
ಬೆಂಗಳೂರು, ಜೂನ್ 6: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ನೀಡಿದ್ದ ದಿಢೀರ್ ರಾಜೀನಾಮೆ ಪರ್ವ ಸದ್ಯ ರೋಚಕ ತಿರುವು ಪಡೆದುಕೊಂಡಿದೆ. ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ, ಶುಕ್ರವಾರ ತಡರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್ನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ರಾಮಲಿಂಗಾ ರೆಡ್ಡಿ ಸತತ ಎರಡೂವರೆ ಗಂಟೆಗಳ ಕಾಲ ಸುದೀರ್ಘ ಸಂಧಾನ ಮಾತುಕತೆ ನಡೆಸಿದ್ದಾರೆ.
‘ಕೊಟ್ಟರೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡಿ, ಇಲ್ಲದಿದ್ದರೆ ಸಚಿವ ಸ್ಥಾನವೇ ಬೇಡ’ ಎಂದು ಪಟ್ಟು ಹಿಡಿದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ, ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. 2023ರಲ್ಲೇ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ (ಡಿಕೆ ಬ್ರದರ್ಸ್) ಮನೆಗೆ ಬಂದು ಬೆಂಗಳೂರು ಅಭಿವೃದ್ಧಿ ಖಾತೆಯ ಭರವಸೆ ನೀಡಿದ್ದರು ಎಂದು ರೆಡ್ಡಿ ಬಹಿರಂಗಪಡಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ್ದ ಸಿಎಂ ಡಿಕೆಶಿ, ‘ಮಾತು ಕೊಟ್ಟಿದ್ದು ನಿಜ, ಆದರೆ ಖಾತೆ ಬದಲಾವಣೆ ವಿಚಾರವನ್ನು ಹೈಕಮಾಂಡ್ ನಿರ್ಧರಿಸಬೇಕು’ ಎನ್ನುತ್ತಲೇ ರಾಮಲಿಂಗಾ ರೆಡ್ಡಿ ಅವರ ಮನವೊಲಿಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದರು. ಬಿಟಿಎಂ ಲೇಔಟ್ ಹಾಗೂ ಜಯನಗರದ ಹಿರಿಯ ಆಪ್ತ ಮುಖಂಡರ ಮೂಲಕವೂ ಮನವೊಲಿಕೆಗೆ ಯತ್ನಿಸಲಾಗಿತ್ತು.
ಮಧ್ಯರಾತ್ರಿ 1:30ರ ಸುಮಾರಿಗೆ ಮಾತುಕತೆ ಮುಗಿಸಿ ಹೊರಬಂದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಯಾವುದೇ ಆತಂಕ ಬೇಡ, ನಾವೆಲ್ಲಾ ಹಳೆಯ ಸ್ನೇಹಿತರು. ಕೂತು ಮಾತನಾಡಿ ಎಲ್ಲವನ್ನೂ ಬಗೆಹರಿಸಿಕೊಂಡಿದ್ದೇವೆ ಎಂದರು. ರಾಜೀನಾಮೆ ವಾಪಸ್ ಪಡೆದಿದ್ದಾರೆಯೇ ಎಂಬ ಪ್ರಶ್ನೆಗೆ, ‘ನಿಮಗೆ ಎಲ್ಲವನ್ನೂ ಹೇಳಬೇಕಾಗಿಲ್ಲ’ ಎಂದರು. ಇತ್ತ ಸಚಿವ ರಾಮಲಿಂಗಾ ರೆಡ್ಡಿ ಕೂಡ ಸಿಎಂ ಧಾಟಿಯಲ್ಲೇ ಉತ್ತರಿಸಿ, ‘ಮುಖ್ಯಮಂತ್ರಿಗಳು ಏನು ಹೇಳಿದ್ದಾರೋ ಅದನ್ನೇ ನಾನು ಹೇಳುವುದು. ಎಲ್ಲ ಗೊಂದಲಗಳು ನಿವಾರಣೆಯಾಗಿವೆ’ ಎಂದು ಹೇಳಿ ಕಾರು ಹತ್ತಿ ನಿರ್ಗಮಿಸಿದರು.
ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಹೊಸ ಬಾಂಬ್: ‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ
ಮತ್ತೊಂದೆಡೆ, ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದಲ್ಲಿ ಇನ್ನೂ ಮೂವರಿಗೆ ಅಸಮಾಧಾನವಿದೆ ಎಂದು ಭವಿಷ್ಯ ನುಡಿದಿದ್ದರೆ, ಮತ್ತೊಂದೆಡೆ ಎಚ್.ಕೆ. ಪಾಟೀಲ್ ಈ ಬೆಳವಣಿಗೆಯನ್ನು ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಎಂದಿದ್ದಾರೆ. ಈ ಎಲ್ಲಾ ಹೈಡ್ರಾಮಾಗಳ ನಡುವೆ, ಮಧ್ಯರಾತ್ರಿಯ ಸಂಧಾನವು ಸಫಲವಾಗಿದೆಯೇ ಮತ್ತು ರಾಮಲಿಂಗಾ ರೆಡ್ಡಿ ಅಧಿಕೃತವಾಗಿ ರಾಜೀನಾಮೆ ವಾಪಸ್ ಪಡೆಯಲಿದ್ದಾರೆಯೇ ಎಂಬ ಕುರಿತ ಸಸ್ಪೆನ್ಸ್ ಮುಂದುವರಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ