ಕಲಬುರಗಿ ಡಿಸಿ ವಿರುದ್ಧ ಅವಹೇಳನ ಹೇಳಿಕೆ ಪ್ರಕರಣ: ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ಗೆ ಜಾಮೀನುರಹಿತ ಬಂಧನ ವಾರಂಟ್
ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ 42ನೇ ACJM ನ್ಯಾಯಾಲಯ ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿದೆ. ಸಮನ್ಸ್ ಜಾರಿಯಾಗಿದ್ದರೂ ಕೋರ್ಟ್ಗೆ ಹಾಜರಾಗದ ಕಾರಣ ನ್ಯಾಯಾಲಯ ಈ ಕಠಿಣ ಆದೇಶ ನೀಡಿದೆ. ಇದು ಪ್ರಕರಣದಲ್ಲಿನ ನ್ಯಾಯಾಲಯದ ಗಂಭೀರತೆಯನ್ನು ತೋರಿಸುತ್ತದೆ.

ಕಲಬುರಗಿ, ಆ.24: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ (MLC) ಎನ್. ರವಿಕುಮಾರ್ ವಿರುದ್ಧ ನ್ಯಾಯಾಲಯ ಜಾಮೀನುರಹಿತ ಬಂಧನ ವಾರಂಟ್ (NBW) ಹೊರಡಿಸಿದೆ. ಬೆಂಗಳೂರಿನ 42 ನೇ ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACJM) ನ್ಯಾಯಾಲಯದ ಜಡ್ಜ್ ಸಂದೀಪ್ ಪಾಟೀಲ್ ಅವರು ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.
ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ ಕಠಿಣ ಕ್ರಮ ಕೈಗೊಂಡಿದ್ದು, ಬಂಧನ ವಾರಂಟ್ ಜಾರಿಗೊಳಿಸಿದೆ. ಕಳೆದ ವರ್ಷ ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ (ಫೌಜಿಯಾ ತರನ್ನಮ್) ವಿರುದ್ಧ ಎಂಎಲ್ಸಿ ಎನ್. ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಇದನ್ನೂ ಓದಿ: SIR: ಬೆಂಗಳೂರಿನ ಅರ್ಧದಷ್ಟು ಮತದಾರರು ASDDO ಪಟ್ಟಿಗೆ; 24 ಲಕ್ಷದಷ್ಟು ಮತದಾರರಿಗೆ ನೋಟಿಸ್
ರವಿಕುಮಾರ್ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು. ಹೈಕೋರ್ಟ್ನಿಂದಲೂ ಯಾವುದೇ ರಿಲೀಫ್ ಸಿಗದಿದ್ದರೂ ಹಾಗೂ ಅಧೀನ ನ್ಯಾಯಾಲಯದಿಂದ ಸಮನ್ಸ್ ಬಂದಿದ್ದರೂ ಕೋರ್ಟ್ಗೆ ಗೈರಾದ ಕಾರಣ ಈಗ 42 ನೇ ಎಸಿಜೆಎಂ ನ್ಯಾಯಾಲಯವು ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




