6 ತಿಂಗಳು 18 ಬಿಜೆಪಿ ಶಾಸಕರಿಗಿಲ್ಲ ವಿಧಾನಸಭೆ ಎಂಟ್ರಿ: ದಿನಭತ್ಯೆಯೂ ಇಲ್ಲ!
ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು 18 ಬಿಜೆಪಿ ಸದಸ್ಯರನ್ನು 6 ತಿಂಗಳವರೆಗೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ವಿರೋಧ ಪಕ್ಷದ ಸದಸ್ಯರನ್ನು ಸಸ್ಪೆಂಡ್ ಮಾಡಿದ್ದು, ಇದೀಗ ಅಮಾನತುಗೊಂಡಿರುವ 18 ಬಿಜೆಪಿ ಶಾಸಕರಿಗೆ ವಿಧಾನಸಭೆ ಪ್ರವೇಶವಿಲ್ಲ. ಹಾಗೇ ಇದರ ಜೊತೆಗೆ ಅಮಾನತುಗೊಂಡ ಶಾಸಕರಿಗೆ ಯಾವ್ಯಾವ ಷರತ್ತುಗಳು ಅನ್ವಯವಾಗಲಿವೆ ಎನ್ನುವ ವಿವರ ಈ ಕೆಳಗಿನಂತಿವೆ.

ಬೆಂಗಳೂರು, (ಮಾರ್ಚ್ 21): ಹನಿಟ್ರ್ಯಾಪ್ (Honeytrap) ಹಾಗೂ ಮುಸ್ಲಿಂ ಮೀಸಲಾತಿ (muslim reservation )ವಿಧೇಯಕಕ್ಕೆ ವಿರೋಧಿಸಿ ವಿಪಕ್ಷ ಬಿಜೆಪಿ(BJP) ವಿಧಾನಸಭೆ ಕಲಾಪದಲ್ಲಿಂದು ಭಾರಿ ಗದ್ದಲ ಎಬ್ಬಿಸಿದೆ. ಸ್ಪೀಕರ್ ಯುಟಿ ಖಾದರ್ ಅವರು ಸುಮ್ಮನಿರುವಂತೆ ಎಷ್ಟೇ ಮನವಿ ಮಾಡಿದರೂ ಸಹ ಕೇಳಿಲ್ಲ. ಮತ್ತೊಂದು ಹೆಜ್ಜೆ ಮುಂದೆ ಹೋದ ಬಿಜೆಪಿ ಸದಸ್ಯರು ಕಾಗದ ಪತ್ರಗಳನ್ನು ಹರಿದು ಸ್ಪೀಕರ್ ಮೇಲೆ ಎಸೆದು ಸಿಟ್ಟು ಹೊರ ಹಾಕಿದರು. ಇದರಿಂದ ಸ್ಪೀಕರ್ ಯುಟಿ ಖಾದರ್ ಅವರು 18 ಬಿಜೆಪಿ ಶಾಸಕರನ್ನು ಆರು ತಿಂಗಳುಗಳ ಕಾಲ ಅಮಾನತು ಮಾಡಿ ರೂಲಿಂಗ್ ಹೊರಡಿಸಿದ್ದಾರೆ. ಹೀಗಾಗಿ ಅಮಾನತುಗೊಂಡಿರುವ 18 ಬಿಜೆಪಿ ಶಾಸಕರುಗಳಿಗೆ 6 ತಿಂಗಳು ವಿಧಾನಸಭೆ ಪ್ರವೇಶ ಇರುವುದಿಲ್ಲ.
ಸ್ಪೀಕರ್ ಪೀಠಕ್ಕೆ ಅಗೌರ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿದೆ. ಹನಿಟ್ರ್ಯಾಪ್ (Honey Trap) ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರಿಂದು ವಿಧಾನಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದು ಸಿಟ್ಟು ಹೊರ ಹಾಕಿದರು. ಇದರಿಂದ ಅಸಮಾಧಾನಗೊಂಡ ಸ್ಪೀಕರ್ ಯುಟಿ ಖಾದರ್ ಕಲಾಪವನ್ನು ಅಲ್ಪ ಸಮಯ ಮುಂದೂಡಿದರು. ಬಳಿಕ ಮಧ್ಯಾಹ್ನದ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಪೀಠಕ್ಕೆ ಅಪಮಾನ ಮಾಡಿದ್ದಾರೆಂದು ಬಿಜೆಪಿ 18 ಶಾಸಕರನ್ನು 6 ತಿಂಗಳ ಕಾಲ ಸಸ್ಪೆಂಡ್ ಮಾಡಿ ಸ್ಪೀಕರ್ ರೂಲಿಂಗ್ ಹೊರಡಿಸಿದರು. ಬಳಿಕ ಮಾರ್ಷಲ್ಸ್, ಒಬ್ಬೊಬ್ಬರನ್ನೇ ಎತ್ತಿಕೊಂಡು ಹೋಗಿ ಆಚೆ ಹಾಕಿದರು.
ಇದನ್ನೂ ಓದಿ: ಗಲಾಟೆ-ಗದ್ದಲ: ವಿಧಾನಸಭೆ ಕಲಾಪದಿಂದ 6 ತಿಂಗಳವರೆಗೆ 18 ಬಿಜೆಪಿ ಸದಸ್ಯರ ಅಮಾನತು
ಅಮಾನತುಗೊಂಡುವರು ಯಾರ್ಯಾರು?
- ಕೊಪ್ಪಳ ಜಿಲ್ಲೆ ಕುಷ್ಟಗಿ ಕ್ಷೇತ್ರದ ಶಾಸಕ ದೊಡ್ಡನಗೌಡ ಪಾಟೀಲ್.
- ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ
- ಬೆಂಗಳೂರಿನ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್
- ಬೆಂಗಳೂರಿನ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ
- ಧಾರವಾಡ ಜಿಲ್ಲೆ ಕುಂದಗೋಳ ಕ್ಷೇತ್ರದ ಶಾಸಕ ಎಂ.ಆರ್.ಪಾಟೀಲ್
- ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ
- ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್ ಗೌಡ
- ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್
- ಬೀದರ್ ಜಿಲ್ಲೆ ಬಸವಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗರ
- ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
- ಬೆಂಗಳೂರಿನ ಜಯನಗರ ಕ್ಷೇತ್ರದ ಶಾಸಕ ಸಿ.ಕೆ.ರಾಮಮೂರ್ತಿ
- ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ
- ದಾವಣಗೆರೆ ಜಿಲ್ಲೆ ಹರಿಹರ ಕ್ಷೇತ್ರದ ಶಾಸಕ ಬಿ.ಪಿ.ಹರೀಶ್
- ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಡಾ.ಭರತ್ ಶೆಟ್ಟಿ
- ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ
- ಕಲಬುರಗಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ
- ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು
- ಗದಗ ಜಿಲ್ಲೆ ಶಿರಹಟ್ಟಿ ಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿ ಅಮಾನತು.
ಅಮಾನತುಗೊಂಡ ಶಾಸಕರಿಗೆ ಈ ಷರತ್ತುಗಳು ಅನ್ವಯ
- ಶಾಸಕರು ವಿಧಾನಸಭೆಯ ಸಭಾಂಗಣ, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸುವಂತಿಲ್ಲ.
- ಶಾಸಕರು ಸದಸ್ಯರಾಗಿರುವ ವಿಧಾನಮಂಡಲದ/ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಸಭೆಗಳಲ್ಲಿಯೂ ಭಾಗವಹಿಸುವಂತಿಲ್ಲ.
- ವಿಧಾನ ಸಭೆಯ ಕಾರ್ಯಕಲಾಪಗಳ ಪಟ್ಟಿಯಲ್ಲಿ ಅವರುಗಳ ಹೆಸರಿನಲ್ಲಿ ಯಾವುದೇ ವಿಷಯವನ್ನು ನಮೂದು ಮಾಡತಕ್ಕದಲ್ಲ.
- ಅಮಾನತ್ತಿನ ಅವಧಿಯಲ್ಲಿ ಅವರು ನೀಡುವ ಯಾವುದೇ ಸೂಚನೆಗಳನ್ನು ಸ್ವೀಕರಿಸಲಾಗುವುದಿಲ್ಲ.
- ಅಮಾನತ್ತಿನ ಅವಧಿಯಲ್ಲಿ ನಡೆಯುವ ಸಮಿತಿಗಳ ಚುನಾವಣೆಯಲ್ಲಿ ಅವರು ಮತದಾನ ಮಾಡುವಂತಿಲ್ಲ.
- ಅಮಾನತ್ತಿನ ಅವಧಿಯಲ್ಲಿ ಅವರುಗಳು ಯಾವುದೇ ದಿನಭತ್ಯೆಯನ್ನು ಪಡೆಯಲು ಅರ್ಹರಿರುವುದಿಲ್ಲ.