
ಬೆಂಗಳೂರು, ಜೂನ್ 3: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಇಂದು ಅಧಿಕಾರ ವಹಿಸಿಕೊಳ್ಳುತ್ತಿದ್ದು, ಅವರ ಸಂಪುಟ ಸೇರಲಿರುವ ಸಂಭಾವ್ಯ ಸಚಿವರ ಕೊನೆ ಹಂತದ ಫೈನಲ್ ಲಿಸ್ಟ್ ‘ಟಿವಿ9’ಗೆ ಲಭ್ಯವಾಗಿದೆ. ಇಂದು ಮುಖ್ಯಮಂತ್ರಿಗಳ ಜೊತೆಗೆ ಒಟ್ಟು 14 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ಮಾಡುವ ಸಾಧ್ಯತೆಯಿದೆ. ದೆಹಲಿಯಲ್ಲಿ ನಡೆದ ಹಲವು ದಿನಗಳ ಮ್ಯಾರಥಾನ್ ಸಭೆಗಳ ಬಳಿಕ ಹೈಕಮಾಂಡ್ ಈ ಪಟ್ಟಿಯನ್ನು ಸಿದ್ಧಪಡಿಸಿದ್ದು, ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ವರಿಷ್ಠರು ನೂತನ ಸಚಿವರ ಅಧಿಕೃತ ಪಟ್ಟಿ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.
ಕೊನೆ ಹಂತದ ಲೆಕ್ಕಾಚಾರಗಳ ಪ್ರಕಾರ ಸಂಪುಟ ಸೇರಲಿರುವ ಆ 14 ಸಂಭಾವ್ಯ ನಾಯಕರ ಪಟ್ಟಿ ಹೀಗಿದೆ;
ಡಾ. ಜಿ. ಪರಮೇಶ್ವರ್, ಯತೀಂದ್ರ ಸಿದ್ದರಾಮಯ್ಯ, ಕೆ.ಎಚ್. ಮುನಿಯಪ್ಪ ಅಥವಾ ರೂಪಕಲಾ ಶಶಿಧರ್, ಯು.ಟಿ. ಖಾದರ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ರಾಮಲಿಂಗ ರೆಡ್ಡಿ, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಎಚ್.ಕೆ. ಪಾಟೀಲ್ ಅಥವಾ ಈಶ್ವರ್ ಖಂಡ್ರೆ ಹಾಗೂ ಎನ್. ಚಲುವರಾಯಸ್ವಾಮಿ. ಎಲ್ಲ ಸಮೀಕರಣಗಳನ್ನು ಪರಿಶೀಲಿಸಿಯೇ ವರಿಷ್ಠರು ಈ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಐಎಬಿ (KIA) ವಿಮಾನ ನಿಲ್ದಾಣದಲ್ಲಿ ಮಾಜಿ ಸಚಿವ ಎಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಈ ಬಾರಿಯ ಸಂಪುಟದಲ್ಲಿ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಮಾತ್ರ ಉಪಮುಖ್ಯಮಂತ್ರಿ (DCM) ಸ್ಥಾನ ನೀಡಲು ಹೈಕಮಾಂಡ್ ತೀರ್ಮಾನಿಸಿದೆ. ಸಮುದಾಯಗಳ ಒತ್ತಡವಿದ್ದರೂ ಹೆಚ್ಚುವರಿ ಡಿಸಿಎಂ ಸ್ಥಾನಗಳನ್ನು ಸೃಷ್ಟಿಸಲು ವರಿಷ್ಠರು ಒಪ್ಪಿಲ್ಲ ಎನ್ನಲಾಗಿದೆ.
ಮತ್ತೊಂದೆಡೆ, ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ತಮಗೆ ಬೇಕೆಂದು ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಹೈಕಮಾಂಡ್ ಮೇಲೆ ಭಾರಿ ಒತ್ತಡ ಹೇರಿದ್ದಾರೆ. ಇದೇ ಕಾರಣಕ್ಕೆ ಅವರು ಎರಡು ದಿನಗಳ ಕಾಲ ದೆಹಲಿಯಲ್ಲೇ ಬೀಡುಬಿಟ್ಟಿದ್ದರು. ಆದರೆ, ಸತೀಶ್ ಅವರಿಗೆ ಎರಡು ಹುದ್ದೆ ನೀಡಲು ಹಿಂಜರಿಯುತ್ತಿರುವ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಪರಿಗಣಿಸುವ ಸಾಧ್ಯತೆಯಿದೆ.
ಇದನ್ನೂ ಓದಿ: ಡಿಕೆ ಶಿವಕುಮಾರ್ ಪ್ರಮಾಣವಚನ: ಖಾಕಿ ಭದ್ರಕೋಟೆಯಾದ ಲೋಕಭವನ! 2000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ
ಸತೀಶ್ ಜಾರಕಿಹೊಳಿ ಅವರ ಪಟ್ಟು ಸಡಿಲವಾಗದಿದ್ದರೆ ಹಿಂದುಳಿದ ವರ್ಗದ ಮತ್ತೊಬ್ಬ ಪರ್ಯಾಯ ನಾಯಕನ ಹುಡುಕಾಟದಲ್ಲೂ ದೆಹಲಿ ವರಿಷ್ಠರಿದ್ದಾರೆ ಎನ್ನಲಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ