
ಬೆಂಗಳೂರು, ಅಕ್ಟೋಬರ್ 17: ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದ ನಂತರ ಬೆಂಗಳೂರಿನ ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣದ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡಿತ್ತು. ಇದರ ಬೆನ್ನಲ್ಲೇ ಗುರವಾರ (ಅ.16) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ (Karnataka Cabinet) ಬೆಂಗಳೂರು ನಗರದಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ಮತ್ತು ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಸಚಿವ ಸಂಪುಟ ತಾತ್ವಿಕ ಅನುಮೋದನೆ ನೀಡಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ 2,350 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ಮತ್ತು ಕ್ರೀಡಾ ಸಂಕೀರ್ಣವನ್ನು ನಿರ್ಮಿಸಲು ಗುರುವಾರ ಸಚಿವ ಸಂಪುಟ ‘ತಾತ್ವಿಕ’ ಅನುಮೋದನೆ ನೀಡಿದೆ. ಸಂಪುಟದಲ್ಲಿ ಮಾಧ್ಯಮ ಮತ್ತು ಸಭೆಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, “ಇಂಡ್ಲವಾಡಿ ಗ್ರಾಮದ ಸೂರ್ಯನಗರ ನಾಲ್ಕನೇ ಹಂತದ ವಿಸ್ತರಣೆಯಲ್ಲಿ 75 ಎಕರೆ ಪ್ರದೇಶದಲ್ಲಿ ಕ್ರೀಡಾಂಗಣ ಮತ್ತು ಕ್ರೀಡಾ ಸಂಕೀರ್ಣವನ್ನು ನಿರ್ಮಿಸಲು ವಸತಿ ಇಲಾಖೆಯ ಪ್ರಸ್ತಾವನೆಯನ್ನು ಸಚಿವ ಸಂಪುಟ ಅನುಮೋದಿಸಿದೆ. ವಿವರವಾದ ಯೋಜನಾ ವರದಿ ಮತ್ತು ಕಾರ್ಯಸಾಧ್ಯತಾ ಅಧ್ಯಯನವನ್ನು ಸಿದ್ಧಪಡಿಸಲು ನಾವು ಇಲಾಖೆಗೆ ನಿರ್ದೇಶನ ನೀಡಿದ್ದೇವೆ.” ಎಂದು ಅವರು ಹೇಳಿದರು.
ಈ ಕ್ರೀಡಾಂಗಣವು ಮೈಸೂರಿನಲ್ಲಿ ನಿರ್ಮಾಣಕ್ಕೆ ಉದ್ದೇಶಿಸಿರುವ ಮತ್ತು ತುಮಕೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಕ್ರೀಡಾಂಗಣಗಳ ನಂತರ ಕರ್ನಾಟಕದ ಮೂರನೇ ಅಂತರರಾಷ್ಟ್ರೀಯ ಕ್ರೀಡಾಂಗಣವಾಗಲಿದೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಾತನಾಡಿ, ಈ ಕ್ರೀಡಾಂಗಣವು 80,000 ಆಸನ ಸಾಮರ್ಥ್ಯವನ್ನು ಹೊಂದಿದ್ದು, 24 ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಿಗೆ ಸೌಲಭ್ಯಗಳನ್ನು ಒಳಗೊಂಡಿರುತ್ತದೆ. ಜೊತೆಗೆ, 3,000 ಆಸನಗಳ ಸಭಾಂಗಣವನ್ನೂ ನಿರ್ಮಿಸಲಾಗುತ್ತದೆ. ಈ ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ, ಇದು ದೇಶದ ಅತಿದೊಡ್ಡ ಕ್ರೀಡಾ ಸಂಕೀರ್ಣಗಳಲ್ಲಿ ಒಂದಾಗಲಿದೆ ಎಂದರು.
ಬೆಂಗಳೂರಿನಲ್ಲಿರುವ ಎಂ. ಚಿನ್ನಸ್ವಾಮಿ ಕ್ರೀಡಾಂಗಣವು ಕೇವಲ 38,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದೆ ಎಂದು ವಸತಿ ಇಲಾಖೆಯ ದಾಖಲೆಯು ಹೇಳಿದೆ. ಆದರೆ ಸಣ್ಣ ನಗರಗಳೇ ಇನ್ನೂ ದೊಡ್ಡ ಕ್ರೀಡಾಂಗಣಗಳನ್ನು ಹೊಂದಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ನಂತರದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು.ಅದರ ಬಳಿಕ ಚಿನ್ನಸ್ವಾಮಿಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ನಡೆದಿಲ್ಲ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:02 am, Fri, 17 October 25