ಸಚಿವ ಸಂಪುಟ ವಿಸ್ತರಣೆ ಹಗ್ಗಜಗ್ಗಾಟ ಕೊನೆಗೂ ಅಂತ್ಯ: ಸಿಕ್ತು ಹೈಕಮಾಂಡ್ ಗ್ರೀನ್ ಸಿಗ್ನಲ್! ಸೋಮವಾರ ಪ್ರಮಾಣವಚನ ಸಾಧ್ಯತೆ

Karnataka Cabinet Expansion: ಹಲವು ದಿನಗಳಿಂದ ವಿಳಂಬವಾಗಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಹೈಕಮಾಂಡ್ ಮಟ್ಟದಲ್ಲಿ ಒಪ್ಪಿಗೆ ನೀಡಿದ್ದಾರೆ. ರಾಜ್ಯ ನಾಯಕರಿಂದ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಪಡೆದಿರುವ ಅವರು ಎರಡು ದಿನದೊಳಗೆ ಅಂತಿಮ ಪಟ್ಟಿ ಕಳುಹಿಸುವುದಾಗಿ ತಿಳಿಸಿದ್ದಾರೆ. ಸೋಮವಾರ ಪ್ರಮಾಣವಚನ ನಡೆಯುವ ನಿರೀಕ್ಷೆಯಿದೆ.

ಸಚಿವ ಸಂಪುಟ ವಿಸ್ತರಣೆ ಹಗ್ಗಜಗ್ಗಾಟ ಕೊನೆಗೂ ಅಂತ್ಯ: ಸಿಕ್ತು ಹೈಕಮಾಂಡ್ ಗ್ರೀನ್ ಸಿಗ್ನಲ್! ಸೋಮವಾರ ಪ್ರಮಾಣವಚನ ಸಾಧ್ಯತೆ
ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್, ಸಿಎಂ ಡಿಕೆ ಶಿವಕುಮಾರ್ ಹಾಗೂ ರಣದೀಪ್ ಸುರ್ಜೇವಾಲ (ಸಾಂದರ್ಭಿಕ ಚಿತ್ರ)
Image Credit source: @DKShivakumar
Edited By:

Updated on: Jul 31, 2026 | 7:46 AM

ಮುಖ್ಯಾಂಶಗಳು

  • ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್
  • ರಾಹುಲ್‌ಗೆ ಸಚಿವಾಕಾಂಕ್ಷಿಗಳ ಪಟ್ಟಿ ಹಸ್ತಾಂತರ
  • ಸೋಮವಾರ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ

ಬೆಂಗಳೂರು, ಜುಲೈ 31: ಹಲವು ದಿನಗಳಿಂದ ಕಗ್ಗಂಟಾಗಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Karnataka Cabinet expansion) ಕೊನೆಗೂ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಗುರುವಾರ ಸಂಜೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi ರಾಜ್ಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಸ್ವೀಕರಿಸಿದ್ದು, ಎರಡು ದಿನದೊಳಗೆ ಪರಿಷ್ಕರಿಸಿ ಅಂತಿಮ ಪಟ್ಟಿಯನ್ನು ರಾಜ್ಯಕ್ಕೆ ಕಳುಹಿಸುವುದಾಗಿ ಸಂದೇಶ ನೀಡಿದ್ದಾರೆ. ಹೀಗಾಗಿ ಸೋಮವಾರ ನೂತನ ಸಚಿವರ ಪ್ರಮಾಣವಚನ ನಡೆಯುವ ಸಾಧ್ಯತೆ ಹೆಚ್ಚಾಗಿದೆ.

ರಾಹುಲ್ ಗಾಂಧಿ ಜೊತೆ ರಾಜ್ಯ ನಾಯಕರ ಸಭೆ

ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ಹಲವು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದರು. ರಾಹುಲ್ ಗಾಂಧಿ ಭೇಟಿಗೆ ಸಮಯ ಸಿಗದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ವಿಳಂಬವಾಗುತ್ತಿತ್ತು. ಕೊನೆಗೂ ಗುರುವಾರ ಸಂಜೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಉಪಸ್ಥಿತರಿದ್ದರು.

ಸಿಎಂ, ಮಾಜಿ ಸಿಎಂ ಪ್ರತ್ಯೇಕ ಪಟ್ಟಿ

ಸಭೆಯಲ್ಲಿ ಡಿ.ಕೆ. ಶಿವಕುಮಾರ್ ತಮ್ಮದೇ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ರಾಹುಲ್ ಗಾಂಧಿ ಅವರಿಗೆ ಹಸ್ತಾಂತರಿಸಿದ್ದಾರೆ. ಸಿದ್ದರಾಮಯ್ಯ ಕೂಡ ತಮ್ಮ ಪ್ರತ್ಯೇಕ ಪಟ್ಟಿಯನ್ನು ನೀಡಿದ್ದಾರೆ. ಎರಡೂ ಪಟ್ಟಿಗಳನ್ನು ಸ್ವೀಕರಿಸಿದ ರಾಹುಲ್ ಗಾಂಧಿ, ತಮ್ಮ ಬಳಿ ಇರುವ ಪಟ್ಟಿಯೊಂದಿಗೆ ಹೆಸರುಗಳನ್ನು ಪರಿಶೀಲಿಸಿ ಅಂತಿಮಗೊಳಿಸುವ ಪ್ರಕ್ರಿಯೆ ಕೈಗೊಂಡಿದ್ದಾರೆ. ಬಳಿಕ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನೂ ಪ್ರತ್ಯೇಕವಾಗಿ ಕರೆಸಿ ಮಾತುಕತೆ ನಡೆಸಿದ್ದಾರೆ.

ಹರಿಪ್ರಸಾದ್‌ಗೆ ದೆಹಲಿಯಲ್ಲೇ ಇರುವಂತೆ ಸೂಚನೆ

ರಾಜ್ಯ ನಾಯಕರಿಂದ ಪಟ್ಟಿಯನ್ನು ಪಡೆದಿರುವ ರಾಹುಲ್ ಗಾಂಧಿ, ಪರಿಷ್ಕರಣೆ ಬಳಿಕ ಎರಡು ದಿನದೊಳಗೆ ಅಂತಿಮ ಪಟ್ಟಿಯನ್ನು ರಾಜ್ಯಕ್ಕೆ ಕಳುಹಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಬಿ.ಕೆ. ಹರಿಪ್ರಸಾದ್ ಅವರಿಗೆ ದೆಹಲಿಯಲ್ಲೇ ಇರುವಂತೆ ಸೂಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಭಾನುವಾರ ರಾತ್ರಿ ಅಥವಾ ಅದಕ್ಕೂ ಮುನ್ನ ಸಚಿವರ ಅಂತಿಮ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಸೋಮವಾರ ಪ್ರಮಾಣವಚನ ನಡೆಯುವ ನಿರೀಕ್ಷೆ ವ್ಯಕ್ತವಾಗಿದೆ.

ಸಿಎಂ, ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್

ರಾಹುಲ್ ಗಾಂಧಿ ಅವರಿಂದ ಎರಡು ದಿನದೊಳಗೆ ಪಟ್ಟಿ ಕಳುಹಿಸುವ ಸಂದೇಶ ಬಂದ ಬಳಿಕ, ನಾಲ್ಕು ದಿನಗಳಿಂದ ದೆಹಲಿಯಲ್ಲಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಗುರುವಾರ ರಾತ್ರಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಹಲವು ಶಾಸಕರೂ ಶುಕ್ರವಾರ ಮುಂಜಾನೆ ಬೆಂಗಳೂರಿಗೆ ಮರಳಿದ್ದಾರೆ. ನಯನಾ ಮೋಟಮ್ಮ, ಶಿವಲಿಂಗೇಗೌಡ, ಶಿವರಾಜ್ ತಂಗಡಗಿ, ಪುಟ್ಟರಂಗಶೆಟ್ಟಿ, ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಹಲವು ಶಾಸಕರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ದೆಹಲಿಯಿಂದ ಬಂದ ಸಚಿವಾಕಾಂಕ್ಷಿಗಳು ಯಾರು ಏನಂದರು?

ಸೋಮವಾರ ಪ್ರಮಾಣವಚನ ನಡೆಯಲಿದೆ ಎಂದು ಶಿವಲಿಂಗೇಗೌಡ ತಿಳಿಸಿದ್ದು, ಭಾನುವಾರ ಸಚಿವರ ಪಟ್ಟಿ ಪ್ರಕಟವಾಗಲಿದೆ ಎಂಬ ಮಾಹಿತಿ ಇದೆ. ತನಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ. ರಾಜ್ಯಪಾಲರು ಶನಿವಾರ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.
Cabinet Expansion: ಸೋಮವಾರ ಹೊಸ ಸಚಿವರ ಪ್ರಮಾಣವಚನ ಅಂದವ್ರೆ ಎಂದ ಶಾಸಕ ಶಿವಲಿಂಗೇಗೌಡ | #TV9D
ಸೋಮವಾರ ಪ್ರಮಾಣವಚನ ಕಾರ್ಯಕ್ರಮ ನಡೆಯುವ ನಿರೀಕ್ಷೆಯಿದ್ದು, ತಮಗೂ ಅವಕಾಶ ಸಿಗಬಹುದು ಎಂಬ ವಿಶ್ವಾಸವಿದೆ ಎಂದು ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ತಮ್ಮ ತಂದೆ ಎನ್.ಎ. ಹ್ಯಾರಿಸ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸುವ ವಿಶ್ವಾಸವಿದೆ ಎಂದು ಮೊಹಮ್ಮದ್ ನಲಪಾಡ್ ಹ್ಯಾರಿಸ್ ಹೇಳಿದ್ದಾರೆ. ಸಿಎಂ ಅವರನ್ನು ಭೇಟಿ ಮಾಡಿ ಮಾತನಾಡಲು ತಾವು ದೆಹಲಿಗೆ ತೆರಳಿದ್ದಾಗಿ ತಿಳಿಸಿರುವ ಅವರು, ಯಾವುದೇ ಲಾಬಿ ಮಾಡಲು ಹೋಗಿರಲಿಲ್ಲ ಎಂದಿದ್ದಾರೆ.

ತಮ್ಮ ಸಮುದಾಯ ಹಾಗೂ ಕ್ಷೇತ್ರದ ಜನರು ಸಚಿವ ಸ್ಥಾನಕ್ಕೆ ಒತ್ತಾಯಿಸಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಸೋಮವಾರ ಒಳ್ಳೆಯ ಸುದ್ದಿ ಸಿಗುವ ನಿರೀಕ್ಷೆಯಲ್ಲಿದ್ದೇವೆ. ಸಚಿವ ಸ್ಥಾನ ಸಿಗುವ ವಿಶ್ವಾಸದಿಂದಲೇ ದೆಹಲಿಗೆ ತೆರಳಿ ವಾಪಸ್ ಬಂದಿರುವುದಾಗಿ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.

ಸೋಮವಾರ ಪ್ರಮಾಣವಚನಕ್ಕೆ ಸಿದ್ಧತೆ?

ಈ ನಡುವೆ, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಲೋಕಭವನಕ್ಕೂ ಈಗಾಗಲೇ ಹಲವು ಬಾರಿ ಮಾಹಿತಿ ನೀಡಲಾಗಿತ್ತು. ಆದರೆ ದಿನಾಂಕ ಮುಂದೂಡಿಕೆಯಾಗುತ್ತಲೇ ಬಂದಿತ್ತು. ಇದೀಗ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸೋಮವಾರ ಪ್ರಮಾಣವಚನ ನಡೆಯುವ ನಿರೀಕ್ಷೆ ಮತ್ತೆ ಗರಿಗೆದರಿದೆ.

ಇದನ್ನೂ ಓದಿ: ಸಭೆ ಬಳಿಕ ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು

ಒಟ್ಟಿನಲ್ಲಿ, ಕಾವೇರಿ ನೀರು ವಿವಾದದ ನಡುವೆಯೇ ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ದಿನಗಳಿಂದ ಕಗ್ಗಂಟಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಮಟ್ಟದಲ್ಲಿ ಒಪ್ಪಿಗೆ ದೊರೆತಿದ್ದು, ಅಂತಿಮ ಪಟ್ಟಿಯಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬ ಕುತೂಹಲ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:09 am, Fri, 31 July 26

Loading...
Unable to load recommendations.
Follow Us