ಡಿಕೆ ಶಿವಕುಮಾರ್ ಸಂಪುಟದ ಸಚಿವರ ಪಟ್ಟಿ ಫೈನಲ್: ಅಳೆದು ತೂಗಿ ಲಿಸ್ಟ್ ಅಂತಿಮಗೊಳಿಸಿದ ರಾಹುಲ್ ಗಾಂಧಿ
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತ ತಲುಪಿರುವ ಲಕ್ಷಣಗಳು ಕಂಡುಬಂದಿವೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಡಿಕೆಶಿ, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಸಚಿವರ ಪಟ್ಟಿ ಅಂತಿಮಗೊಳಿಸಿದ್ದಾರೆ ಎಂಬುದು ತಿಳಿದುಬಂದಿದೆ.

ಮುಖ್ಯಾಂಶಗಳು
- ರಾಹುಲ್ ಜತೆ ರಾಜ್ಯ ನಾಯಕರ ಪ್ರತ್ಯೇಕ ಸಭೆ
- 20 ಸಚಿವ ಸ್ಥಾನಗಳಿಗೆ ತೀವ್ರ ಪೈಪೋಟಿ
- ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಸಾಧ್ಯತೆ
ನವದೆಹಲಿ, ಜುಲೈ 17: ಮೊದಲ ಹಂತದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರೊಂದಿಗೆ 13 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, ಒಂದೂವರೆ ತಿಂಗಳು ಕಳೆದರೂ ಸಚಿವ ಸಂಪುಟ ವಿಸ್ತರಣೆ (Cabinet Expansion) ಆಗದಿರುವುದು ಕಾಂಗ್ರೆಸ್ (Congress) ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿತ್ತು. ಖಾಲಿ ಇರುವ 20 ಸಚಿವ ಸ್ಥಾನಗಳಿಗೆ 50ಕ್ಕೂ ಹೆಚ್ಚು ಶಾಸಕರು ಮತ್ತು ನಾಯಕರು ಆಕಾಂಕ್ಷಿಗಳಾಗಿದ್ದು, ಅಂತಿಮ ತೀರ್ಮಾನಕ್ಕಾಗಿ ದೆಹಲಿಯಲ್ಲಿ ಸರಣಿ ಸಭೆಗಳು ನಡೆದಿವೆ. ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ಗುರುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಮೊದಲಿಗೆ ಸಿದ್ದರಾಮಯ್ಯ, ಬಳಿಕ ಡಿ.ಕೆ. ಶಿವಕುಮಾರ್ ಹಾಗೂ ಅಂತಿಮವಾಗಿ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಸಭೆ ನಡೆಸಿ ಸಚಿವ ಸಂಪುಟ ವಿಸ್ತರಣೆ ಕುರಿತು ಸಮಾಲೋಚನೆ ನಡೆಸಿದ್ದು, ತಮ್ಮದೇ ಆದ ಪಟ್ಟಿ ಸಿದ್ಧಪಡಿಸಿದ್ದಾರೆ ಎಂಬುದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರತ್ಯೇಕ ಸಚಿವರ ಪಟ್ಟಿಯನ್ನು ರಾಹುಲ್ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ಧಪಡಿಸಿದ್ದ ಮತ್ತೊಂದು ಪಟ್ಟಿಯನ್ನೂ ಪರಿಶೀಲಿಸಿ, ವಿವಿಧ ಅಂಶಗಳನ್ನು ಪರಿಗಣಿಸಿ ಅಂತಿಮ ರೂಪುರೇಷೆ ಸಿದ್ಧಪಡಿಸಲಾಗಿದೆ ಎನ್ನಲಾಗಿದೆ. ಇದೇ ಸಭೆಯಲ್ಲಿ ಖಾಲಿ ಇರುವ ವಿಧಾನಸಭೆ ಸ್ಪೀಕರ್ ಹುದ್ದೆ ಭರ್ತಿ ಕುರಿತೂ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
ಖರ್ಗೆ ಜತೆ ಚರ್ಚೆಯ ಬಳಿಕ ಅಂತಿಮ ನಿರ್ಧಾರ ಸಾಧ್ಯ
ದೆಹಲಿಯಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೂ ರಾಜ್ಯ ನಾಯಕರು ಸಭೆ ನಡೆಸುವ ಸಾಧ್ಯತೆ ಇತ್ತು. ಆದರೆ, ಅವರು ತುರ್ತಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಕಾರಣ ಆ ಸಭೆ ನಡೆಯಲಿಲ್ಲ. ಇದೀಗ ರಾಹುಲ್ ಗಾಂಧಿ ಪರಿಶೀಲಿಸಿರುವ ಪಟ್ಟಿಯನ್ನು ಖರ್ಗೆ ಅವರೊಂದಿಗೆ ಚರ್ಚಿಸಿದ ಬಳಿಕ ಸಚಿವ ಸಂಪುಟ ವಿಸ್ತರಣೆಯ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಹ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ನಡೆದಿರುವುದನ್ನು ದೃಢಪಡಿಸಿದ್ದು, ಅಂತಿಮ ನಿರ್ಧಾರವನ್ನು ಪಕ್ಷದ ವರಿಷ್ಠರು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ, ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ. ಆಗಸ್ಟ್ 6ರಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಕ್ರಿಯೆ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ. 20 ಸಚಿವ ಸ್ಥಾನಗಳು ಹಾಗೂ ಸ್ಪೀಕರ್ ಹುದ್ದೆ ಕುರಿತು ಚರ್ಚೆಗಳು ನಡೆಯುತ್ತಿದ್ದು, ಸೂಕ್ತ ಸಮಯದಲ್ಲಿ ಅಂತಿಮ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಯುವ ಮುಖಗಳು ಮತ್ತು ಮಹಿಳಾ ಪ್ರತಿನಿಧಿತ್ವಕ್ಕೆ ಒತ್ತು?
ಸಂಪುಟ ವಿಸ್ತರಣೆಯಲ್ಲಿ ಯುವ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜೊತೆಗೆ ಪ್ರಸ್ತುತ ಸಚಿವ ಸಂಪುಟದಲ್ಲಿ ಮಹಿಳಾ ಸದಸ್ಯರಿಲ್ಲದ ಹಿನ್ನೆಲೆಯಲ್ಲಿ ಕನಿಷ್ಠ ಒಬ್ಬ ಮಹಿಳಾ ಸಚಿವೆಯನ್ನು ಸೇರಿಸುವ ಸಾಧ್ಯತೆಯೂ ಚರ್ಚೆಯಲ್ಲಿದೆ. ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಟಿ.ಬಿ. ಜಯಚಂದ್ರ, ಲಕ್ಷ್ಮಣ ಸವದಿ, ಕಾಶಪ್ಪನವರ್ ಸೇರಿದಂತೆ ಹಲವು ನಾಯಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಪ್ರಾದೇಶಿಕ ಸಮತೋಲನ ಕಾಪಾಡುವ ಉದ್ದೇಶದಿಂದ ವಿವಿಧ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಬೇಕೆಂಬ ಒತ್ತಾಯವೂ ಕೇಳಿಬಂದಿದೆ.
ಇದನ್ನೂ ಓದಿ: ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸದ್ಯ ರಾಹುಲ್ ಗಾಂಧಿ ಅವರೊಂದಿಗೆ ನಡೆದ ಸಭೆಗಳ ಬಳಿಕ ಸಚಿವರ ಪಟ್ಟಿಗೆ ಅಂತಿಮ ರೂಪ ಸಿಕ್ಕಿದೆಯೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮನೆ ಮಾಡಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬಣದ ನಾಯಕರಲ್ಲಿ ಯಾರಿಗೆ ಹೆಚ್ಚು ಅವಕಾಶ ದೊರೆಯಲಿದೆ ಎಂಬುದು ಸಂಪುಟ ವಿಸ್ತರಣೆಯ ಘೋಷಣೆಯ ಬಳಿಕ ಸ್ಪಷ್ಟವಾಗಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




