Karnataka Bandh: ಬೆಂಗಳೂರಿಗೆ ತಟ್ಟದ ಬಂದ್ ಬಿಸಿ: ಯಾವ ಜಿಲ್ಲೆಯಲ್ಲಿ ಹೇಗಿದೆ ಪರಿಸ್ಥಿತಿ? ಇಲ್ಲಿದೆ ವಿವರ

ಕರ್ನಾಟಕ ಬಂದ್: ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಖಂಡಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಬಿಸಿ ಬೆಂಗಳೂರಿನಲ್ಲಿ ಹೆಚ್ಚು ತಟ್ಟಿಲ್ಲ. ಅದೇ ರೀತಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಜನ ಜೀವನ ಸಹಜ ಸ್ಥಿತಿಯಲ್ಲಿ ಆರಂಭವಾಗಿದೆ. ಬಸ್, ಆಟೋ ಸೇವೆಗಳು ಎಂದಿನಂತೆ ಸಾಗಿವೆ. ಕೆಲವು ಪ್ರದೇಶಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ ಎಂಬ ವಿವರ ಇಲ್ಲಿದೆ.

Karnataka Bandh: ಬೆಂಗಳೂರಿಗೆ ತಟ್ಟದ ಬಂದ್ ಬಿಸಿ: ಯಾವ ಜಿಲ್ಲೆಯಲ್ಲಿ ಹೇಗಿದೆ ಪರಿಸ್ಥಿತಿ? ಇಲ್ಲಿದೆ ವಿವರ
ಬೆಂಗಳೂರಿನ ಕೆಆರ್​ ಮಾರುಕಟ್ಟೆಯಲ್ಲಿ ಎಂದಿನಂತೆಯೇ ಜನಸಂದಣಿ ಕಂಡುಬಂತು

Updated on: Mar 22, 2025 | 8:17 AM

ಬೆಂಗಳೂರು, ಮಾರ್ಚ್ 22: ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ (Karnataka Bandh) ಬೆಂಗಳೂರು (Bengaluru) ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂದ್​ಗೆ ಕಾರಣವಾದ ಪ್ರಮುಖ ಕೇಂದ್ರ ಬೆಳಗಾವಿಯಲ್ಲೇ (Belagavi) ಜನಜೀವನ ಸಹಜ ಸ್ಥಿತಿಯಲ್ಲಿ ಸಾಗುತ್ತಿದೆ. ಬೆಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ಬಸ್, ಆಟೋ ಓಡಾಟ ಎಂದಿನಂತೆಯೇ ಇದೆ. ಶನಿವಾರ ಆಗಿರುವುದರಿಂದ ಸಂಚಾರ ದಟ್ಟಣೆ ತುಸು ಕಡಿಮೆ ಇದೆ.

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್, ಆಟೋ ಸಂಚಾರ

ಬೆಂಗಳೂರಿನ ಹೆಬ್ಬಾಳ ದಿಂದ ಕೆಆರ್ ಪುರಂ ಭಾಗದ ಕಡೆ ಸಂಚರಿಸುವರರಿಗೆ ಹಾಗೂ ಇತರ ಪ್ರಮುಖ ಪ್ರದೇಶಗಳವರಿಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಎಂದಿನಂತೆಯೇ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್, ಆಟೋ, ಓಲಾ, ಉಬರ್ ಸಂಚಾರ ನಡೆಸುತ್ತಿವೆ.

ಇದನ್ನೂ ಓದಿ
ಕರ್ನಾಟಕ ಬಂದ್​ಗೆ ಕಾರಣವೇನು? ಏನೇನಿದೆ, ಏನೇನಿಲ್ಲ? ವಿವರ ಇಲ್ಲಿದೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
Karnataka Bandh: ಕರ್ನಾಟಕ ಬಂದ್, ನೀವು ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ

‘ನಾವು ಒಂದು ದಿನ ಆಟೋ ನಿಲ್ಲಿಸಿದರೆ ನಮ್ಮ ಕುಟುಂಬ ನೆಡೆಯುವುದು ಹೇಗೆ? ನಮ್ಮ ಆಟೋ ಯೂನಿಯನ್​ಗಳಲ್ಲಿ ಒಗ್ಗಟ್ಟು ಇಲ್ಲ. ನಾವು ಇನ್ನೇನು ಬಂದ್ ಮಾಡುವುದು, ನಮ್ಮ ಹೊಟ್ಟೆ ಪಾಡಿಗಾಗಿ ಆಟೋ ಓಡಿಸ್ತಿದ್ದೇವೆ. ಮೊದಲು ರ್ಯಾಪಿಡೋ ನಿಲ್ಲಿಸಲಿ’ ಎಂದು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಬಿಗಿ ಭದ್ರತೆ

ಪ್ರತಿಭಟನಾಕಾರರು ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿರುವ ಕಾರಣ ಮೆಜೆಸ್ಟಿಕ್​ ಮೆಟ್ರೋ ನಿಲ್ದಾಣಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. 1 ಕೆಎಸ್ಆರ್​​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಕಾವು ಹೆಚ್ಚಾಗುವ ಸಾಧ್ಯತೆ ಇದ್ದು, ಭದ್ರತೆಗೆ 100 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಓರ್ವ ಎಸಿಪಿ, ಇಬ್ಬರು ಇನ್ಸ್​ಪೆಕ್ಟರ್, 6 ಸಬ್ ಇನ್ಸ್​ಪೆಕ್ಟರ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ.

ಬೆಳಗಾವಿಯಲ್ಲಿ ತಟ್ಟದ ಬಂದ್ ಬಿಸಿ

ಬೆಳಗಾವಿ ನಗರದಲ್ಲಿ ಬಂದ್ ಬಿಸಿ ಕಾಣಿಸಿಲ್ಲ. ನಗರದಲ್ಲಿ ಶನಿವಾರ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ಆರಂಭವಾಗಿದೆ. ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆದಿವೆ. ಈ ಮಧ್ಯೆ, ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲು ಕರವೇ ನಿರ್ಧರಿಸಿದೆ.

ದಾವಣಗೆರೆಯಲ್ಲೂ ಬಂದ್​ಗೆ ನೀರಸ ಪ್ರತಿಕ್ರಿಯೆ

ದಾವಣಗೆರೆಯಲ್ಲಿ ಕರ್ನಾಟಕ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಸ್, ಆಟೋಗಳ ಸಂಚಾರ ಎಂದಿನಂತೆ ಆರಂಭವಾಗಿದೆ. ಅಹಿತಕರ ಘಟನೆ ನಡೆಯದಂತೆ ಅಲ್ಲಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಕೋಟೆ ನಾಡು ಚಿತ್ರದುರ್ಗದಲ್ಲಿಯೂ ಜನಜೀವನ ಎಂದಿನಂತೆಯೇ ಆರಂಭವಾಗಿದೆ. ಹೂವು, ಹಣ್ಣು, ಬೇಕರಿ, ಗೂಡಂಗಡಿ ವ್ಯಾಪಾರ ವಹಿವಾಟು ಆಟೋ, ಬಸ್ ಸಂಚಾರ ಮಾಮೂಲಿಯಾಗಿದೆ.

ಮಂಡ್ಯದಲ್ಲಿ ಪ್ರತಿಭಟನೆಯ ಕಾವು

ಮಂಡ್ಯದ ಸಂಜಯ್ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ, ರಸ್ತೆಯಲ್ಲಿಯೇ ಮಲಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕರವೇ ಶಿವರಾಮೇಗೌಡ ಬಣದಿಂದ ಈ ಪ್ರತಿಭಟನೆ ನಡೆದಿದೆ.

ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ಮೈಸೂರು ಜಿಲ್ಲೆಯಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೋಟೆಲ್ ಮಾಲೀಕರ ಸಂಘ, ಖಾಸಗಿ ಬಸ್ ಮಾಲೀಕರ ಸಂಘ, ಮೈಸೂರು ಜಿಲ್ಲಾ ವಕೀಲರ ಸಂಘ ಸೇರಿ ಹಲವರಿಂದ ನೈತಿಕ ಬೆಂಬಲ ವ್ಯಕ್ತವಾಗಿದೆ. ಸಾರಿಗೆ ಸಂಚಾರ ಎಂದಿನಂತೆಯೇ ಇರಲಿದೆ. ಹೋಟೆಲ್‌ಗಳಲ್ಲಿ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡಲಾಗುತ್ತಿದೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಕನ್ನಡ ಪರ ಸಂಘಟನೆಗಳು ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ ನಡೆಸಿವೆ.

ಚಿಕ್ಕಮಗಳೂರಿನಲ್ಲಿ ಬಲವಂತದಿಂದ ಅಂಗಡಿ ಮುಚ್ಚಿಸುತ್ತಿರುವ ಪ್ರತಿಭಟನಾಕಾರರು

ಚಿಕ್ಕಮಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಕನ್ನಡಿಗರ ಮೇಲೆ ಹಲ್ಲೆಯಾದರೂ ಈ ಸರ್ಕಾರ ಮೌನವಾಗಿದೆ. ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಮುಂದೆ ಉತ್ತರ ಸಿಗಲಿದೆ ಎಂದು ಕನ್ನಡಪರ ಒಕ್ಕೂಟದ ಜಿಲ್ಲಾಧ್ಯಕ್ಷ ರಾಜೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಂದ್, ನೀವು ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ

ಹೋಟೆಲ್, ಅಂಗಡಿಗಳನ್ನು ಪ್ರತಿಭಟನಾಕಾರರು ಬಲವಂತದಿಂದ ಬಂದ್ ಮಾಡಿಸುತ್ತಿದ್ದಾರೆ. ಅಂಗಡಿ, ಹೋಟೆಲ್ ತೆರೆಯದಂತೆ ಹೋರಾಟಗಾರರಿಂದ ಸೂಚನೆ ನೀಡುತ್ತಿದ್ದಾರೆ.

ಧಾರವಾಡದಲ್ಲಿ ಸಹಜ ಸ್ಥಿತಿ

ಧಾರವಾಡದಲ್ಲಿ ಬಂದ್​ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಎಂದಿನಂತೆಯೇ ಜನಜೀವನ, ವಾಹನ ಓಡಾಟ ಕಂಡುಬಂದಿದೆ. ಬೆಳಗಾವಿಯಲ್ಲಿ ಬಸ್ ನಿರ್ವಾಹಕನ ಮೇಲಿನ ಹಲ್ಲೆ ಖಂಡಿಸಿ ಧಾರವಾಡದಲ್ಲಿ ಈಗಾಗಲೇ ಪ್ರತಿಭಟನೆಗಳು ನಡೆದಿವೆ. ಹೀಗಾಗಿ ಇಂದಿನ ಬಂದ್​ಗೆ ಬೆಂಬಲ ವ್ಯಕ್ತವಾಗಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ