
ಚಿಕ್ಕಮಗಳೂರು/ಕಾರವಾರ, (ಆಗಸ್ಟ್ 29): ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರ ಮುಂದುವರೆದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್ ಮೊದಲ ವಾರದವರೆಗೂ ಮಳೆ ಅಬ್ಬರ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಆಗಸ್ಟ್ 30) ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ (ಆಗಸ್ಟ್ 30) ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ ಹಾಗೂ ತರೀಕೆರೆ ತಾಲೂಕಿನ ಲಕ್ಕವಳ್ಳಿ ಹೋಬಳಿಯ ಲಿಂಗದಹಳ್ಳಿ ಹೋಬಳಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ತೀವ್ರವಾಗಿದ್ದು, ಗಣೇಶ ಚತುರ್ಥಿ ಹಬ್ಬವನ್ನು ಮಳೆಯಲ್ಲಿಯೇ ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಈ ವಾರ ಉತ್ತರ ಕನ್ನಡ ಜಿಲ್ಲೆ ವಿದ್ಯಾರ್ಥಿಗಳು ಗಣೇಶ ಚರ್ತುರ್ಥಿಯ ರಜೆ ಪಡೆದಿದ್ದ ಮರುದಿನವೇ ಮಳೆಯಿಂದಾಗಿ ರಜೆ ಪಡೆದುಕೊಂಡಿದ್ದರು. ಶುಕ್ರವಾರ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದ್ದರಿಂದ ಶಾಲಾ ಕಾಲೇಜುಗಳು ನಡೆದಿತ್ತು. ಅದರೆ, ಶನಿವಾರ ಭಾರೀ ಮಳೆಯಾಗುವ ಸೂಚನೆ ಇರುವ ಕಾರಣ ಉತ್ತರ ಕನ್ನಡ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ನಾಳೆ( ಆಗಸ್ಟ್ 30) ರಜೆ ನೀಡಲಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವರುಣ ಅಬ್ಬರ ಜೋರಾಗಿರುವುದರಿಂದ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಭಾರಿ ಮಳೆ ಸಾಧ್ಯತೆ ಹಿನ್ನಲೆ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಣೆ ಮಾಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ ಮುಂದುರಿದೆ. ಹೀಗಾಗಿ ಹೊನ್ನಾವರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಮಳೆಯಿಂದಾಗಿ ಈ ವಾರ ಹಲವು ದಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆದ್ರೆ, ನಾಳೆ ಮಾತ್ರ ಹೊನ್ನಾವರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
Published On - 11:06 pm, Fri, 29 August 25