ಕರಾವಳಿ ಕರ್ನಾಟಕದಲ್ಲಿ ಮುಂದುವರಿದ ಮಳೆ, ರೆಡ್ ಅಲರ್ಟ್ ಘೋಷಣೆ, ಮಣಿಪಾಲದಲ್ಲಿ ರಸ್ತೆ ಬದಿ ಗುಡ್ಡ ಕುಸಿತ

|

Updated on: Jul 04, 2023 | 4:27 PM

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮಣಿಪಾಲದ ಮುಖ್ಯ ರಸ್ತೆಯ ಪಕ್ಕದಲ್ಲಿದ್ದ ಗುಡ್ಡವೊಂದು ಮಂಗಳವಾರ ಕುಸಿದು ಬಿದ್ದಿದೆ. ಕುಸಿದ ಗುಡ್ಡದ ಮಣ್ಣು ರಸ್ತೆಗೆ ಬಿದ್ದಿದೆ.

ಕರಾವಳಿ ಕರ್ನಾಟಕದಲ್ಲಿ ಮುಂದುವರಿದ ಮಳೆ, ರೆಡ್ ಅಲರ್ಟ್ ಘೋಷಣೆ, ಮಣಿಪಾಲದಲ್ಲಿ ರಸ್ತೆ ಬದಿ ಗುಡ್ಡ ಕುಸಿತ
ಸೋಮವಾರ ಸುರಿದ ಭಾರೀ ಮಳೆಗೆ ಮಂಗಳೂರಿನ ಪಂಪ್ವೆಲ್ ಮೇಲ್ಸೇತುವೆಯ ಕೆಳಭಾಗದಲ್ಲಿ ನೀರು ನಿಂತು ಕೆರೆಯಂತಾಗಿರುವುದು
Follow us on

ಬೆಂಗಳೂರು: ಕರಾವಳಿ ಕರ್ನಾಟಕದಲ್ಲಿ (Coastal Karnataka) ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.

ಈ ಮಧ್ಯೆ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮಣಿಪಾಲದ ಮುಖ್ಯ ರಸ್ತೆಯ ಪಕ್ಕದಲ್ಲಿದ್ದ ಗುಡ್ಡವೊಂದು ಮಂಗಳವಾರ ಕುಸಿದು ಬಿದ್ದಿದೆ. ಕುಸಿದ ಗುಡ್ಡದ ಮಣ್ಣು ರಸ್ತೆಗೆ ಬಿದ್ದಿದೆ. ಸತತ ಮಳೆಯಿಂದಾಗಿ ಗುಡ್ಡದ ಮಣ್ಣು ಮೃದುವಾಗಿ ಕುಸಿದು ಬೀಳಲು ಕಾರಣವಾಯಿತು. ಬೆಟ್ಟದ ಮೇಲೆ ಕಟ್ಟಡಗಳಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಪಂಪ್‌ವೆಲ್ ವೃತ್ತ ಸಂಪೂರ್ಣ ಜಲಾವೃತಗೊಂಡಿದ್ದು, ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪಂಪ್‌ವೆಲ್‌ ಮೇಲ್ಸೇತುವೆ ಕೆಳಗೆ ಮೊಣಕಾಲು ಎತ್ತರಕ್ಕೆ ನೀರು ಹರಿದು ಮಂಗಳೂರು ಕಡೆಗೆ ಹೋಗುವ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ನಗರಕ್ಕೆ ತೆರಳುವ ವಾಹನಗಳು ಜಂಕ್ಷನ್‌ನಲ್ಲಿ ಗಂಟೆಗಟ್ಟಲೆ ನಿಂತಿದ್ದವು. ಇದಲ್ಲದೆ ಕೊಟ್ಟಾರ ಚೌಕಿ ಜಂಕ್ಷನ್ ಕೂಡ ಭಾರೀ ಮಳೆಗೆ ಜಲಾವೃತವಾಗಿತ್ತು. ಪಂಪ್‌ವೆಲ್ ಮತ್ತು ಕೊಟ್ಟಾರ ಚೌಕಿಯಂತಹ ಜಂಕ್ಷನ್‌ಗಳು ಪ್ರತಿ ವರ್ಷ ಪ್ರವಾಹ ಪರಿಸ್ಥಿತಿ ಎದುರಿಸುವುದಲ್ಲದೆ ಜಲಾವೃತಗೊಳ್ಳುತ್ತವೆ. ಆದರೂ ಈ ಮರುಕಳಿಸುವ ಅವ್ಯವಸ್ಥೆಗೆ ಶಾಶ್ವತ ಪರಿಹಾರವನ್ನು ಕಂಡುಹಿಡಿಯಲಾಗಿಲ್ಲ ಎಂದು ನಗರವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್ ಆಯ್ತು ಪಂಪ್ವೆಲ್ ವಿಡಿಯೋ

ಪಂಪೆಲ್ ಫ್ಲೈ ಓವರ್ ಅಡಿಯಲ್ಲಿ ನಿಂತಿರುವ ನೀರಿನಲ್ಲಿ ವ್ಯಕ್ತಿಯೊಬ್ಬರು ಈಜುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆಟೋರಿಕ್ಷಾ ಚಾಲಕರೊಬ್ಬರು ಪ್ರವಾಹದೋಪಾದಿಯಲ್ಲಿ ನೀರು ಹರಿಯುತ್ತಿರುವ ರಸ್ತೆಯಲ್ಲಿ ರಿಕ್ಷಾ ನಿಲ್ಲಿಸಿ ನೃತ್ಯ ಮಾಡುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ ಬರುವ ಮಂಗಳೂರಿನ ಈ ಅವ್ಯವಸ್ಥೆಗೆ ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಹಿಡಿ ಶಾಪ ಹಾಕಿದ್ದಾರೆ.

ಬೆಂಗಳೂರಿನಲ್ಲೂ ಮಳೆ

ಬೆಂಗಳೂರಿನ ಕಾರ್ಪೊರೇಷನ್ ವೃತ್ತ, ಗಿರಿನಗರ, ಬಸವನಗುಡಿ, ಜೆಸಿ ರಸ್ತೆ, ನಂಜಪ್ಪ ಸರ್ಕಲ್, ಜಯನಗರ ಸೇರಿದಂತೆ ಹಲವು ಕಡೆಗಳಲ್ಲಿ ಮಂಗಳವಾರ ಮಧ್ಯಾಹ್ನ ಸಾಧಾರಣ ಮಳೆಯಾಗಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಶುಕ್ರವಾರ ಬೆಳಗಿನ ಜಾವದವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಬುಧವಾರ ಬೆಳಗಿನ ಜಾವದವರೆಗೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Bengaluru Rains: ಬೆಂಗಳೂರಿನ ಹಲವೆಡೆ ಬಿರುಗಾಳಿ ಸಹಿತ ಮಳೆ; ಬನ್ನೇರುಘಟ್ಟ ಪಾರ್ಕ್​ನಲ್ಲಿ ಪ್ರವಾಸಿಗರ ಪರದಾಟ

ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಗುರುವಾರ ಬೆಳಿಗ್ಗೆ 8.30 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Tue, 4 July 23