ 22 ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಮೇ 23ರಂದು ಬೀದರ್ ಹಾಗೂ ಕಲಬುರಗಿ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಡಲಿಗೆ ಇಳಿಯದಂತೆ ಕರಾವಳಿ ಮೀನುಗಾರರಿಗೆ ಮುನ್ನೆಚ್ಚರಿಕೆ
ಬಂಗಾಳಕೊಲ್ಲಿ, ಅರಬ್ಬೀ ಸಮುದ್ರದ ವಿವಿಧ ಭಾಗಗಳಲ್ಲಿ ಬಿರುಗಾಳಿ ಹಿನ್ನೆಲೆಯಲ್ಲಿ ಕಡಲಿಗೆ ಇಳಿಯದಂತೆ ಕರಾವಳಿ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕೆಲವೆಡೆ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಹೀಗಾಗಿ ಈಗಾಗಲೇ ಕಡಲಿಗೆ ಇಳಿದವರು ತಕ್ಷಣ ತೀರ ಪ್ರದೇಶ ಸೇರಬೇಕೆಂದು ಸೂಚನೆ ನೀಡಲಾಗಿದೆ. ಇದರಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ಗಳು ಮಲ್ಪೆ ಹಿನ್ನೀರು ಪರಿಸರದಲ್ಲಿ ವಾಪಸ್ ಆಗುತ್ತಿವೆ.





