ಬೆಂಗಳೂರು, ಮಾರ್ಚ್ 20: ಬೆಳಗಾವಿಯಲ್ಲಿ (Belagavi) ಪದೇ ಪದೇ ಕಾಲು ಕೆರೆದುಕೊಂಡು ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳ ವಿರುದ್ಧ ಕನ್ನಡ ಪರ ಸಂಘಟನೆಗಳ ಹೋರಾಟದ ಕಿಚ್ಚು ಹೆಚ್ಚಾಗಿದೆ. ಎಂಇಎಸ್ ಪುಂಡಾಟ ಹಾಗೂ ಮರಾಠಿ ಸಂಘಟನೆಗಳ ದಾಂಧಲೆ ವಿರುದ್ಧ ಮಾರ್ಚ್ 22 ರಂದು ಕರ್ನಾಟಕ ಬಂದ್ (Karnataka Bandh) ಮಾಡುವ ಮೂಲಕ ಎಚ್ಚರಿಕೆ ನೀಡಲು ಕನ್ನಡಪರ ಸಘಟನೆಗಳು ಸಜ್ಜಾಗಿವೆ. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಮಾಹಿತಿ ನೀಡಿದ್ದು, ಬಂದ್ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಮಾರ್ಚ್ 22 ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆ ತನಕ ಬಂದ್ ಮಾಡಲು ಉದ್ದೇಶಿಸಲಾಗಿದೆ. ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಟೌನ್ಹಾಲ್ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಲಾಗಿದೆ. ಬಂದ್ ವೇಳೆ ಬಸ್, ಆಟೋ, ವಾಹನಗಳ ಸಂಚಾರ ಬಂದ್ ಆಗಬೇಕು ಎಂದು ಕನ್ನಡಪರ ಸಂಘಟನೆಗಳು ಕರೆ ನೀಡಿವೆ.
ಸದ್ಯ ಕರ್ನಾಟಕ ಬಂದ್ಗೆ ಕರ್ನಾಟಕ ಸಾರಿಗೆ ನೌಕರರ ಒಕ್ಕೂಟ ಬೆಂಬಲ ನೀಡುವ ಭರವಸೆ ನೀಡಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರ ಸಂಘದಿಂದ ಕೂಡ ಬೆಂಬಲ ವ್ಯಕ್ತವಾಗಿದೆ. ಕನ್ನಡ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಬೆಂಬಲ ಸೂಚಿಸಿದ್ದರೆ, ಇತ್ತ ಹೊಟೇಲ್ ಮಾಲೀಕರ ಸಂಘ ನೈತಿಕ ಬೆಂಬಲ ಮಾತ್ರ ಘೋಷಿಸಿದೆ. ಉಳಿದಂತೆ ಓಲಾ, ಉಬರ್ ಅಸೋಸಿಯೋಷನ್, ಎಪಿಎಂಸಿ ಸೇರಿ ಕೆಲ ಸಂಘಟನೆಗಳು ಬಂದ್ಗೆ ಬೆಂಬಲ ನೀಡಲು ಸಜ್ಜಾಗಿವೆ.
ಸಿನಿಮಾ ಥಿಯೇಟರ್, ಚಲನಚಿತ್ರ ವಾಣಿಜ್ಯ ಮಂಡಳಿ, ಮಾಲ್, ಬೇಕರಿ, ಬಾರ್ ಅಂಡ್ ರೆಸ್ಟೋರೆಂಟ್, ಅಂಗಡಿ ಮುಗ್ಗಟ್ಟು, ಬೀದಿಬದಿ ವ್ಯಾಪಾರಿಗಳಿಂದ ಬಂದ್ಗೆ ಭಾಗಶಃ ಬೆಂಬಲ ವ್ಯಕ್ತವಾಗಿದೆ.
ಇದನ್ನೂ ಓದಿ: ಮಾ.22ರಂದು ಕರ್ನಾಟಕ ಬಂದ್ ಫಿಕ್ಸ್
1 ರಿಂದ 9ನೇ ತರಗತಿಯವರೆಗೆ ಕೆಲ ತರಗತಿಗಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಬಂದ್ ದಿನಾಂಕ ಮುಂದೂಡಬೇಕು ಎಂಬ ಆಗ್ರಹ ಕೂಡ ಕೇಳಿಬಂದಿದೆ. ಪರೀಕ್ಷೆ ಮುಂದೂಡಿಕೆ ಅಥವಾ ಈ ವಿಚಾರಕ್ಕೆ ಸಂಬಂಧಿಸಿದ ಅಧಿಕೃತ ಪ್ರಕಟಣೆ ಇನ್ನೂ ಹೊರಬಿದ್ದಿಲ್ಲ.
Published On - 11:46 am, Thu, 20 March 25