ಇನ್ನು 15 ದಿನಕ್ಕೆ 545 ಪಿಎಸ್‌ಐ ನೇಮಕಾತಿ ಮರುಪರೀಕ್ಷೆ, ವೇಳಾಪಟ್ಟಿ ಹೀಗಿದೆ

545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆ ರದ್ದಾಗಿದ್ದ ಪರೀಕ್ಷೆಯನ್ನು ಮತ್ತೆ ಬರೆಯಲು ದಿನಾಂಕ ನಿಗದಿಯಾಗಿದ್ದು ಜ. 23ರಂದು ಮರು ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ (KEA) ಹೊರಡಿಸಿದೆ.

ಇನ್ನು 15 ದಿನಕ್ಕೆ 545 ಪಿಎಸ್‌ಐ ನೇಮಕಾತಿ ಮರುಪರೀಕ್ಷೆ, ವೇಳಾಪಟ್ಟಿ ಹೀಗಿದೆ
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on:Jan 09, 2024 | 2:19 PM

ಬೆಂಗಳೂರು, ಜ.09: 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ (PSI Recruitment Scam) ನಡೆದ ಹಿನ್ನೆಲೆ ರದ್ದಾಗಿದ್ದ ಪರೀಕ್ಷೆಯನ್ನು ಮತ್ತೆ ಬರೆಯಲು ದಿನಾಂಕ ನಿಗದಿಯಾಗಿದ್ದು ಜ. 23ರಂದು ಮರು ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ (KEA) ಹೊರಡಿಸಿದೆ. ಕಳೆದ ಡಿ.23ರಂದು ಬೆಂಗಳೂರಿನಲ್ಲಿ ಮಾತ್ರ ಮರು ಪರೀಕ್ಷೆ ನಡೆಸಲು ಪ್ರಾಧಿಕಾರ ದಿನಾಂಕ ಪ್ರಕಟಿಸಿತ್ತು. ಆದರೆ, ಅಭ್ಯರ್ಥಿಗಳು ಪರೀಕ್ಷೆಗೆ ತಯಾರಾಗಲು ಹೆಚ್ಚಿನ ಕಾಲಾವಕಾಶ ನೀಡಲು ಪರೀಕ್ಷೆ ಮುಂದೂಡ ಬೇಕೆಂದು ಬೆಳಗಾವಿ ಅಧಿವೇಶನದಲ್ಲಿ ಶಾಸಕರು ಸರ್ಕಾರಕ್ಕೆ ಮನವು ಮಾಡಿದ್ದರು. ಇದಕ್ಕೆ ಒಪ್ಪಿಗೆ ನೀಡಿದ್ದ ಸರ್ಕಾರ ಒಂದು ತಿಂಗಳ ಕಾಲ ಪರೀಕ್ಷೆಯನ್ನು ಮುಂದೂಡಿತ್ತು. ಸದ್ಯ ಈಗ ದಿನಾಂಕ ನಿಗದಿಯಾಗಿದ್ದು ಜ.23ರಂದು ಪಿಎಸ್​ಐ ಮರು ಪರೀಕ್ಷೆ ನಡೆಯಲಿದೆ.

2021ರ ಅಕ್ಟೋಬರ್‌ನಲ್ಲಿ ಪೊಲೀಸ್ ಇಲಾಖೆ ನಡೆಸಿದ್ದ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿತ್ತು. ಹೀಗಾಗಿ ಹಿಂದಿನ ಬಿಜೆಪಿ ಸರ್ಕಾರ ಇಡೀ ಪರೀಕ್ಷೆಯನ್ನೇ ರದ್ದುಪಡಿಸಿ ಮರು ಪರೀಕ್ಷೆಗೆ ಆದೇಶಿಸಿತ್ತು. ಇದನ್ನು ಕೆಲ ಅಭ್ಯರ್ಥಿಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಆದರೆ ಹೈಕೋರ್ಟ್ ನೇಮಕಾತಿ ಪರೀಕ್ಷೆ ರದ್ದುಪಡಿಸಿ ಹೊಸದಾಗಿ ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ಆದೇಶಿಸಿತ್ತು. ಬಳಿಕ ಸರ್ಕಾರ ಮರು ಪರೀಕ್ಷೆಯ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೀಡಿತ್ತು. ಸದ್ಯ ಈಗ ಮರು ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಜ.23ರ ಮಂಗಳವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆವರೆಗೆ ಪೇಪರ್ -1 (50 ಅಂಕ) ಮತ್ತು ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ಪೇಪರ್ -2ಕ್ಕೆ (150 ಅಂಕ) ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: ಕೋಲಾರ ಮಹಿಳಾ ಪಿಎಸ್​ಐ ಭಾರತಿ ಹೈದರಾಬಾದ್​ನಲ್ಲಿ ಅಗ್ರ ಸಾಧನೆ

ಅಭ್ಯರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸುವುದರಿಂದ ಬೆಳಗ್ಗೆ 8.30ಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪ್ರವೇಶ ಪತ್ರದ ಜೊತೆಗೆ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಸರ್ಕಾರದ ಮಾನ್ಯತೆಯ ಯಾವುದಾದರೂ ಒಂದು ಗುರುತಿನ ಚೀಟಿ ಇದ್ದರೆ ಮಾತ್ರ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುವುದು. ನೀರಿನ ಬಾಟಲ್, ಮೊಬೈಲ್ ಗಳನ್ನು ನಿಷೇಧಿಸಲಾಗಿದೆ. ಮೊಬೈಲ್‌ನಲ್ಲಿ ಗುರುತಿನ ಚೀಟಿ ತೋರಿಸಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ಸಾಧ್ಯವಾದಷ್ಟು ಕಾಲರ್ ಇಲ್ಲದ ಶರಟು ಹಾಕಿ ಕೊಂಡು ಬರಬೇಕು. ಕಿವಿ ಅಥವಾ ಬಾಯಿ ಮುಚ್ಚುವಂತಹ ಬಟ್ಟೆ, ಜೀನ್ಸ್, ಬೆಲ್ಟ್, ಶೂ ಹಾಕಿಕೊಂಡು ಬರುವಂತಿಲ್ಲ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:02 pm, Tue, 9 January 24