ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭಾ ಆಫರ್ ನೀಡಿದ್ದ ರಾಹುಲ್ ಗಾಂಧಿ: ಬೇಡವೆಂದಿದ್ದ ಮಾಜಿ ಸಿಎಂ ಇಟ್ಟಿದ್ದು ಬೇರೆಯೇ ಬೇಡಿಕೆ!

ಸಚಿವ ಸಂಪುಟ ರಚನೆ ಹಾಗೂ ಡಿಸಿಎಂ ಹುದ್ದೆಗಳ ಸೃಷ್ಟಿಯ ಕುರಿತು ಹೈಕಮಾಂಡ್ ಜೊತೆ ಚರ್ಚಿಸಲು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಮತ್ತು ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಮತ್ತೊಂದೆಡೆ, ತಮ್ಮ ಪತ್ನಿಗೆ ರಾಹುಲ್ ಗಾಂಧಿ ನೀಡಿದ್ದ ರಾಜ್ಯಸಭಾ ಸ್ಥಾನದ ಆಫರನ್ನು ಸಿದ್ದರಾಮಯ್ಯ ತಿರಸ್ಕರಿಸಿರುವ ವಿಚಾರ ತಿಳಿದುಬಂದಿದೆ.

ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭಾ ಆಫರ್ ನೀಡಿದ್ದ ರಾಹುಲ್ ಗಾಂಧಿ: ಬೇಡವೆಂದಿದ್ದ ಮಾಜಿ ಸಿಎಂ ಇಟ್ಟಿದ್ದು ಬೇರೆಯೇ ಬೇಡಿಕೆ!
ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ
Image Credit source: tv9
Edited By:

Updated on: Jun 01, 2026 | 9:27 AM

ಬೆಂಗಳೂರು, ಜೂನ್ 1: ರಾಜ್ಯದಲ್ಲಿ ಸಿಎಂ ಹುದ್ದೆ ಬದಲಾವಣೆಯ ಜತೆಗೆ ಸಂಪುಟ ರಚನೆಯ ಕಸರತ್ತು ಅಂತಿಮ ಘಟ್ಟ ತಲುಪಿದೆ. ಸಚಿವ ಸಂಪುಟದಲ್ಲಿ ಯಾರೆಲ್ಲ ಇರಬೇಕು ಎಂಬುದು ಮತ್ತು ಇತರ ಪ್ರಮುಖ ರಾಜಕೀಯ ನಿರ್ಧಾರಗಳ ಕುರಿತು ಚರ್ಚಿಸಲು ನಿರ್ಗಮಿತ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ (DK Shivakumar) ಇಂದು (ಜೂನ್ 1) ದೆಹಲಿಗೆ ತೆರಳುತ್ತಿದ್ದಾರೆ. ಸಂಭಾವ್ಯ ಸಚಿವರ ಪಟ್ಟಿ ಅಂತಿಮಗೊಳಿಸಲು ಹೈಕಮಾಂಡ್ ನಾಯಕರೊಂದಿಗೆ ಈ ಭೇಟಿ ನಿಗದಿಯಾಗಿದೆ. ಇದೇ ವೇಳೆ, ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣ ಪ್ರವೇಶಿಸಲು ನಿರಾಕರಿಸಿದ ನಂತರ ಅವರ ಪತ್ನಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಸಭಾ ಸ್ಥಾನದ ಆಫರ್ ನೀಡಿದ್ದರು ಎಂಬ ಅಚ್ಚರಿಯ ವಿಚಾರ ಈಗ ತಿಳಿದುಬಂದಿದೆ.

ಮುಖ್ಯಾಂಶಗಳು

  • ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ರಾಜ್ಯಸಭಾ ಸ್ಥಾನದ ಆಫರ್ ನೀಡಿದ್ದ ರಾಹುಲ್ ಗಾಂಧಿ.
  • ಪತ್ನಿಗೆ ರಾಜ್ಯಸಭಾ ಆಫರ್ ಅನ್ನು ಗೌರವಯುತವಾಗಿ ತಿರಸ್ಕರಿಸಿದ ಸಿದ್ದರಾಮಯ್ಯ.
  • ಜಾತಿ ಸಮೀಕರಣದ ಆಧಾರದ ಮೇಲೆ ಕನಿಷ್ಠ 3 ಡಿಸಿಎಂ ಹುದ್ದೆ ನೀಡುವಂತೆ ಹೈಕಮಾಂಡ್ ಮೇಲೆ ಒತ್ತಡ.

ರಾಹುಲ್ ಗಾಂಧಿ ಆಫರ್ ತಿರಸ್ಕರಿಸಿದ ಸಿದ್ದರಾಮಯ್ಯ

ರಾಷ್ಟ್ರ ರಾಜಕಾರಣಕ್ಕೆ ಆಗಮಿಸುವಂತೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿ ತೀವ್ರ ಒತ್ತಡ ಹೇರಿದ್ದರು. ಒಂದು ವೇಳೆ ಸಿದ್ದರಾಮಯ್ಯಗೆ ದೆಹಲಿ ರಾಜಕಾರಣಕ್ಕೆ ಬರಲು ಸಾಧ್ಯವಾಗದಿದ್ದರೆ, ಅವರ ಪತ್ನಿಯನ್ನು ರಾಜ್ಯಸಭೆಗೆ ಕಳುಹಿಸಿಕೊಡುವಂತೆ ಗೌರವಯುತ ಆಫರ್ ನೀಡಿದ್ದರು. ಆದರೆ, ಇದನ್ನು ನಯವಾಗಿಯೇ ನಿರಾಕರಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ‘ನಾನು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ. ನನ್ನ ಪತ್ನಿ ಎಂದಿಗೂ ರಾಜಕೀಯದಲ್ಲಿ ಇಲ್ಲ, ಆಕೆ ಹೊರಜಗತ್ತಿಗೂ ಬಂದಿಲ್ಲ. ಹೀಗಾಗಿ ಆಕೆ ರಾಜ್ಯಸಭೆ ಪ್ರವೇಶಿಸುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ತಮಗೆ ನೀಡಿದ್ದ ಆ ಸ್ಥಾನವನ್ನು ಹಿಂದುಳಿದ ಸಮುದಾಯದ ಯೋಗ್ಯ ನಾಯಕರಿಗೆ ನೀಡುವಂತೆ ರಾಹುಲ್ ಗಾಂಧಿ ಬಳಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಜೊತೆಗೆ ಪುತ್ರ ಯತೀಂದ್ರಗೆ ಡಿಸಿಎಂ ಪಟ್ಟವನ್ನು ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

ಮೂವರಿಗೆ ಡಿಸಿಎಂ ಪಟ್ಟ ನೀಡಲು ಸಿದ್ದು ಬಣದ ಬ್ಯಾಟಿಂಗ್

ಇನ್ನೊಂದೆಡೆ, ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ಸಿದ್ದರಾಮಯ್ಯ ತೀವ್ರ ಒತ್ತಡ ಹೇರುವ ಸಾಧ್ಯತೆ ದಟ್ಟವಾಗಿದೆ. ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಸಭೆಯ ತೀರ್ಮಾನದಂತೆ, ಜಾತಿ ಸಮೀಕರಣವನ್ನು ಸರಿದೂಗಿಸಲು ಕನಿಷ್ಠ ಮೂವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂಬುದು ಅವರ ವಾದವಾಗಿದೆ. ಪ್ರಮುಖವಾಗಿ 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಹಾಗೂ ಮುಖ್ಯಮಂತ್ರಿ ರೇಸ್‌ನಲ್ಲಿದ್ದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್, ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಎಂ.ಬಿ. ಪಾಟೀಲ್ ಹಾಗೂ ಅಲ್ಪಸಂಖ್ಯಾತ ಸಮುದಾಯದ ಜಮೀರ್ ಅಹಮದ್ ಖಾನ್ ಅವರಿಗೆ ಡಿಸಿಎಂ ಪಟ್ಟ ನೀಡಲು ಸಿದ್ದರಾಮಯ್ಯ ಹೈಕಮಾಂಡ್ ಮಟ್ಟದಲ್ಲಿ ಬ್ಯಾಟಿಂಗ್ ನಡೆಸಲಿದ್ದಾರೆ.

ದೆಹಲಿಯಲ್ಲಿ ಹೈಕಮಾಂಡ್ ಫಿಲ್ಟರ್: ಸಚಿವಾಕಾಂಕ್ಷಿಗಳಲ್ಲಿ ನಡುಕ

ಸಂಪುಟ ರಚನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಈಗಾಗಲೇ ತಮ್ಮ ಬಣದ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದು, ಅದನ್ನು ಹೈಕಮಾಂಡ್ ನಾಯಕರಿಗೆ ಹಸ್ತಾಂತರಿಸಲಿದ್ದಾರೆ. ಸಿದ್ದರಾಮಯ್ಯ ಬಣದಿಂದ ಎ.ಎಸ್. ಪೊನ್ನಣ್ಣ, ಶಿವರಾಜ್ ತಂಗಡಗಿ, ಪುಟ್ಟರಂಗಶೆಟ್ಟಿ, ಕೆ. ವೆಂಕಟೇಶ್, ಬಸವರಾಜ್ ರಾಯರೆಡ್ಡಿ, ಬಿ.ಕೆ. ಹರಿಪ್ರಸಾದ್, ಸಂತೋಷ್ ಲಾಡ್, ಎಚ್.ಸಿ. ಮಹದೇವಪ್ಪ ಹಾಗೂ ಜಮೀರ್ ಅಹಮದ್ ಖಾನ್ ಪ್ರಮುಖ ಸಚಿವಾಕಾಂಕ್ಷಿಗಳಾಗಿದ್ದಾರೆ. ಈಗಾಗಲೇ ಹತ್ತಾರು ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಹೈಕಮಾಂಡ್ ಜಿಲ್ಲಾವಾರು ಮತ್ತು ಸಮುದಾಯವಾರು ಪ್ರಾತಿನಿಧ್ಯವನ್ನು ಗಮನದಲ್ಲಿಟ್ಟುಕೊಂಡು ಲಿಸ್ಟ್ ಫಿಲ್ಟರ್ ಮಾಡಲಿದೆ.

ಹೈಕಮಾಂಡ್ ಅಂಗಳದಲ್ಲಿ ಚರ್ಚೆಯಾಗಲಿರುವ ಪ್ರಮುಖ 8 ವಿಷಯಗಳು

  1. ಮೊದಲ ಪಟ್ಟಿಯ ಸಚಿವರ ಆಯ್ಕೆ ಮತ್ತು ಪ್ರಮಾಣ ವಚನದ ಬಗ್ಗೆ.
  2. ಹಳೆಯ ಸಚಿವರಲ್ಲಿ ಯಾರನ್ನು ಮುಂದುವರಿಸಬೇಕು? ಯಾರನ್ನು ಕೈಬಿಡಬೇಕು?
  3. ಹಾಲಿ ಸಚಿವ ಸಂಪುಟದ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ವಿಚಾರ.
  4. ರಾಜ್ಯಕ್ಕೆ ಹೆಚ್ಚುವರಿ ಡಿಸಿಎಂ ಹುದ್ದೆಗಳು ಬೇಕಾ ಅಥವಾ ಬೇಡವಾ?
  5. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯಾದರೆ ಯಾವ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಬೇಕು?
  6. ಸರ್ಕಾರದ ಸುಗಮ ನಡಿಗೆಗೆ ಸಮನ್ವಯ ಸಮಿತಿ ಅಥವಾ ಕೋರ್ ಕಮಿಟಿ ಮಾದರಿ ರಚನೆ.
  7. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ರಾಜಕೀಯ ಸ್ಥಾನಮಾನದ ನಿರ್ಧಾರ.
  8. ಮುಂಬರುವ ರಾಜ್ಯಸಭಾ ಚುನಾವಣೆ ಪ್ರಕ್ರಿಯೆ ಮತ್ತು ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us