
ಬೆಂಗಳೂರು: ಮಾರ್ಚ್ 3ರಿಂದ ಉಭಯ ಸದನಗಳ ವಿಧಾನಮಂಡಲ ಅಧಿವೇಶನ ನಡೆಸುವುದಕ್ಕೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ. ಮಾರ್ಚ್ 3ರಿಂದ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಅಧಿವೇಶನಗಳು ನಡೆಯಲಿವೆ ಎಂದು ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ಹಾಗೇ, ಅನ್ನಭಾಗ್ಯ ಯೋಜನೆ ಅಡಿಯಲ್ಲಿ ನೇರ ನಗದು ವರ್ಗಾವಣೆ ಬದಲಾಗಿ 5 ಕೆಜಿ ಅಕ್ಕಿ ವಿತರಿಸಲು ನೀಡಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ. ಆಹಾರ ಇಲಾಖೆಯ ಆದೇಶಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ.
ಇದರ ಜೊತೆಗೆ, ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲು ಸಂಪುಟ ಸಭೆ ಅನುಮೋದನೆ ನೀಡಿದೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಳೆಯ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಕಟ್ಟಡವನ್ನು 25 ಕೋಟಿಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ನಡೆಸಲಾಗುತ್ತಿರುವ ನಿವೇಶನ ಲಭ್ಯವಿರುವ 61 ವಸತಿ ಶಾಲೆಗಳಿಗೆ ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣದ ಕಾಮಗಾರಿಯನ್ನು ಒಟ್ಟು 1292.50 ಕೋಟಿಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಐದು ಪ್ರಮುಖ ವಿಧೇಯಕಗಳ ಅನುಮೋದನೆ:
ಇಂದಿನ ಸಚಿವ ಸಂಪುಟ ಸಭೆಯಲ್ಲಿ 5 ಪ್ರಮುಖ ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ.
1. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ – 2025 ಕ್ಕೆ ಅನುಮೋದನೆ
2. ಕರ್ನಾಟಕ ಅಧಿಕ ಬಡ್ಡಿ ನಿಷೇಧ (ತಿದ್ದುಪಡಿ) ವಿಧೇಯಕ – 2025
3. ಕರ್ನಾಟಕ ಗಿರಿವಿದಾರರ (ತಿದ್ದುಪಡಿ) ವಿಧೇಯಕ – 2025
4. ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕ, 2025
5. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) ನಿಯಮಗಳು (ಸಾಮಾನ್ಯ) (ತಿದ್ದುಪಡಿ) 2024
ಐದು ವಿಧೇಯಕ ಕ್ಯಾಬಿನೆಟ್ ಅನುಮೋದನೆ
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:14 pm, Thu, 20 February 25