ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

| Updated By: ಗಣಪತಿ ಶರ್ಮ

Updated on: Sep 26, 2023 | 5:17 PM

IMD Alert; ಕಳೆದ 24 ಗಂಟೆಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಿ ಗೌರಿಬಿದನೂರಿನಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 76 ಮಿಮೀ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ 72.5 ಮಿಮೀ, ಬೀದರ್‌ನಲ್ಲಿ 63 ಮಿಮೀ ಮಳೆಯಾಗಿದೆ. ಅಕ್ಟೋಬರ್ 4 ರವರೆಗೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಸೆಪ್ಟೆಂಬರ್ 26: ಇಂದಿನಿಂದ (ಮಂಗಳವಾರ) ಅಕ್ಟೋಬರ್ 4 ರವರೆಗೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಮಳೆಯಾಗಲಿದೆ (Karnataka Rains) ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗಲಿದ್ದರೆ, ಇನ್ನು ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ (Coastal Districts) 64.5 ಮಿಮೀ.ನಿಂದ 100 ಮಿಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಿ ಗೌರಿಬಿದನೂರಿನಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 76 ಮಿಮೀ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ 72.5 ಮಿಮೀ, ಬೀದರ್‌ನಲ್ಲಿ 63 ಮಿಮೀ ಮಳೆಯಾಗಿದೆ.

ಈ ಮಧ್ಯೆ, ಮಳೆ ಕೊರತೆಯ ಮಧ್ಯೆ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳು ಮುಂದುವರೆದಿವೆ. ಈ ಮಧ್ಯೆ, ಕಾವೇರಿ ನೀರು ನಿಯಂತ್ರಣ ಸಮಿತಿಯು ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15 ರವರೆಗೆ ತಮಿಳುನಾಡಿಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಮತ್ತೆ ಆದೇಶಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ರಾಜ್ಯದಲ್ಲಿ ಮಳೆ ಕೊರತೆ ಇದೆ. ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲ. ಹೀಗಾಗಿ ತಮಿಳುನಾಡಿಗೆ ಹೆಚ್ಚು ನೀರು ಬಿಡುವುದು ಅಸಾಧ್ಯ ಎಂದು ಕರ್ನಾಟಕದ ಅಧಿಕಾರಿಗಳು ಕಾವೇರಿ ನೀರು ನಿಯಂತ್ರಣ ಸಮಿತಿಯ ಮುಂದೆ ವಾದ ಮಂಡಿಸಿದ್ದಾರೆ. ಆದಾಗ್ಯೂ, ಪ್ರತಿ ದಿನ 3,000 ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಲಾಗಿದೆ. ಇದು ಕರ್ನಾಟಕದ ರೈತ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕರ್ನಾಟಕಕ್ಕೆ ತಪ್ಪದ ಸಂಕಷ್ಟ: ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯುಆರ್​ಸಿ ಆದೇಶ

ರಾಜ್ಯ ಸರ್ಕಾರದ ಮಾಹಿತಿ ಪ್ರಕಾರ, ಕಾವೇರಿ ಕೊಳ್ಳದಲ್ಲಿ ಶೇ 53 ಮಳೆ ಕೊರತೆ ಇದೆ. 161 ತಾಲೂಕುಗಳನ್ನು ಬರ ಪೀಡಿತ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ. 34 ತಾಲೂಕುಗಳು ಭಾಗಶಃ ಬರಕ್ಕೆ ತುತ್ತಾಗಿವೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿರುವುದು ರೈತರು ನಿಟ್ಟುಸಿರು ಬಿಡುವಂತೆ ಮಾಡಿದೆ.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ