ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಿಗೆ ಸಿದ್ದರಾಮಯ್ಯ ಗುಡ್ ನ್ಯೂಸ್: ಮಾಸಿಕ ಗೌರವ ಧನ ಹೆಚ್ಚಳ
ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಮಾಸಿಕ ಗೌರವಧನವನ್ನು ಹೆಚ್ಚಿಸುವುದಾಗಿ ಕರ್ನಾಟಕದ ಮುಖ್ಯಮಂತ್ರಿಗಳು ರಾಜ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ. ಬಿಸಿಯೂಟ ಸಿಬ್ಬಂದಿಗೂ ವೇತನ ಏರಿಕೆ ಆಗಲಿದೆ. ಹೆಚ್ಚುವರಿಯಾಗಿ, 100 ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿಯೂ, 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿಯೂ ಉನ್ನತೀಕರಿಸಲಾಗುವುದು ಎಂದು ಘೋಷಿಸಿದ್ದಾರೆ.

ಬೆಂಗಳೂರು, ಮಾರ್ಚ್ 7: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಬಜೆಟ್ನಲ್ಲಿ (Karnataka Budget 2025) ಸಿಎಂ ಸಿದ್ದರಾಮಯ್ಯ (Siddaramaiah) ಶುಭಸುದ್ದಿ ನೀಡಿದ್ದಾರೆ. ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದರು. ಜತೆಗೆ, ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು ಎಂದೂ ತಿಳಿಸಿದರು.
ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ.
LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು. ಇದಕ್ಕಾಗಿ. ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.
ಶಾಲಾ ಮಕ್ಕಳಿಗೆ ಆರು ದಿನವೂ ಮೊಟ್ಟೆ, ಬಾಳೆಹಣ್ಣು
ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ 1500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು ಎಂದು ಘೋಷಿಸಿದರು.
ಹೆಲ್ತ್ ಮಿಕ್ಸ್ ಪುಡಿ 5 ದಿನಗಳಿಗೆ ವಿಸ್ತರಣೆ
ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ 25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.
ಇದನ್ನೂ ಓದಿ: ಎಸ್ಸಿ, ಎಸ್ಟಿ ಸಮುದಾಯಕ್ಕೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್: 2 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಗುತ್ತಿಗೆ ಮೀಸಲಾತಿ
ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಲಾಗಿದೆ. ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಕರ್ನಾಟಕ ಬಜೆಟ್ ಲೈವ್ ಅಪ್ಡೇಟ್ಗಳಿಗೆ ಇಲ್ಲಿ ಕ್ಲಿಕ್ ಮಾಡಿ