
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2026-27ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಅವರು 3 ಗಂಟೆ 5 ನಿಮಿಷಗಳ ಸುದೀರ್ಘ ಬಜೆಟ್ ಮಂಡನೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಕರಾವಳಿ ವಿರೋಧಿ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.ವಿಶೇಷವಾಗಿ ಪ್ರವಾಸೋದ್ಯಮಕ್ಕೆ ಪ್ಯಾಕೇಜ್ ನೀಡಿ ಎಂದಿದ್ದೆವು. ಉಡುಪಿಗೆ ಮೆಡಿಕಲ್ ಕಾಲೇಜು ನೀಡಿ ಎಂದು ಮನವಿ ಮಾಡಿದ್ದೆವು.ಬಂದರು ಅಭಿವೃದ್ಧಿಗೆ ಒತ್ತು ನೀಡಿಲ್ಲ, ಮೀನುಗಾರರ ಸಮಸ್ಯೆ ಆಲಿಸಿಲ್ಲ ಎಂದು ಹೇಳಿದ್ದಾರೆ.
ಪ್ರಾದೇಶಿಕ ಅಸಮಾನತೆ ಸರಿ ಮಾಡಲು ಯಾವುದೇ ವಿಶೇಷ ಅನುದಾನವಿಲ್ಲ, ಎಸ್ಸಿ ಸಚಿವರು ರಾಜೀನಾಮೆ ಕೊಡ್ತೀವಿ ಅಂತ ಹೊರಟಿದ್ದಾರೆ, ಹಾಲಿಗೆ ಪ್ರೋತ್ಸಾಹಧನದ ಸುದ್ದಿಯೇ ಇಲ್ಲ, ಸಿದ್ದರಾಮಯ್ಯ ಮುಸ್ಲಿಮರಿಗೆ ಮಾತ್ರ ಯಥೇಚ್ಛವಾಗಿ ಭರಪೂರ ಕೊಟ್ಟಿದ್ದಾರೆ. ಹೊಸದಾಗಿ ತೆರಿಗೆ ಘೋಷಣೆ ಮಾಡಿಲ್ಲ ಇನ್ನುಮೇಲೆ ಮಾರಿ ಹಬ್ಬ ಇದೆ.ಒಟ್ಟಾರೆ ಈ ಸರ್ಕಾರ ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ದುಸ್ಥಿತಿಗೆ ತಂದಿಟ್ಟಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪಾತಾಳಕ್ಕೆ ತಂದಿಟ್ಟಿದ್ದಾರೆ.
ವಿಧಾನಸೌಧದಲ್ಲಿ ಖಾಲಿ ಚೊಂಬು ಪ್ರದರ್ಶಿಸಿ ಬಿಜೆಪಿ ಪ್ರತಿಭಟನೆ ಮಾಡಿದೆ. ವಿಧಾನಸೌಧದ ಪೂರ್ವ ದ್ವಾರದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಬಜೆಟ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಬಜೆಟ್ 2026ರಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣ ಮತ್ತು ವಸತಿ ಕ್ಷೇತ್ರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಆಧ್ಯಾತ್ಮಿಕರು ಹಾಗೂ ಸಮದಾಯದವರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಪ್ರಕಟಿಸಲಾಗಿದೆ. ಸೇಲಂನ ಬೆನೆಡಿಕ್ಟಿನ್ ಮೊನಾಸ್ಟರಿಯ ಎರಡು ಎಕರೆ ಜಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಸ್ಥಾಪನೆಗೆ 5 ಕೋಟಿ ರೂಪಾಯಿಗಳನ್ನು ಒದಗಿಸಲಾಗುವುದು. ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಇತರ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಯಲ್ಲಿ ಅನುವಾದಿಸಲಾಗುವುದು.
ಕರ್ನಾಟಕ ರಾಜ್ಯದ ಸಂಸ್ಕೃತಿಯ ಅಂಗವಾಗಿರುವ ಹವ್ಯಕ ಭಾಷೆಯ ಬೆಳವಣಿಗೆಗೆ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಗೋರ್ ಬಂಜಾರ ಸಮುದಾಯದ ಇತಿಹಾಸ, ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ, ಆಹಾರ ಪದ್ದತಿ, ಕಸುಬು ಇತ್ಯಾದಿಗಳನ್ನು ದಾಖಲಿಸಲು ಬಂಜಾರ ವಿಶ್ವಕೋಶವನ್ನು ಪ್ರಕಟಿಸಲಾಗುವುದು. 384. ಮಕ್ಕಳಿಗಾಗಿ ಪಂಪ, ರನ್ನ, ಜನ್ನ, ಬಸವಾದಿ ಶರಣರು, ಸರ್ವಜ್ಞ, ಕನಕ, ಪುರಂದರ, ಲಕ್ಷ್ಮೀಶ, ಸಂಚಿ ಹೊನ್ನಮ್ಮ ಇತ್ಯಾದಿ ಪ್ರಾಚೀನ ಕವಿಗಳ ಹಾಗೂ ಕುವೆಂಪು, ಶಿವರಾಮ ಕಾರಂತ, ದೇವನೂರು ಮಹದೇವ ಮುಂತಾದವರ ಕೃತಿಗಳ ಬಣ್ಣದ ಚಿತ್ರಗಳು ಮತ್ತು ಸಣ್ಣ ವಾಕ್ಯಗಳ ಪುಸ್ತಕಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಮುದ್ರಿಸಿ ಪ್ರಕಟಿಸಲಾಗುವುದು.
ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿಯಲ್ಲಿದೆ. ನಮ್ಮ ರಾಜ್ಯವು ಭಾರತದ ಐಟಿ ರಫ್ತುಗಳಲ್ಲಿ ಶೇ.43ರಷ್ಟು ಕೊಡುಗೆಯನ್ನು ನೀಡಿದೆ. ಹೊಸ ಐಟಿ ನೀತಿ 2025–30 ಅಡಿಯಲ್ಲಿ 2030ರ ವೇಳೆಗೆ ಸಾಫ್ಟ್ವೇರ್ ರಫ್ತು 11.5 ಲಕ್ಷ ಕೋಟಿ ರೂ. ತಲುಪುವ ನಿರೀಕ್ಷೆಯಿದೆ.
ಕರ್ನಾಟಕ ರಾಜ್ಯವು 18 ಸಾವಿರಕ್ಕೂ ಹೆಚ್ಚು ಸಕ್ರಿಯ ಸ್ಟಾರ್ಟ್ಅಪ್ಗಳ ಕೇಂದ್ರವಾಗಿದ್ದು, ಜಾಗತಿಕ ಸ್ಟಾರ್ಟ್ಅಪ್ ಪರಿಸರಗಳಲ್ಲಿ ಕಳೆದ ವರ್ಷದ 21ನೇ ಸ್ಥಾನದಿಂದ 14ನೇ ಸ್ಥಾನಕ್ಕೇರಿದೆ.
ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ ಕಾರ್ಯಕ್ರಮವು (LEAP) ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಬೆಂಗಳೂರು ಹೊರತುಪಡಿಸಿ ಇತರೆ ನಗರಗಳಲ್ಲಿ ನವೋದ್ಯಮ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು 1,000 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗಿದೆ.
ನೇಕಾರರ ಸಮ್ಮಾನ್ ಯೋಜನೆಯಡಿ ಒಟ್ಟು 1.30 ಲಕ್ಷ ನೇಕಾರರಿಗೆ ವಾರ್ಷಿಕ 5,000 ರೂ.ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದೆ. ವಿದ್ಯುತ್ ಸಹಾಯಧನ ಯೋಜನೆಯಡಿ 01 ರಿಂದ 10 ಹೆಚ್.ಪಿ. ವರೆಗೆ ಉಚಿತವಾಗಿ ಮತ್ತು 10 ರಿಂದ 20 ಹೆಚ್.ಪಿ. ವರೆಗಿನ ಘಟಕಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸಲಾಗುತ್ತಿದೆ. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡದ 20 ಹೆಚ್.ಪಿ.ಯಿಂದ
200 ಹೆಚ್.ಪಿ. ವರೆಗಿನ ವಿದ್ಯುತ್ ಮಗ್ಗ ನೇಕಾರರಿಗೆ ಪ್ರತಿ ಯೂನಿಟ್ಗೆ ಶೇ.50ರಷ್ಟು ಸಹಾಯಧನ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ನೇಕಾರರ ಏಳಿಗೆಗಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆಯಾಗಿ 225 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ.
ರಾಜ್ಯದಲ್ಲಿರುವ ಸಹಕಾರಿ ನೂಲಿನ ಗಿರಣಿಗಳನ್ನು ಪ್ರೋತ್ಸಾಹಿಸಲು ಪ್ರತಿ ಯೂನಿಟ್ಗೆ 3 ರೂ. ರಂತೆ ವಿದ್ಯುತ್ ಸಹಾಯಧನವನ್ನು ಒದಗಿಸಲಾಗುವುದು. ಕಲಬುರಗಿ ಜಿಲ್ಲೆಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಪಿ.ಎಂ. ಮಿತ್ರ ಮೆಗಾ ಜವಳಿ ಪಾರ್ಕ್ನಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು 390 ಕೋಟಿ ರೂ.ಗಳನ್ನು ಅನುಮೋದಿಸಿದೆ. ಈ ಯೋಜನೆಗಾಗಿ 2026-27ನೇ ಸಾಲಿಗೆ
75 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಮೈಸೂರಿನಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಉತ್ತೇಜಿಸಲು ಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು KIADB ವತಿಯಿಂದ ಅಭಿವೃದ್ಧಿಪಡಿಸಲಾಗುವುದು
ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ಅನುದಾನ ಮೀಸಲಿಡಲಾಗಿದೆ, ಶಕ್ತಿ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.ಗೃಹಜ್ಯೋತಿ ಯೋಜನೆಗೆ ಈ ವರ್ಷ 10,578 ಕೋಟಿ ರೂ. ಹಣ ಹಣ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
1700 ಕೋಟಿ ಮೊತ್ತದಲ್ಲಿ 158 ಕಿ.ಮೀ. ವರೆಗೆ ರಸ್ತೆ ವೈಟ್ ಟಾಪಿಂಗ್ ಮಾಡಲಾಗುವುದು.1936 ಕೋಟಿ ಮೊತ್ತದಲ್ಲಿ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು.ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಕೆಆರ್ ಪುರಂ ಮೆಟ್ರೋ ನಿಲ್ದಾಣದವರೆಗೂ,ಹೊರ ವರ್ತುಲ ರಸ್ತೆಯನ್ನ ಅಭಿವೃದ್ಧಿ ಪಡಿಸುವ 450 ಕೋಟಿಗಳ ಯೋಜನೆಗೆ ಚಾಲನೆ ನೀಡಲಾಗುವುದು.273 ಕೋಟಿ ರೂಪಾಯಿ ಮೊತ್ತದಲ್ಲಿ ರಾಜಕಾಲವೇಗಳ ಮೇಲ್ದರ್ಜೆಗೇರಿಸುವುದು. ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕಾಲೇಜುಗಳಲ್ಲಿ ದೌರ್ಜನ್ಯ ತಡೆಗೆ ರೋಹಿತ್ ವೇಮುಲ ಕಾಯ್ದೆ ಜಾರಿ ಜಾರಿ ಮಾಡಲಾಗುತ್ತದೆ. ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ನಿರ್ಧಾರ ಮಾಡಲಾಗಿದೆ. ಧಾರವಾಡ, ಬೆಂಗಳೂರಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗೆ ಅಧ್ಯಯನ ಕೇಂದ್ರ ನಿರ್ಮಿಸಲಾಗುವುದು.
ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರಲಾಗುವುದು, ವಾಯುಯಾನ ಹಾಗೂ ಜಲಸಾಹಸ ಯೋಜನೆ ಅನುಷ್ಠಾನಗೊಳಿಸಲಾಗುವುದು. ಸೀ ಪ್ಲೇನ್, ಹೆಲಿಟ್ಯಾಕ್ಸಿ, ಜಾಯ್ ರೈಡ್, ರಿವರ್ ಕ್ರೂಸ್ಗೆ ಪ್ರೋತ್ಸಾಹ ನೀಡಲಾಗುತ್ತದೆ. ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ, ಪೊಲೀಸರಿಗೆ ಕೌಶಲ್ಯ ತರಬೇತಿ ನೀಡಲಾಗುವುದು. ಗದಗ-ಕಪ್ಪತ್ತಗುಂಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅಭಿವೃದ್ಧಿಗೊಳಿಸಲಾಗುವುದು, ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿ ಕೈಮರದವರೆಗೆ ರೋಪ್ ವೇ ನಿರ್ಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಹೊಸ ಕೈಗಾರಿಕಾ ನೀತಿ 2025-30ರಡಿ ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅತಿ ಹಿಂದುಳಿದ ಪ್ರದೇಶಗಳಿಗೆ ಶೇ.5ರಷ್ಟು ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುವುದು, ಹಿಂದುಳಿದ ಪ್ರದೇಶಗಳಿಗೆ ಶೇ.3ರಷ್ಟು ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುವುದು, ಬೆಂಗಳೂರಿನಿಂದಾಚೆಯೂ ಕೈಗಾರಿಕಾಭಿವೃದ್ಧಿಯನ್ನ ಉತ್ತೇಜಿಸುವ ಗುರಿ ಹೊಂದಲಾಗಿದೆ. ಹೂಡಿಕೆಗೆ ಪೂರಕವಾಗುವಂತೆ ಸುಲಲಿತವಾಗಿ ಉದ್ಯಮ ನಡೆಸಲು ಕ್ರಮ ಕೈಗೊಳ್ಳಲಾಗುವುದು.
ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಯೋಜನೆ ಜಾರಿಗೆ ನಿರ್ಧಾರ ಮಾಡಲಾಗಿದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಿಸಲಾಗುವುದು. ಧನಶ್ರೀ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಲಾಗುವುದು. 30 ಸಾವಿರ ರೂಪಾಯಿಯಿಂದ 45 ಸಾವಿರ ರೂ.ಗೆ ಹೆಚ್ಚಳ ಮಾಡಲಾಗುವುದು.18 ವರ್ಷದ ಮಕ್ಕಳಿಗಾಗಿ ಮಾದಕ ವ್ಯಸನಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬಜೆಟ್ ಮಂಡನೆ ನಂತರ ಚೊಂಬು ಹಿಡಿದು ಪ್ರತಿಭಟನೆಗೆ ಬಿಜೆಪಿ ನಿರ್ಧಾರ ಮಾಡಿದೆ. ವಿಧಾನಸೌಧದ ಪೂರ್ವ ದ್ವಾರದಿಂದ ಪಶ್ಚಿಮ ದ್ವಾರದವರೆಗೆ ಮೆರವಣಿಗೆ ಮಾಡಲಿದ್ದಾರೆ.
ಕರ್ನಾಟಕದಲ್ಲಿ NCC ಯನ್ನು ಉತ್ತೇಜಿಸುವ ಸಲುವಾಗಿ ಪ್ರಸ್ತುತ ಇರುವ 96,000 ಎನ್ಸಿಸಿ ಕೆಡೆಟ್ಗಳ ಕಾರ್ಯಬಲವನ್ನು ಮುಂದಿನ ಎರಡು ವರ್ಷಗಳಲ್ಲಿ 10,000 ಗಳಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ತದಡಿ ಪ್ರದೇಶದಲ್ಲಿ ಪರಿಸರಸ್ನೇಹಿ ವಸತಿ ವ್ಯವಸ್ಥೆ ಮಾಡಲಾಗುವುದು, ಪ್ರವಾಸಿ ಮಾಹಿತಿ ಕೇಂದ್ರಗಳು, ಪರಿಸರ ಸ್ನೇಹಿ ವಾಕಿಂಗ್ ಕಾರಿಡಾರ್ ನಿರ್ಮಿಸಲಾಗುವುದು, ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮಾಡಲಾಗುವುದು. ಈ ಪೈಕಿ 7 ರೈಲು ಮಾರ್ಗಗಳಿಗೆ ಭೂಸ್ವಾಧೀನಕ್ಕಾಗಿ 2,950 ಕೋಟಿ ರೂ. ಮೀಸಲಿಡಲಾಗಿದೆ. ನಿರ್ಮಾಣ ಕಾಮಗಾರಿಗಾಗಿ 2,682 ಕೋಟಿ ರೂ. ವೆಚ್ಚ ಮಾಡಲಾಗಿದೆ. 2026-27ನೇ ಆಯವ್ಯಯದಲ್ಲಿ 600 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಜ್ಯ ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ನಿರ್ಧಾರ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಹೊಣೆಗಾರಿಕೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ ಪಡೆಯಲಾಗುವುದು, 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗುವುದು, 7 ದೇಶಿಯ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ 1,593 ಕೋಟಿ ರೂ. ಮೀಸಲಿಡಲಾಗುವುದು. ಏರ್ಪೋರ್ಟ್ಗಳ ಅಭಿವೃದ್ಧಿಗೆ ಈ ವರ್ಷ 200 ಕೋಟಿ ರೂ. ಅನುದಾನ,ವಿಜಯಪುರ, ಶಿವಮೊಗ್ಗದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿಯಾಗಲಿದೆ, ಬೆಲೆ ನಿಗದಿ ಮಾಡುವ ಜವಾಬ್ದಾರಿ ಉತ್ಪಾದಕರ ಹೆಗಲಿಗೆ ಬಿದ್ದಿದೆ, ಮದ್ಯದ ಉತ್ಪಾದಕರಿಗೆ ಹೊಸ ಜವಾಬ್ದಾರಿಯನ್ನು ಸರ್ಕಾರ ಕೊಟ್ಟಿದೆ. ಸರ್ಕಾರದಿಂದ ಮದ್ಯದ ಬೆಲೆ ನಿರ್ಧಾರ ಆಗುವುದಿಲ್ಲ, ಇನ್ಮುಂದೆ ಮದ್ಯದ ಬೆಲೆ ಏರಿಕೆ ಉತ್ಪಾದಕರೇ ಮಾಡ್ಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು.
ಕಳೆದ ವರ್ಷ ಪ್ರಾರಂಭಿಸಲಾದ, ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸುವ ಅಭಿಯಾನದ ಪರಿಣಾಮವಾಗಿ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವು ಶೇ.24ರಷ್ಟು ಇಳಿಕೆಯಾಗಿರುತ್ತದೆ. ಈ ಅಭಿಯಾನದಡಿ ಪ್ರತಿ ತಾಯಂದಿರ ಮರಣವನ್ನು ತಜ್ಞರ ಸಮಿತಿಯಿಂದ ವಿಶ್ಲೇಷಿಸಿ ಗುಣಾತ್ಮಕವಾದ ಗರ್ಭಿಣಿ ಮತ್ತು ಪ್ರಸವ ಸೇವೆಗಳನ್ನು ನೀಡಲಾಗುತ್ತಿದೆ. ಹೆರಿಗೆ ಆಸ್ಪತ್ರೆಗಳಿಗೆ ಮಾರ್ಗದರ್ಶನ, ಹೆಚ್ಚಿನ ಮಾನವ ಸಂಪನ್ಮೂಲ ಮತ್ತು ಆಧುನಿಕ ಉಪಕರಣಗಳನ್ನು ನೀಡಲಾಗುತ್ತಿದೆ.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಹಾಗೂ ಐದು ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್ಗಳ ಬಲವರ್ಧನೆ, ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ADB ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ʻಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ADB ನೆರವಿನೊಂದಿಗೆ 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.
2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ.
ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುತ್ತದೆ, ಪ್ರಸಕ್ತ ಸಾಲಿನಲ್ಲಿ 15 ಸಾವಿರ ಭೋದಕ ಹುದ್ದೆಗಳ ನೇಮಕಾತಿ ಮಾಡಲಾಗುವುದು, 800 ಶಾಲೆಗಳು ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣಕ್ಕೆ ನಿರ್ಧರಿಸಲಾಗುತ್ತದೆ. 800 ಶಾಲೆಗಳ ಉನ್ನತೀಕರಣಕ್ಕೆ 3900 ಕೋಟಿ ರೂ. ಅನುದಾನ ನೀಡಲಾಗುವುದು.ಪ್ರಾಥಮಿ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ನೀಡಲಾಗುತ್ತದೆ.
1ರಿಂದ 10ನೇ ತರಗತಿಯವರೆಗೆ ಉಚಿತ ಪಠ್ಯ ಪುಸ್ತಕಗಳ ವಿತರಣೆ ಮಾಡಲಾಗುತ್ತದೆ.565 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳ ದುರಸ್ತಿಗೆ ಸರ್ಕಾರ ಕ್ರಮ ಕೈಗೊಳ್ಳಲಾಗುವುದು. ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ 75 ಕೋಟಿ ರೂ. ಮೀಸಲು, ಶಾಲಾ-ಕಾಲೇಜು ನಿರ್ವಹಣೆಗಾಗಿ 125 ಕೋಟಿ ರೂ. ಅನುದಾನ
ನೀಡಲಾಗುವುದು, ಶಿಕ್ಷಕರ ಇಂಗ್ಲಿಷ್ ಭಾಷಾ ತರಬೇತಿ 24 ಕೋಟಿ ರೂ. ಅನುದಾನ, 8ರಿಂದ 12ನೇ ತರಗತಿಗೆ AI ಆಧಾರಿತ ಕಲಿಕಾ ಸೌಲಭ್ಯ, ವಿದ್ಯಾರ್ಥಿಗಳ ಒತ್ತಡ ನಿವಾರಣೆಗೆ ಆರೋಗ್ಯ ಸಲಹೆಗಾರರ ನೇಮಕ ಮಾಡಲಾಗುವುದು.
ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಕೆ.ಆರ್.ಪುರಂನಿಂದ ಮೈಸೂರು ರಸ್ತೆ ವರೆಗೆ 40 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತದೆ. 40 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗುತ್ತದೆ. ಮೊದಲನೇ ಹಂತದಲ್ಲಿ 17 ಕಿ.ಮೀ ಉದ್ದದ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಿಸಲಾಗುತ್ತದೆ. ಹೆಬ್ಬಾಳ-ಸಿಲ್ಕ್ ಬೋರ್ಡ್ವರೆಗೂ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗೆ 17,780 ಕೋಟಿ ರೂಪಾಯಿ ಮೊತ್ತಕ್ಕೆ ಟೆಂಡರ್ ಕರೆಯಲಾಗುತ್ತದೆ. ಹೆಬ್ಬಾಳ-ಮೇಕ್ರಿ ಸರ್ಕಲ್ವರೆಗೂ ಸುರಂಗ ಮಾರ್ಗ ನಿರ್ಮಿಸಲಾಗುತ್ತದೆ.ಸುರಂಗ ಮಾರ್ಗ ಹಾಗೂ ಮೇಲ್ಸೇತುವೆ ರಸ್ತೆಗೆ 2,250 ಕೋಟಿ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಜಿ.ಎಸ್.ಟಿ ಸಂಗ್ರಹಣೆಯಲ್ಲಿನ ಕುಸಿತದಿಂದ ರಾಜ್ಯಗಳಲ್ಲಿ ಹೆಚ್ಚಿನ ಹಣಕಾಸು ಒತ್ತಡ ಉಂಟಾಗಿದೆ. ತೆರಿಗೆ ರಚನೆಯಲ್ಲಿನ ಬದಲಾವಣೆ ಮತ್ತು ಜಿ.ಎಸ್.ಟಿ ದರ ತರ್ಕಬದ್ಧಗೊಳಿಸುವಿಕೆಯು ಕೇಂದ್ರ ಸರ್ಕಾರಕ್ಕಿಂತ ಹೆಚ್ಚಾಗಿ ರಾಜ್ಯಗಳ ರಾಜಸ್ವ ಸಂಗ್ರಹಣೆಯ ಮೇಲೆ ನೇರವಾಗಿ ಪ್ರಭಾವ ಬೀರಿದೆ. ರಾಜ್ಯಗಳು ರಾಜಸ್ವ ನಷ್ಟವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ, ಮಾದಕ ವಸ್ತುಗಳು ಮತ್ತು ಐಶಾರಾಮಿ ವಸ್ತುಗಳ ಮೇಲೆ ಸೆಸ್ ಮತ್ತು ಇತರೆ ತೆರಿಗೆಗಳನ್ನು ವಿಧಿಸುವ ಮೂಲಕ ಕೇಂದ್ರ ಸರ್ಕಾರವು ರಾಜಸ್ವವನ್ನು ಸಂಗ್ರಹಿಸುತ್ತಿದ್ದು, ಈ ಆದಾಯದ ಸಂಪೂರ್ಣ ಮೊತ್ತವು ಕೇಂದ್ರ ಸರ್ಕಾರದ ಬೊಕ್ಕಸವನ್ನು ಸೇರಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಸ್ಟಾರ್ಟ್ಅಪ್, ಎಲೆಕ್ಟ್ರಾನಿಕ್ಸ್, ಏರೋಸ್ಪೇಸ್ ಕ್ಷೇತ್ರಗಳಲ್ಲಿನ ಸಾಧನೆಗಳು ಜಾಗತಿಕ ಹೂಡಿಕೆ ಮತ್ತು ಪ್ರತಿಭೆಗಳನ್ನು ಸೆಳೆಯುತ್ತಿವೆ. ಬಿಯಾಂಡ್ ಬೆಂಗಳೂರು ಪರಿಕಲ್ಪನೆಯು ಹೆಚ್ಚಿನ ಬಂಡವಾಳವನ್ನು ಆಕರ್ಷಿಸುತ್ತಿದೆ. ರಾಜ್ಯವು ರೂಪಿಸಿರುವ ಹೊಸ ಕೈಗಾರಿಕಾ ನೀತಿಯಿಂದ ಹಂತ-2 ಮತ್ತು ಹಂತ-3 ನಗರಗಳಲ್ಲಿಯೂ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ವಸತಿರಹಿತರಿಗೆ ಮನೆಗಳು, ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗಗಳನ್ನು ಕಲ್ಪಿಸಿಕೊಡಲು ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದೇವೆ. ಹವಾಮಾನ ಬದಲಾವಣೆಯಿಂದ ಉಂಟಾಗುತ್ತಿರುವ ತಲ್ಲಣಗಳನ್ನು ನಿಭಾಯಿಸಲು ಸೂಕ್ತ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಯಲ್ಲಿ ರಾಜ್ಯದ ರಸ್ತೆ, ಸೇತುವೆ, ಕಟ್ಟಡಗಳ ನಿರ್ಮಾಣಕ್ಕೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ. ಇಲಾಖಾವಾರು ನೀಡುವ ಅನುದಾನಗಳನ್ನು ಹೊರತುಪಡಿಸಿ ಕಳೆದ ವರ್ಷ ರಸ್ತೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ವನ್ನು ಜಾರಿಗೊಳಿಸಿ 8,600 ಕೋಟಿ ರೂ. ಗಳ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಇದರ 2ನೇ ಹಂತವಾಗಿ 2026-27ನೇ ಸಾಲಿನಲ್ಲಿ 4,000 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ ನೀಡಲಾಗುವುದು, ಮೂರು ವರ್ಷಗಳಲ್ಲಿ ಅವಧಿಯಲ್ಲಿ 13,000 ಕೋಟಿಗಳ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾರವಾರ, ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ತಲಾ 100 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಮುನಿರಾಬಾದ್-ಟಿ.ಬಿ ಡ್ಯಾಂ ಬಳಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್ಲೆನ್ಸ್,ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆಯಲ್ಲಿ ಸ್ಥಾಪನೆ ಮಾಡಲಾಗುವುದು. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಸಂಪರ್ಕ ರಹಿತ ಹಾಗೂ ಜನವಸತಿ ಪ್ರದೇಶಗಳಿಗೆ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗಾಗಿ 300 ಕಾಲುಸಂಕಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಘೋಷಿಸಿದ್ದಾರೆ.
ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ ಎಐ ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಆರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ ಮಾಡಲಾಗುತ್ತದೆ, ಬೆಳಗಾವಿ, ಕಲಬುರಗಿಯಲ್ಲಿ ಕುರಿ ಸಾಕಾಣಿಕೆಗೆ ಪೋತ್ಸಾಹ ನೀಲಡಾಗುತ್ತದೆ. ಹಸು, ಎಮ್ಮೆ ಖರೀದಿಸಲು ಪ್ರೋತ್ಸಾಹ ಧನಕ್ಕೆ 40 ಕೋಟಿ ರೂ. ಮೀಸಲಿಡಲಾಗುವುದು, 20 ತಾಲೂಕು ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ.10 ಕೋಟಿ ರೂ. ವೆಚ್ಚದಲ್ಲಿ 15 ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸಲಾಗುವುದು. ಮೈಸೂರಿನಲ್ಲಿ ಬೊಯರ್ ಮೇಕೆ ತಳಿ ಸಂವರ್ಧನಾ ಕೇಂದ್ರ ಸ್ಥಾಪಿಸಲಾಗುವುದು. ಬಂಡೂರು ಕುರಿ ಸಂವರ್ಧನಾ ಕೇಂದ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಅಡಿಗೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಆರೋಗ್ಯ ಇಲಾಖೆ ಮೂಲ ಸೌಕರ್ಯ ಅಭಿವೃದ್ಧಿಗೆ 900 ಕೋಟಿ ರೂ. ಮೀಸಲಿಡಲಾಗುವುದು, ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಟ್ರಾಮಾ ಕೇರ್ ಸೆಂಟರ್ ತೆರೆಯಲಾಗುವುದು. ಐಸಿಯುಗಳಿಗೆ ಉಪಕರಣ ಮೇಲ್ದರ್ಜೆಗೇರಿಸಲು 45 ಕೋಟಿ ರೂಪಾಯಿ ಮೀಸಲಿಡಲಾಗುವುದು. ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಪೌಷ್ಟಿಕ ಪುನಶ್ಚೇತನ ಕೇಂದ್ರ ತೆರೆಯಲಾಗುವುದು. 18 ವರ್ಷದವರೆಗಿನ ಮಧುಮೇಹ ರೋಗಿಗಳಿಗೆ ಉಚಿತ ಇನ್ಸುಲಿನ್ ಪೆನ್ ನೀಡಲಾಗುವುದು. ಮಾರಣಾಂತಿಕ ಕಾಯಿಲೆ ರೋಗಿಗಳಿಗೆ ಕೇರಳ ಮಾದರಿ ಗೃಹಾಧಾರಿತ ಆರೈಕೆ ಒದಗಿಸಲಾಗುವುದು. ಇಸ್ಕಾನ್ ಮೂಲಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರ ಪೂರೈಕೆ ಮಾಡಲಾಗುವುದು. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಶೀಘ್ರ ಭರ್ತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಿಸಲಾಗುತ್ತದೆ. 100 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುತ್ತದೆ. ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ AI ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಚಿತ್ರದುರ್ಗದಲ್ಲಿ ಕೃಷಿ ಉದ್ದಿಮೆ ತರಬೇತಿ ಕೇಂದ್ರ ಉನ್ನತೀಕರಣಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ 2026ರ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ ಮಾಡುವುದಾಗಿ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆಜಿಎಫ್ನಲ್ಲಿ ESI ಆಸ್ಪತ್ರೆ ಉನ್ನತೀಕರಣಗೊಳಿಸುವುದಾಗಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
60 ಕೋಟಿ ರೂ. ವೆಚ್ಚದಲ್ಲಿ ನೂತನ10 GTTC ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ, ಕಾರ್ಮಿಕರ ಮಕ್ಕಳಿಗಾಗಿ ನೂತನ 62 ವಸತಿ ಶ್ರಮಿಕ ಶಾಲೆ ಆರಂಭಿಸಲಾಗುತ್ತದೆ. ಒಟ್ಟು 104 ಶಾಲೆಗಳ ಆರಂಭಕ್ಕೆ ಆದ್ಯತೆ ನೀಡಲಾಗುತ್ತದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ ತೆರೆಯಲಾಗುತ್ತದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಕಾಡೆಮಿ ಸ್ಥಾಪನೆ ಮಾಡಲಾಗುತ್ತದೆ. ಕಾರ್ಮಿಕರ ವಿಮಾ ಸೊಸೈಟಿಯಿಂದ ಹುಬ್ಬಳ್ಳಿ, ಇಂದಿರಾನಗರ , ಮೈಸೂರು, ದೊಡ್ಡ ಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ ನೀಡಲಾಗಿದೆ. ನೊಂದಣಿ ಹಾಗೂ ಮುದ್ರಾಂಕ ಇಲಾಖೆಗೆ 29 ಸಾವಿರ ಕೋಟಿ ರಾಜಸ್ವ ಗುರಿ, ಅಬಕಾರಿ ಇಲಾಖೆ ಇಲಾಖೆಯಲ್ಲಿ 45,000 ಕೋಟಿ ರೂ. ಆದಾಯ ಗುರಿ ನೀಡಲಾಗಿದೆ.
ಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ ನೀಡಲಾಗುತ್ತಿದೆ. ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ . ಕರ್ನಾಟಕ 45 ಉತ್ಪನ್ನಗಳಿಗೆ GI ಮಾನ್ಯತೆ ದೊರೆತಿದೆ.ಮುಜರಾಯಿ ಇಲಾಖೆ ವ್ಯಾಪ್ತಿಯ 259 ಕಲ್ಯಾಣಿಗಳ ಪುನರುಜ್ಜೀವನ ಮಾಡಲಾಗುತ್ತದೆ. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಗೆ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ.
ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇ ನಿರ್ಮಾಣ ಮಾಡಲಾಗುತ್ತದೆ. ಪಿಪಿಪಿ ಮಾದರಿಯಲ್ಲಿ ರೋಪ್ ವೇ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ ತೆರೆಯಲಾಗುತ್ತದೆ, ಕುವೆಂಪು ವಿವಿಯಲ್ಲಿ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು ಎಂದು 2026-27ನೇ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಆರ್ಥಿಕ ಅಭಿವೃದ್ಧಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ, ಹೆಚ್ಚು ಹಾಲು ಕೊಡುವ ಹಸುಗಳಿಗೆ ಹೆಚ್ಚು ಆರೈಕೆ ಮಾಡಬೇಕು, ಒಕ್ಕೂಟ ಸರ್ಕಾರವೂ ಸಂವೇದನಾ ಶೀಲತೆಯಿಂದ ವರ್ತಿಸಬೇಕು, ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆರ್ಥಿಕ ಸುಧಾರಣೆ ಆಗ್ತಿದೆ, ಸೌಕರ್ಯ ಅಭಿವೃದ್ದಿಗೂ ನಾವು ಗಮನ ಹರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಬಜೆಟ್ಗೆ ಅನುಮೋದನೆ ಸಿಕ್ಕಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ, ಬಜೆಟ್ ಮಂಡನೆಗೆ ಅನುಮೋದನೆ ಪಡೆಯಲಿದ್ದಾರೆ.
ಕೆಂಪು ಸೂಟ್ಕೇಸ್ನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಬಂದಿದ್ದಾರೆ. ಕೆಲವೇ ಕ್ಷಣಗಳಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಲಿದೆ.
ಇಂದು ಸಿದ್ದರಾಮಯ್ಯ 17ನೇ ದಾಖಲೆಯ ಬಜೆಟ್ ಮಂಡನೆ ಹಿನ್ನೆಲೆ, ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ಇರಲಿದೆ. ರಾಜ್ಯದ ಆಯ್ದ 230 ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ಮಾಡಲಾಗುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಬಜೆಟ್ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಬೆಂಗಳೂರಿನ 6 ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ವೀಕ್ಷಿಸಬಹುದು.
ಬೆಂಗಳೂರಿನ ಅಭಿವೃದ್ಧಿಗೆ ಮತ್ತಷ್ಟು ಅನುದಾನ ಮೀಸಲಿಡಬಹುದು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬಹುದು, ಮೆಟ್ರೋ ವಿಸ್ತರಣೆ, ಡಬಲ್ ಡೆಕ್ಕರ್ ಮಾರ್ಗ, ಐಟಿ ಕಾರಿಡಾರ್ ಸ್ಥಾಪನೆಗೆ ಹಣ ಮೀಸಲಿಡಬಹುದು, ಕೈಗೆಟುಕುವ ದರದಲ್ಲಿ ವಸತಿ, ಶುದ್ಧ ಕುಡಿಯುವ ನೀರು ಮತ್ತು ನಿರಂತರ ವಿದ್ಯುತ್ ಪೂರೈಕೆಯಂತಹ ಪ್ರಮುಖ ಬೇಡಿಕೆ ಈಡೇರಿಸುವ ನಿರೀಕ್ಷೆ. ವಿದ್ಯುತ್ ತೆರಿಗೆ ಇಳಿಕೆ, ಆಸ್ತಿ ತೆರಿಗೆ ರಿಯಾಯಿತಿ ನೀಡುವ ನಿರೀಕ್ಷೆ ಇದೆ.
ಬಜೆಟ್ ನಲ್ಲಿ ಲಕ್ಕುಂಡಿ ಅಭಿವೃದ್ಧಿಗೆ 100ಕೋಟಿ ರೂ. ನೀಡುವ ನಿರೀಕ್ಷೆ ಇದೆ. ಇತ್ತೀಚೆಗಷ್ಟೇ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿತ್ತು. ಲಕ್ಕುಂಡಿ ಗ್ರಾಮ ಸ್ಥಳಾಂತರಕ್ಕೆ ಗ್ರಾಮಸ್ಥರೇ ಸಜ್ಜಾಗಿದ್ದಾರೆ.
2020-21ರಲ್ಲಿ ರಾಜ್ಯದ ತೆರಿಗೆ ಆದಾಯ ಕುಸಿತ ಕಂಡಿತ್ತು. ಆದರೆ 2021-22ರಿಂದ ಅದು ವೇಗವಾಗಿ ಏರಿಕೆ ಕಾಣತೊಡಗಿತು. 2022-23ರಲ್ಲಿ ತೆರಿಗೆ ಸಂಗ್ರಹಣದಲ್ಲಿ ದೊಡ್ಡ ಜಿಗಿತ ಕಂಡುಬಂದಿತು. 2023-24ರಲ್ಲಿ ಬೆಳವಣಿಗೆ ಬಹುತೇಕ ಸ್ಥಗಿತಗೊಂಡಂತಾಗಿದ್ದರೂ, 2024-25 ಮತ್ತು 2025-26ರಲ್ಲಿ ಮತ್ತೆ ವೇಗ ಪಡೆದಿದೆ. 2025-26ರಲ್ಲಿ ತೆರಿಗೆ ಆದಾಯವು 2 ಲಕ್ಷ ಕೋಟಿ ರೂ.ಗೂ ಅಧಿಕವಾಗುವ ನಿರೀಕ್ಷೆ ವ್ಯಕ್ತವಾಗಿದೆ.
ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುವ ನಿರೀಕ್ಷೆ ಇದೆ. ವೈದ್ಯಕೀಯ ಕಾಲೇಜು ಇಲ್ಲದ ಜಿಲ್ಲೆಗಳಿಗೆ ಹೊಸ ಕಾಲೇಜುಗಳ ಘೋಷಣೆ ಸಾಧ್ಯತೆ ದಟ್ಟವಾಗಿದೆ.ಬೆಳಗಾವಿ-ಹುಬ್ಬಳ್ಳಿ ರೈಲು ಮಾರ್ಗ, ಕೈಗಾರಿಕಾ ಆಧುನೀಕರಣ, ಪ್ರವಾಸೋದ್ಯಮಕ್ಕೆ ಪಿಪಿಪಿ ಮಾದರಿಯಲ್ಲಿ ಮೂಲಸೌಕರ್ಯ?,ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳಿಗೆ ವಿಶೇಷ ಅನುದಾನ ನಿರೀಕ್ಷೆ ಇದೆ.
ಬಜೆಟ್ ಅಧಿವೇಶನವು ಮಾರ್ಚ್ 6 ರಿಂದ ಮಾರ್ಚ್ 27 ರವರೆಗೆ ನಡೆಯಲಿದ್ದು, ಉಭಯ ಸದನಗಳಲ್ಲಿ 14 ದಿನಗಳ ಚರ್ಚೆ ನಡೆಯಲಿದೆ. ಮಾಡಿದ ಘೋಷಣೆಗಳು ಕರ್ನಾಟಕದ ಆರ್ಥಿಕ ದಿಕ್ಕು, ಅಭಿವೃದ್ಧಿ ಆದ್ಯತೆಗಳು ಮತ್ತು ಮುಂಬರುವ ವರ್ಷದ ಕಲ್ಯಾಣ ಬದ್ಧತೆಗಳ ಬಗ್ಗೆ ಚರ್ಚೆ ನಡೆಯಲಿದೆ.
ಈ ವರ್ಷದ ರಾಜ್ಯ ಬಜೆಟ್ ಗಾತ್ರ ಸುಮಾರು 4.50 ಲಕ್ಷ ಕೋಟಿ ರೂ. ತಲುಪುವ ಸಾಧ್ಯತೆ ಇದೆ ಎಂದು ಹಣಕಾಸು ಇಲಾಖೆಯ ಅಂದಾಜುಗಳು ಸೂಚಿಸುತ್ತವೆ. ಅದೇ ಸಮಯದಲ್ಲಿ ಸಾಲದ ಪ್ರಮಾಣವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಹಣಕಾಸು ನಿರ್ವಹಣೆ ಹೇಗೆ ಮಾಡುತ್ತದೆ ಎಂದು ಕಾದು ನೋಡಬೇಕಿದೆ.
ಈ ಬಾರಿಯ ಬಜೆಟ್ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವುದರ ಜೊತೆಗೆ, ರಾಜ್ಯದ ಆರ್ಥಿಕ ಹೊರೆಯನ್ನು ತಗ್ಗಿಸಲು ಯೋಜನೆಗಳಲ್ಲಿ ಬದಲಾವಣೆಗಳನ್ನು ತರಲಾಗುತ್ತದೆಯೇ ಎಂಬ ಕುತೂಹಲವಿದೆ. ಮೂಲಸೌಕರ್ಯ, ಶಿಕ್ಷಣ, ಕೃಷಿ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಬಜೆಟ್ನಲ್ಲಿ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ. ಹೀಗಾಗಿ, ಸಿದ್ದರಾಮಯ್ಯ ಮಂಡಿಸಲಿರುವ ಈ ಬಜೆಟ್ನತ್ತ ರಾಜ್ಯದ ಜನರ ಚಿತ್ತ ನೆಟ್ಟಿದೆ.
ಬಜೆಟ್ 2026 ರ ನೇರ ಪ್ರಸಾರವನ್ನು ನೀವು ಟಿವಿಯಲ್ಲಿ ನಿಮ್ಮ ನೆಚ್ಚಿನ ಟಿವಿ9 ಕನ್ನಡದಲ್ಲಿ ವೀಕ್ಷಿಸಬಹುದು. ಇನ್ನು ನೀವು ಇದ್ದಲ್ಲೇ ಮೊಬೈಲ್ ನಲ್ಲಿ ನೋಡುವುದಾದರೆ ಟಿವಿ9 ಯುಟ್ಯೂಬ್ನಲ್ಲೂ ಸಹ ನೋಡಬಹುದು. ಹಾಗೇ ಬಜೆಟ್ನಲ್ಲಿ ಏನೇನು ಘೋಷಣೆಯಾಗುತ್ತೆ ಎನ್ನುವುದನ್ನು ತಿಳಿಯಲು ಟಿವಿ9 ಕನ್ನಡ ವೆಬ್ಸೈಟ್ನ ಲೈವ್ ಪೇಜ್ ನೋಡಿ. ಹೀಗೆ ದೃಶ್ಯ ಜೊತೆ ಟೆಕ್ಸ್ಟ್ ಫಾರ್ಮೆಂಟ್ನಲ್ಲೂ ಟಿವಿ9 ನಿಮಗೆ ಕ್ಷಣ ಕ್ಷಣದ ಮಾಹಿತಿ ನೀಡುತ್ತೆ.
ರಾಜ್ಯ ಬಜೆಟ್ ಮಂಡನೆಗೂ ಮುನ್ನ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರ ಸುಮಾರು 1.15 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಮತ್ತು ಸಾರ್ವಜನಿಕರ ಮೇಲೆ ಹೊಸ ತೆರಿಗೆಗಳನ್ನು ವಿಧಿಸಬಹುದು ಎಂದು ಹೇಳಿದ್ದಾರೆ.
Karnataka Budget 2026-27 LIVE News Updates in Kannada: ಬೆಂಗಳೂರು, ಮಾರ್ಚ್ 06: ಇಂದು ಎಲ್ಲರ ಚಿತ್ತ ಕರ್ನಾಟಕ ಬಜೆಟ್(Karnataka Budget) ಮೇಲೆ ನೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಇದು ಅವರ 17ನೇ ಬಜೆಟ್. ಬಜೆಟ್ ಗಾತ್ರ ನಾಲ್ಕೂವರೆ ಲಕ್ಷ ಕೋಟಿ ರೂ.ತಲುಪುವ ನಿರೀಕ್ಷೆ ಇದೆ. 2025ರಲ್ಲಿ ಆದಾಯ ಸಂಗ್ರಹದ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗದ ಕಾರಣ 2026-27ನೇ ಸಾಲಿನ ಬಜೆಟ್ ಮೇಲೆ ಅದರ ಪರಿಣಾಮ ಗೋಚರಿಸುವ ಸಾಧ್ಯತೆಗಳಿವೆ.
1995-96ರಲ್ಲಿ ಮೊದಲ ಮುಂಗಡಪತ್ರ ಮಂಡಿಸಿದ್ದ ಸಿದ್ದರಾಮಯ್ಯ ಕಳೆದ 30 ವರ್ಷಗಳಲ್ಲಿ ಇದೀಗ 17 ಬಜೆಟ್ ಮಂಡಿಸಲಿದ್ದಾರೆ. 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಹಣಕಾಸು ಖಾತೆಯನ್ನೂ ಹೊಂದಿದ್ದರು. ಆ ಅವಧಿಯ ಎಲ್ಲಾ ಬಜೆಟ್ಗಳನ್ನ ಅವರೇ ಮಂಡಿಸಿದ್ದರು. ಎರಡನೇ ಅವಧಿ ಮುಖ್ಯಮಂತ್ರಿಯಾದ ಬಳಿಕ ಈವರೆಗೂ ಮೂರು ಬಾರಿ ಬಜೆಟ್ ಮಂಡಿಸಿದ್ದು, 4ನೇ ಬಜೆಟ್ ಮಂಡನೆಗೆ ಈಗ ಸಿದ್ಧವಾಗಿದ್ದಾರೆ.
2026ರ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಮೀಸಲಿಡಬಹುದು, ಪಂಜಾಬ್ ಮಾದರಿಯಲ್ಲಿ ರೈತರ ಓಡಾಟಕ್ಕೆ ಟೋಲ್ ಫ್ರೀ ವ್ಯವಸ್ಥೆ, ನಗರಗಳ ಅಭಿವೃದ್ಧಿಗೆ ಮೆಗಾಸಿಟಿ ಯೋಜನೆ ಘೋಷಣೆ ಸಾಧ್ಯತೆ, ಟನಲ್ ರೋಡ್ ಹಾಗೂ ಡಬಲ್ ಡೆಕ್ಕರ್ ರೋಡ್ ಯೋಜನೆ ವಿಸ್ತರಣೆ, ರೈತರ ಎಲ್ಲಾ ಬೆಳೆಗಳಿಗೆ ವಿಶೇಷ ವಿಮಾ ಯೋಜನೆ ಘೋಷಣೆ ಸಾಧ್ಯತೆ ಇದೆ.
ಮತ್ತಷ್ಟು ಓದಿ: Karnataka Budget 2026: ಸಿದ್ದರಾಮಯ್ಯ ದಾಖಲೆ ಬಜೆಟ್ ಎಷ್ಟು ಗಂಟೆಗೆ? ಲೈವ್ ನೋಡುವುದ್ಹೇಗೆ?
ಗ್ಯಾರಂಟಿ ಯೋಜನೆಗಳ ಜಾರಿಯಿಂದ ಯಶಸ್ಸು ಸಿಕ್ಕಿದೆ ಎನ್ನುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದೆ ಎನ್ನುವ ವಿಚಾರಗಳೂ ಜನರ ಬಾಯಲ್ಲಿ ಕೇಳಿಬರುತ್ತಿದೆ. ಸಿದ್ದರಾಮಯ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ಕೊಡುವ ಸಾಧ್ಯತೆ ಇದೆ. ಪ್ರಸ್ತುತ ಬಜೆಟ್ನಲ್ಲಿ ಸಿದ್ದರಾಮಯ್ಯ ಅಬಕಾರಿ ಸೆಸ್, ಇಂಧನ ಸೆಸ್ ಹೆಚ್ಚಿಸುವ ಸಾಧ್ಯತೆಗಳೂ ಇವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ 2024-2025ರಲ್ಲಿ ಒಟ್ಟು 3.71 ಲಕ್ಷ ಕೋಟಿ ರೂ. ಗಾತ್ರದ ಹಾಗೂ 2025-2026ರಲ್ಲಿ 4.09 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದರು. ಈ ಬಾರಿ ಯಾವೆಲ್ಲಾ ಘೋಷಣೆಗಳನ್ನು ಮಾಡಲಿದ್ದಾರೆ, ಯಾವುದೆಲ್ಲಾ ದುಬಾರಿಯಾಗಲಿವೆ, ಯಾವ್ಯಾವ ಜಿಲ್ಲೆಗಳಿಗೆ ಎಷ್ಟು ಹಣ ಸಿಗಲಿದೆ ಎಂಬುದರ ಕುರಿತ ಬಜೆಟ್ನ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಕನ್ನಡ ವೆಬ್ಸೈಟ್ನಲ್ಲಿ ವೀಕ್ಷಿಸಿ.
ಕರ್ನಾಟಕದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:22 am, Fri, 6 March 26