ಕೆಎಸ್​ಆರ್​ಟಿಸಿಯಲ್ಲಿ ಮಹಿಳಾ ದಿನಾಚರಣೆ: ಮಹಿಳಾ ಸಿಬ್ಬಂದಿಗೆ ಅಭಿನಂದಿಸಿದ ಸಚಿವ ರಾಮಲಿಂಗಾರೆಡ್ಡಿ

|

Updated on: Mar 09, 2025 | 10:33 AM

ಕೆಎಸ್‍ಆರ್​​ಟಿಸಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಿತು. ಸಾರಿಗೆ ಸಚಿವರು ಮಹಿಳಾ ಸಿಬ್ಬಂದಿಯ ಸಾಧನೆಗಳನ್ನು ಶ್ಲಾಘಿಸಿದರು. ಮಹಿಳೆಯರಿಗೆ ಅನುಕೂಲಕರ ವಾತಾವರಣ ಮತ್ತು ಸಮಾನ ಅವಕಾಶಗಳನ್ನು ಕಲ್ಪಿಸುವ ಬಗ್ಗೆ ಚರ್ಚಿಸಲಾಯಿತು. ಕೆಎಸ್‍ಆರ್‍ಟಿಸಿಯಲ್ಲಿ ಮಹಿಳಾ ಸಿಬ್ಬಂದಿಯ ಸಂಖ್ಯೆ ಹೆಚ್ಚುತ್ತಿದೆ ಮತ್ತು ಅವರು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಲಾಯಿತು.

ಕೆಎಸ್​ಆರ್​ಟಿಸಿಯಲ್ಲಿ ಮಹಿಳಾ ದಿನಾಚರಣೆ: ಮಹಿಳಾ ಸಿಬ್ಬಂದಿಗೆ ಅಭಿನಂದಿಸಿದ ಸಚಿವ ರಾಮಲಿಂಗಾರೆಡ್ಡಿ
ಕೆಎಸ್​ಆರ್​ಟಿಸಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
Follow us on

ಬೆಂಗಳೂರು, ಮಾರ್ಚ್​ 09: ಎಲ್ಲ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಮಹಿಳೆಯರು ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದರು.

ಕೆಎಸ್​ಆರ್​ಟಿಸಿ ನಿಗಮದ ಕೇಂದ್ರ ಕಚೇರಿಯಲ್ಲಿ ಶನಿವಾರ (ಮಾ.08) ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಕೊಪ್ಪಳದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರು ಹಾಡು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ. ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ನೀಡಲಾಗುತ್ತಿದೆ. ಮಹಿಳಾ ಸಮಾನತೆ, ಸಬಲೀಕರಣ ಎಂಬುದನ್ನು ನಮ್ಮಲ್ಲಿ ಅಕ್ಷರಶಃ ಕಾಣಬಹುದಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕೆಎಸ್​ಆರ್​ಟಿಸಿ ಉಪಾಧ್ಯಕ್ಷ ಮಾತನಾಡಿ, ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ. ಪ್ರಸ್ತುತ ಎಲ್ಲ ರಂಗಗಳಲ್ಲಿಯೂ ಮಹಿಳೆಯರು ಅಭಿವೃದ್ದಿ ಹೊಂದುತ್ತಿರುವುದು ಸ್ವಾಗತಾರ್ಹ ಎಂದು ಎಲ್ಲಾ ಪ್ರತಿಭಾ ಪುರಸ್ಕೃತ 42 ಮಹಿಳಾ ಸಿಬ್ಬಂದಿಗಳನ್ನು ಅಭಿನಂದಿಸಿದರು.

ಭಾಆಸೇ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಮಾತನಾಡಿ, ನಿಗಮಕ್ಕೆ ಶಕ್ತಿಯಾಗಿರುವ ಎಲ್ಲ ಮಹಿಳಾ ಸಿಬ್ಬಂದಿಗಳಿಗೆ ಅಭಿನಂದಿಸಿದರು. ನಮ್ಮ ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾರ್ಗದರ್ಶನವಾಗಿದೆ. ಶಿಕ್ಷಣವೇ ಶಕ್ತಿ, ಪ್ರತಿಯೊಬ್ಬ ಮಹಿಳೆಯರು ಶಿಕ್ಷಣ ಪಡೆಯಬೇಕು. ತಮ್ಮ ತಮ್ಮ ಮಕ್ಕಳಿಗೆ ಉತ್ತಮವಾದ ವಿದ್ಯಾಬ್ಯಾಸವನ್ನು ದೊರಕಿಸಿಕೊಟ್ಟು, ಸಬಲರನ್ನಾಗಿ ಮಾಡಬೇಕು. ಶಿಕ್ಷಣ ಒಂದೇ ಮಹಿಳೆಯರನ್ನು ಮತ್ತಷ್ಟು ಎತ್ತರಕ್ಕೆ ಕೊಂಡ್ಯೊಯಲು ಸಾಧನವಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ‌ಮಹಿಳಾ ತಾಂತ್ರಿಕ ಸಿಬ್ಬಂದಿಗಳೇ‌ ಹೆಚ್ಚಿನ ಸಂಖ್ಯೆ ಕಾರ್ಯನಿರ್ವಹಿಸಿ‌ರುವ ನಗರ ಸಾರಿಗೆ ಬಸ್ಸುಗಳ ಪುನಶ್ಚೇತನದ ವಿಡಿಯೋವನ್ನು‌ ಬಿಡುಗಡೆ‌ ಮಾಡಲಾಯಿತು. ಕರಾರಸಾನಿಗಮದಲ್ಲಿ ಒಟ್ಟು 34,000 ಸಿಬ್ಬಂದಿಗಳಿದ್ದು, ವಿವಿಧ ಹುದ್ದೆಗಳಲ್ಲಿ ಒಟ್ಟಾರೆ 3052 ಮಹಿಳಾ ಉದ್ಯೋಗಿಗಳಿರುತ್ತಾರೆ. ಅದರಲ್ಲಿ ಮಹಿಳಾ ಅಧಿಕಾರಿ-80 ನಿರ್ವಾಹಕರು-875, ಚಾಲಕ ಕಂ ನಿರ್ವಾಹಕರು-26, ತಾಂತ್ರಿಕ ಸಿಬ್ಬಂದಿಗಳು-976, ಭದ್ರತಾ ಸಿಬ್ಬಂದಿಗಳು-110 ಕಛೇರಿ ಸಹಾಯಕರು-80 ಹಾಗೂ ಮಹಿಳಾ ಸ್ವಚ್ಚತಾಗಾರರು-135 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕಳೆದ ಎರಡು ವರ್ಷಗಳಿಂದ 79 ಮಹಿಳೆಯರನ್ನು ಅನುಕಂಪದ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ನಿಗಮದಲ್ಲಿ ನೇಮಕಾತಿ ಮಾಡಿಕೊಳ್ಳಲಾಗಿದೆ. ನಿಗಮವು ಎಲ್ಲಾ ರೀತಿಯಲ್ಲಿಯೂ ಮಹಿಳೆಯರನ್ನು ಗೌರವಿಸಿ, ಪ್ರೋತ್ಸಾಹಿಸುತ್ತಿದ್ದು, ಈ ಕೆಳಕಂಡ ಕಲ್ಯಾಣ ಕಾರ್ಯಕ್ರಮವನ್ನು ರೂಪಿಸಲಾಗಿದೆ.

ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳಾ ನೌಕರರಿಗೆ ಆಗುವ ಲೈಂಗಿಕ ಕಿರುಕುಳವನ್ನು ತಡೆಯಲು Sexual Harassment of Women at Workplace (Prevention, Prohibition & Redressal) Act-2013 ರನ್ವಯ ಮಹಿಳಾ ನೌಕರರ ಆಂತರಿಕ ದೂರು ಸಮಿತಿಯನ್ನು ರಚಿಸಲಾಗಿದೆ, ಲಿಂಗ ಸಂವೇದಿ ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ.
ಮಹಿಳಾ ನೌಕರರಿಗೆ ರಾಜ್ಯ ಸರ್ಕಾರದ ಮಾದರಿಯಲ್ಲಿ 180 ದಿನಗಳ ಹೆರಿಗೆ ರಜೆಯನ್ನು ನೀಡಲಾಗುತ್ತಿದೆ.
ಸರ್ಕಾರದ ಮಾದರಿಯಲ್ಲಿ ಕಿರಿಯ ಮಗುವಿಗೆ 18 ವರ್ಷ ತಲುಪುವವರೆಗೆ ಒಟ್ಟು ಸೇವಾವಧಿಯಲ್ಲಿ ಗರಿಷ್ಠ ಆರು ತಿಂಗಳವರೆಗೆ (180 ದಿನಗಳ) “ಶಿಶುಪಾಲನಾ ರಜೆ” ಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಗುವಿಗೆ ಮೂರು ವರ್ಷ ತುಂಬುವವರೆಗೆ ರೂ.1250/- ಗಳನ್ನು ಮಾಸಿಕ ಶಿಶು ಪಾಲನಾ ಭತ್ಯೆ ನೀಡಲಾಗುತ್ತಿದ್ದು, ಇದುವರೆವಿಗೂ, ನಿರ್ವಾಹಕರು-17, ತಾಂತ್ರಿಕ-82 ಇತರೆ ಮಹಿಳಾ ಸಿಬ್ಬಂದಿಗಳು-78 ಒಟ್ಟಾರೆ 177 ಮಹಿಳಾ ಸಿಬ್ಬಂದಿಗಳು ಶಿಶುಪಾಲನಾ ಭತ್ಯೆಯನ್ನು ಪಡೆಯುತ್ತಿದ್ದಾರೆ.
ಬುದ್ದಿಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ಮಹಿಳಾ ನೌಕರರಿಗೆ ಒಟ್ಟು 730 ದಿವಸಗಳ “ಶಿಶು ಪಾಲನಾ ರಜೆ”ಯನ್ನು ವೇತನ ಸಹಿತವಾಗಿ ನೀಡಲಾಗುತ್ತಿದೆ.. ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಗೃಹ ಹಾಗೂ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದೆ.
ನಿಗಮವು ವಿದ್ಯಾಚೇತನ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-2, ವೈದ್ಯಕೀಯ-43, ಡಿಗ್ರಿ-703, ಡಿಪ್ಲೋಮೋ-43, ಒಟ್ಟಾರೆ ಪಿ.ಯು.ಸಿ.ಯಿಂದ, ಪಿ.ಹೆಚ್.ಡಿ.ವರೆಗಿನ ವಿದೇಶಿ ವ್ಯಾಸಂಗ ಸೇರಿದಂತೆ ಒಟ್ಟು 1402 ಮಹಿಳಾ ವಿದ್ಯಾರ್ಥಿಗಳಿಗೆ. (2022-23 ರಿಂದ 2024-25) ರೂ.70,71,500/- (ಎಪ್ಪತ್ತು ಲಕ್ಷದ ಎಪ್ಪತ್ತೊಂದು ಸಾವಿರದ ಐನೂರು ರೂ.ಗಳು ಮಾತ್ರ) ವಿದ್ಯಾರ್ಥಿ ವೇತನ ನೀಡಲಾಗಿದೆ.
ಜನವರಿ 2025 ರಿಂದ ನೂತನ ”ಕೆ.ಎಸ್ಆರ್.ಟಿ.ಸಿ ಆರೋಗ್ಯ” ನಗದು ರಹಿತ ವೈದೈಕೀಯ ಚಿಕಿತ್ಸಾ ಸೌಲಭ್ಯವನ್ನು ಜಾರಿಗೊಳಿಸಿದ್ದು, ಇದುವರೆವಿಗೂ ಒಟ್ಟಾರೆ 984 ಮಹಿಳಾ ಸಿಬ್ಬಂದಿಗಳು ಚಿಕಿತ್ಸೆಗೊಳಪಟ್ಟಿರುತ್ತಾರೆ ಹಾಗೂ ಮಹಿಳಾ ಸಿಬ್ಬಂದಿ ಅವಲಂಬಿತರು 11860 ಜನ ಚಿಕಿತ್ಸೆ ಪಡೆದಿದ್ದು, ಅವಲಂಬಿತರ ಪತ್ನಿ-6996, ತಾಯಿ-3519 ಹಾಗೂ ಹೆಣ್ಣು ಮಕ್ಕಳು-2935 ಚಿಕಿತ್ಸೆ ಪಡೆದಿರುವ ಮೊತ್ತ ರೂ19.87 ಕೋಟಿ ಮೊತ್ತವಾಗಿದೆ.

ಇಂದು ನಿಗಮದ 17 ವಿಭಾಗಗಳಿಂದ ತಲಾ ಒಬ್ಬರಂತೆ ಉತ್ತಮ ಕಾರ್ಯ ಸಾಧನೆ ತೋರಿದ, ತಾಂತ್ರಿಕ ಸಿಬ್ಬಂದಿ-19, ನಿರ್ವಾಹಕರು-16, ಹಾಗೂ ಕರಾಸಾ ಪೇದೆ-7, ಒಟ್ಟು 42 ಮಹಿಳಾ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಭಾಆಸೇ ನಿರ್ದೇಶಕಿ ಡಾ. ನಂದಿನಿ ದೇವಿ ಕೆ. (ಸಿಬ್ಬಂದಿ ಮತ್ತು ಜಾಗೃತ) ಹಾಗೂ ಹಿರಿಯ ಅಧಿಕಾರಿ/ಸಿಬ್ಬಂದಿಗಳು  ಭಾಗವಹಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ