ಆಳಂದ ಮತಗಳ್ಳತನ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ; ಸಿಎಂ ಸಿದ್ದರಾಮಯ್ಯ ಆದೇಶ
ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಅನಧಿಕೃತವಾಗಿ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ, ನಕಲಿ ಮತಚಲಾವಣೆ ಮಾಡಲಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಬಗ್ಗೆ ಚುನಾವಣಾ ಆಯೋಗ ಕೂಡ ಸ್ಪಷ್ಟನೆ ನೀಡಿದೆ. ಆದರೆ, ಇದೀಗ ಈ ಪ್ರಕರಣದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಕರ್ನಾಟಕ ಸರ್ಕಾರ ಈ ಬಗ್ಗೆ ತನಿಖೆ ನಡೆಸಲು ಎಸ್ಐಟಿ (ವಿಶೇಷ ತನಿಖಾ ತಂಡ) ರಚನೆ ಮಾಡಿದೆ.

ಬೆಂಗಳೂರು, ಸೆಪ್ಟೆಂಬರ್ 20: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ (Alanda) ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಆದೇಶಿಸಿದ್ದಾರೆ. ಹಾಗೇ, ಕಾಂಗ್ರೆಸ್ ಆರೋಪ ಮಾಡಿರುವಂತೆ ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಎಲ್ಲ ‘ವೋಟ್ ಚೋರಿ’ (ಮತಗಳ್ಳತನ) ತನಿಖೆಗೆ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಮಹದೇವಪುರ ಮತ್ತು ಆಳಂದ ಕ್ಷೇತ್ರ ಸೇರಿ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚನೆ ಮಾಡಿ ಆದೇಶ ಹೊರಡಿಸಿದೆ. ಈ ಪ್ರಕರಣದ ತನಿಖೆಗಾಗಿ ಸಿಐಡಿ ಅಪರ ಪೊಲೀಸ್ ಮಹಾನಿರ್ದೇಶಕರಾದ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡಲಾಗಿದೆ. ಸಿಐಡಿ ಎಸ್ ಪಿ ಸೈದುಲು ಅದಾವತ್ ಮತ್ತು ಸಿಐಡಿ ಎಸ್ ಪಿ ಶುಭಾನ್ವಿತ ಕೂಡ ಈ ಎಸ್ ಐಟಿ ತಂಡದಲ್ಲಿರಲಿದ್ದಾರೆ. ಇತ್ತೀಚೆಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮತಗಳ್ಳತನದ ಆರೋಪ ಮಾಡಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ
ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ಅವರ ನೇತೃತ್ವದಲ್ಲಿ ಸಿಐಡಿಯ ವಿಶೇಷ ತನಿಖಾ ತಂಡವನ್ನು ರಚಿಸಿ, ಆದೇಶಿಸಲಾಗಿದೆ. #SITInvestigation pic.twitter.com/CWBSvEOR12
— Siddaramaiah (@siddaramaiah) September 20, 2025
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೆ. 18ರಂದು ಸುದ್ದಿಗೋಷ್ಠಿ ನಡೆಸಿದ್ದು, ಮತ ಕಳ್ಳತನದ ಆರೋಪ ಮಾಡಿದ್ದರು. ಕಳೆದ ಬಾರಿ ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಅರೋಪ ಮಾಡಿದ್ದ ರಾಹುಲ್ ಗಾಂಧಿ, ಇದಾದ ಬಳಿಕ ಕಲಬುರ್ಗಿಯ ಆಳಂದದಲ್ಲೂ ಭಾರೀ ಮತಗಳ್ಳತನವಾಗಿದೆ ಎಂದು ಆರೋಪ ಮಾಡಿದ್ದರು. ಕರ್ನಾಟಕದ ಆಳಂದ ಕ್ಷೇತ್ರದ ಬಗ್ಗೆಯೂ ರಾಹುಲ್ ಉಲ್ಲೇಖಿಸಿದ್ದು, 6018 ಮತಗಳ ಕಳ್ಳತನ ಆಗಿದೆ ಎಂದು ಹೇಳಿದ್ದರು. ಅಲ್ಲದೆ, ಈ ಆರೋಪದಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗ ಶಾಮೀಲಾಗಿದೆ ಎಂದು ಆರೋಪ ಮಾಡಿದ್ದರು.
ಇದನ್ನೂ ಓದಿ: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಅಂಕಿಅಂಶ ಸಮೇತ ರಾಹುಲ್ ಗಾಂಧಿ ಆರೋಪಕ್ಕೆ ಚುನಾವಣಾ ಆಯೋಗ ತೀರುಗೇಟು
ಆಳಂದದಲ್ಲಿ ಬಿಎಲ್ಒ ಅವರ ಸಂಬಂಧಿಯ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿತ್ತು. ಆಗ ತನಿಖೆ ಆರಂಭಿಸಿದಾಗ ಅವರ ಸಂಬಂಧಿಯ ಪಕ್ಕದ ಮನೆಯವರು ಅವರ ಹೆಸರನ್ನು ತೆಗೆಸಿದ್ದಾರೆ ಎಂಬುದು ತಿಳಿದುಬಂದಿತ್ತು. ಬಳಿಕ ಅಲ್ಲಿ ಹೋಗಿ ವಿಚಾರಿಸಿದಾಗ ನಾವು ಅರ್ಜಿ ಕೊಟ್ಟಿಲ್ಲ, ಯಾರ ಹೆಸರನ್ನೂ ತೆಗೆಸಿಲ್ಲ ಎಂದು ಹೇಳಿದಾಗ ಕೆಲವು ವಿಚಾರಗಳು ಬಹಿರಂಗಗೊಂಡಿತ್ತು. ಒಬ್ಬರ ಹೆಸರು ಬಳಸಿಕೊಂಡು ಮತದಾರರ ಪಟ್ಟಿಯಿಂದ 12 ಜನರ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಿರುವುದು ತಿಳಿದುಬಂದಿತ್ತು. ಆದರೆ ಅವರು ನಾನು ಯಾವ ಅರ್ಜಿಯನ್ನೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಆಳಂದಲ್ಲಿ 6018ಜನರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಎಲ್ಲಾ ಹೆಸರುಗಳನ್ನು ಕರ್ನಾಟಕದ ಮೊಬೈಲ್ ಸಂಖ್ಯೆಯಿಂದಲೇ ಡಿಲೀಟ್ ಮಾಡಲಾಗಿದೆ. ಆದರೆ, ಎಲ್ಲೋ ಕುಳಿತು ಈ ಹೆಸರುಗಳನ್ನು ತೆಗೆಸಲಾಗಿದೆ. ನಾವು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




