
ಬೆಂಗಳೂರು, (ಆ.7): ‘ ಭಾರತ–ಅಮೆರಿಕ ತಂತ್ರಜ್ಞಾನ ಮತ್ತು ನಾವೀನ್ಯತಾ ಸಹಭಾಗಿತ್ವದ ಪ್ರಮುಖ ಕೇಂದ್ರವಾಗಿ ಬೆಂಗಳೂರು ಬೆಳೆಯುತ್ತಿದ್ದು, ನಗರದಲ್ಲಿ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಸ್ಥಾಪನೆಯಾಗಬೇಕು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಬೆಂಗಳೂರಿನ ಸೈನ್ಸ್ ಗ್ಯಾಲರಿಯಲ್ಲಿ ‘ಕ್ವಾಂಟಮ್’ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 700ಕ್ಕೂ ಹೆಚ್ಚು ಅಮೆರಿಕನ್ ಕಂಪನಿಗಳು, 10 ಸಾವಿರಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು ಹಾಗೂ 10 ಲಕ್ಷಕ್ಕೂ ಹೆಚ್ಚು ತಂತ್ರಜ್ಞಾನ ಉದ್ಯೋಗಿಗಳಿದ್ದಾರೆ. ಭಾರತದಲ್ಲಿ ಅಮೆರಿಕದ ಅತಿ ದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯತೆಯ ಪಾಲುದಾರ ನಗರವಾಗಿರುವ ಬೆಂಗಳೂರಿಗೆ ಪೂರ್ಣ ಪ್ರಮಾಣದ ಕಾನ್ಸುಲೇಟ್ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದರು.
‘ನಾವು ಕೇವಲ ವ್ಯಾಪಾರ ಕಚೇರಿಯನ್ನು ಕೇಳುತ್ತಿಲ್ಲ. ಶಾಶ್ವತ ರಾಜತಾಂತ್ರಿಕ ಕಚೇರಿ ಇಲ್ಲಿ ಇರಬೇಕು. ಇದರಿಂದ ತಂತ್ರಜ್ಞಾನ, ನಾವೀನ್ಯತೆ, ಸಂಶೋಧನೆ, ರಕ್ಷಣೆ, ಬಾಹ್ಯಾಕಾಶ ಮತ್ತು ವಿಮಾನಯಾನ ಕ್ಷೇತ್ರಗಳಲ್ಲಿ ಸಹಕಾರ ಮತ್ತಷ್ಟು ವಿಸ್ತರಿಸಲಿದೆ. ಕಾನ್ಸುಲೇಟ್ ಸ್ಥಾಪನೆಗೆ ಅಗತ್ಯವಿರುವ ರಾಜ್ಯಮಟ್ಟದ ಎಲ್ಲ ಅನುಮತಿಗಳನ್ನು ತ್ವರಿತವಾಗಿ ನೀಡಲು ಕರ್ನಾಟಕ ಸರ್ಕಾರ ಸಿದ್ಧವಿದೆ. ಅಮೆರಿಕದ ರಾಯಭಾರ ಕಚೇರಿ ಮತ್ತು ಸಂಬಂಧಿಸಿದ ಸಂಸ್ಥೆಗಳೊಂದಿಗೆ ಸರ್ಕಾರ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದರು.
ಅಮೆರಿಕದ ಪ್ರಮುಖ ಶೈಕ್ಷಣಿಕ ಹಾಗೂ ನಾವೀನ್ಯತಾ ಕೇಂದ್ರಗಳೊಂದಿಗೆ ತರಬೇತಿ, ಸಂಶೋಧನೆ ಮತ್ತು ಹೊಸ ಆವಿಷ್ಕಾರಗಳಲ್ಲಿ ಪಾಲುದಾರಿಕೆ ಬೆಳೆಸಲು ಅಮೆರಿಕದ ರಾಯಭಾರಿ ಸರ್ಜಿಯೋ ಗೋರ್ ಅವರ ನೆರವು ಕೋರಿದರು.
ಸೈನ್ಸ್ ಗ್ಯಾಲರಿ ಬೆಂಗಳೂರು ಈ ಕನಸಿನೊಂದಿಗೆ ನಿಕಟವಾಗಿ ಬೆಸೆದುಕೊಂಡಿದೆ. ಕ್ವಾಂಟಮ್ ಶೈಕ್ಷಣಿಕ ಸಲಹೆಗಾರರಾದ ಪ್ರೊಫೆಸರ್ ಅರಿಂದಮ್ ಘೋಷ್ ಅವರು ಕರ್ನಾಟಕದ ಕ್ವಾಂಟಮ್ ಟಾಸ್ಕ್ ಫೋರ್ಸ್ನ ಅಧ್ಯಕ್ಷರಾಗಿದ್ದಾರೆ. ಡಾ. ಜಾಹ್ನವಿ ಫಾಲ್ಕಿ ಅವರು ಕ್ಯೂ-ಸಿಟಿ ಸಲಹಾ ಮಂಡಳಿಯ ಸದಸ್ಯರಾಗಿದ್ದಾರೆ. ನನಗೆ ಕ್ವಾಂಟಮ್ ವಿಜ್ಞಾನದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದಿರಬಹುದು. ಆದರೆ ಕ್ವಾಂಟಮ್ ವಿಜ್ಞಾನವು ಕಂಪ್ಯೂಟಿಂಗ್, ಸಂವಹನ, ಆರೋಗ್ಯ ಮತ್ತು ಆಧುನಿಕ ಉತ್ಪಾದನಾ ಕ್ಷೇತ್ರದ ಭವಿಷ್ಯವನ್ನು ರೂಪಿಸುತ್ತದೆ ಎಂಬ ಅರಿವಿದೆ ಎಂದರು.
ನಮ್ಮ ಯುವಕರು ಇಂತಹ ಬೆಳವಣಿಗೆಗಳಲ್ಲಿ ತೊಡಗಿಸಿಕೊಳ್ಳುವುದನ್ನು ಖಾತರಿಪಡಿಸುವುದು ನಮ್ಮ ಜವಾಬ್ದಾರಿಯಾಗಿದೆ. ಅದಕ್ಕಾಗಿಯೇ ಇಂತಹ ಸಂಸ್ಥೆ ನಮಗೆ ಮುಖ್ಯವಾಗುತ್ತದೆ. ಸೈನ್ಸ್ ಗ್ಯಾಲರಿಯ ಸಂಸ್ಥಾಪಕ ಪಾಲುದಾರರಾಗಿ, ಸಾರ್ವಜನಿಕರಿಗೆ ವಿಜ್ಞಾನವನ್ನು ತಲುಪಿಸುವ ಅದರ ಆಶಯಕ್ಕೆ ಕರ್ನಾಟಕ ಸರ್ಕಾರ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಹೇಳಿದರು.
ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಈಗಾಗಲೇ ಹಲವು ಹೆಜ್ಜೆಗಳನ್ನು ಇಟ್ಟಿದೆ. ಕರ್ನಾಟಕ ಕ್ವಾಂಟಮ್ ಮಿಷನ್ನ ಬೆಂಬಲದೊಂದಿಗೆ ಬೆಂಗಳೂರು ಜಾಗತಿಕ ತಂತ್ರಜ್ಞಾನ ಕಂಪನಿಗಳು ಮತ್ತು ನವೋದ್ಯಮಗಳ ಕೇಂದ್ರವಾಗಿ ಬೆಳೆಯುತ್ತಿದೆ ಎಂದು ಹೇಳಿದರು.
ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ನಿರ್ಮಾಣವಾಗುತ್ತಿದ್ದು, ಸಂಶೋಧನಾ ಪ್ರಯೋಗಾಲಯಗಳ ಪ್ರಮುಖ ಕೇಂದ್ರವಾಗಲಿದೆ. ನಮ್ಮ ಬದ್ಧತೆ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ‘ಲೋಕಲ್ ಎಕಾನಮಿ ಆಕ್ಸಿಲರೇಟರ್ ಪ್ರೋಗ್ರಾಂ’ (LEAP) ಅಡಿಯಲ್ಲಿ, ಕರ್ನಾಟಕ ಸರ್ಕಾರವು ಬೆಂಗಳೂರಿನ ಹೊರಗೆ ಮೊದಲ ಬಾರಿಗೆ ಧಾರವಾಡದ IIITಯಲ್ಲಿ ‘ಕ್ವಾಂಟಮ್ ಕೃತಕ ಬುದ್ಧಿಮತ್ತೆ ಮತ್ತು ಕಂಪ್ಯೂಟಿಂಗ್ ಶ್ರೇಷ್ಠತಾ ಕೇಂದ್ರ’ವನ್ನು ಸ್ಥಾಪಿಸಲಾಗಿದೆ ಎಂದರು.
ಭವಿಷ್ಯದ ಆರ್ಥಿಕ ಬೆಳವಣಿಗೆಯನ್ನು ಕಟ್ಟಡ, ರಸ್ತೆ ಮತ್ತಿತರ ಭೌತಿಕ ಮೂಲಸೌಕರ್ಯಗಳು ಮಾತ್ರ ನಿರ್ಧರಿಸುವುದಿಲ್ಲ. ಜ್ಞಾನ ಮೂಲಸೌಕರ್ಯವೇ ಭವಿಷ್ಯದ ಆರ್ಥಿಕತೆಯ ನಿಜವಾದ ಶಕ್ತಿ. “ನಮ್ಮ ಗುರಿ ಸರಳ. ತರಗತಿಗಳನ್ನು ಪ್ರಯೋಗಾಲಯಗಳಿಗೆ, ಪ್ರಯೋಗಾಲಯಗಳನ್ನು ಸ್ಟಾರ್ಟ್ಅಪ್ಗಳಿಗೆ ಮತ್ತು ಸ್ಟಾರ್ಟ್ಅಪ್ಗಳನ್ನು ಜಾಗತಿಕ ಮಾರುಕಟ್ಟೆಗೆ ಜೋಡಿಸಬೇಕು,” ಎಂದು ಹೇಳಿದರು.
ಕರ್ನಾಟಕದ ವಿಶ್ವವಿದ್ಯಾಲಯಗಳು ಮತ್ತು ಅಮೆರಿಕದ ಪ್ರಮುಖ ವಿಶ್ವವಿದ್ಯಾಲಯಗಳ ನಡುವೆ ಜಂಟಿ ಸಂಶೋಧನೆ, ಹೊಸ ಪಠ್ಯಕ್ರಮ ಮತ್ತು ಉದ್ಯಮಕ್ಕೆ ಅಗತ್ಯವಾದ ಕೌಶಲ್ಯಾಧಾರಿತ ಕಲಿಕೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಅಮೆರಿಕದ ಪ್ರಮುಖ ತಂತ್ರಜ್ಞಾನ ಕೇಂದ್ರಗಳ ಶ್ರೇಷ್ಠತಾ ಕೇಂದ್ರಗಳು, ಇನ್ಕ್ಯುಬೇಟರ್ಗಳು ಮತ್ತು ಸಂಶೋಧನಾ ಪಾರ್ಕ್ಗಳೊಂದಿಗೆ ಕರ್ನಾಟಕ ಆಳವಾದ ಪಾಲುದಾರಿಕೆ ಬಯಸಿದೆ.ಇದರಿಂದ ರಾಜ್ಯದ ನವೋದ್ಯಮಗಳಿಗೆ ಜಾಗತಿಕ ಮಾರ್ಗದರ್ಶನ, ಆಧುನಿಕ ಸಂಶೋಧನಾ ಸೌಲಭ್ಯ, ಬಂಡವಾಳ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ಪ್ರವೇಶ ದೊರೆಯಲಿದೆ ಎಂದು ಹೇಳಿದರು.
ಕ್ವಾಂಟಮ್ ವಿಜ್ಞಾನವು ಕಂಪ್ಯೂಟಿಂಗ್, ಸಂವಹನ, ಆರೋಗ್ಯ ಮತ್ತು ಆಧುನಿಕ ಉತ್ಪಾದನಾ ಕ್ಷೇತ್ರಗಳ ಭವಿಷ್ಯವನ್ನು ರೂಪಿಸಲಿದೆ. ಈ ಬೆಳವಣಿಗೆಯಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು ಸರ್ಕಾರದ ಜವಾಬ್ದಾರಿ.‘ಸೈನ್ಸ್ ಗ್ಯಾಲರಿ’ ಸಾರ್ವಜನಿಕರಿಗೆ ವಿಜ್ಞಾನವನ್ನು ತಲುಪಿಸುವ ಪ್ರಮುಖ ವೇದಿಕೆಯಾಗಿದ್ದು, ಅದರ ಆಶಯಕ್ಕೆ ಕರ್ನಾಟಕ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ಕ್ವಾಂಟಮ್’ ಪ್ರದರ್ಶನವನ್ನು ಬೆಂಗಳೂರಿನ ಜನರು, ಕರ್ನಾಟಕದ ಜನರು ಹಾಗೂ ನಗರಕ್ಕೆ ಭೇಟಿ ನೀಡುವ ಎಲ್ಲರಿಗಾಗಿ ಮುಕ್ತಗೊಳಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ಘೋಷಿಸಿದರು.