ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು: ವರಿಷ್ಠರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿ!

ಕರ್ನಾಟಕ ಸಚಿವ ಸಂಪುಟ ರಚನೆ ಕಾಂಗ್ರೆಸ್‌ ಹೈಕಮಾಂಡ್​​ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿಗಳನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದು, ದೆಹಲಿಯಲ್ಲಿ ಮ್ಯಾರಥಾನ್ ಸಭೆಗಳು ನಡೆದಿವೆ. ಜಾತಿ ಸಮೀಕರಣ, ಹಿರಿಯರಿಗೆ ಹಾಗೂ ಹೊಸಬರಿಗೆ ಅವಕಾಶ ಕಲ್ಪಿಸುವ ಬಗ್ಗೆ ಹೈಕಮಾಂಡ್ ತೀವ್ರ ಚಿಂತನೆ ನಡೆಸಿದೆ. ಮೊದಲ ಹಂತದ ಪಟ್ಟಿ ಇಂದೇ ಅಂತಿಮವಾಗುವ ಸಾಧ್ಯತೆ ಇದೆ.

ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು: ವರಿಷ್ಠರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿ!
ವರಿಷ್ಠರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿ!
Image Credit source: tv9
Edited By:

Updated on: Jun 02, 2026 | 11:56 AM

ನವದೆಹಲಿ, ಜೂನ್ 2: ಕರ್ನಾಟಕದಲ್ಲಿ ಅಧಿಕಾರ ಹಂಚಿಕೆಯನ್ನು ಯಶಸ್ವಿಯಾಗಿ ನೆರವೇರುವಂತೆ ಮಾಡಿದರೂ ಇದೀಗ ಸಚಿವ ಸಂಪುಟ ರಚನೆ ಕಾಂಗ್ರೆಸ್ (Congress) ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗ ಮಂತ್ರಿ ಮಂಡಲಕ್ಕೆ ಯಾರನ್ನು ಸೇರಿಸಬೇಕು, ಯಾರನ್ನು ಬಿಡಬೇಕು ಎಂಬುದು ಹೈಕಮಾಂಡ್​ಗೆ ಪ್ರಮುಖ ತಲೆನೋವಾಗಿದೆ. ಈ ಕುರಿತು ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಮ್ಯಾರಥಾನ್ ಸಭೆಗಳು ನಡೆಯುತ್ತಿದ್ದು, ನಿರ್ಧಾರ ಅಂತಿಮಗೊಳಿಸಲು ವರಿಷ್ಠರು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಏತನ್ಮಧ್ಯೆ, ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ಪ್ರತ್ಯೇಕ ಪಟ್ಟಿಗಳನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಸಿದ್ದಾರೆ ಎಂಬುದು ತಿಳಿದುಬಂದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲ ಈ ಪಟ್ಟಿಗಳನ್ನು ಪರಿಶೀಲಿಸಿ, ನಾಯಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದ್ದಾರೆ. ಸಣ್ಣದೊಂದು ಎಡವಟ್ಟಾದರೂ ಪಕ್ಷಕ್ಕೆ ಸಮಸ್ಯೆಯಾಗಬಹುದು ಎಂಬ ಆತಂಕ ವರಿಷ್ಠರಲ್ಲಿದೆ.

ಮುಖ್ಯಾಂಶಗಳು

  • ಸಚಿವರ ಪಟ್ಟಿ ಅಂತಿಮಗೊಳಿಸಲು ದೆಹಲಿಯಲ್ಲಿ ಸರಣಿ ಸಭೆಗಳು.
  • ಸುಗಮ ಅಧಿಕಾರ ಹಂಚಿಕೆಯ ನಂತರ ಹೈಕಮಾಂಡ್ ಎದುರು ಮತ್ತೊಂದು ಸವಾಲು.
  • ಸಚಿವರ ಪಟ್ಟಿ ಬಹುತೇಕ ಇಂದೇ ಫೈನಲ್, ನಾಳೆ ಲೋಕಭವನಕ್ಕೆ ರವಾನೆ.

ದೆಹಲಿಯಲ್ಲಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರನ್ನೂ ಕೆಸಿ ವೇಣುಗೋಪಾಲ್ ನಿವಾಸಕ್ಕೆ ಕರೆಸಿಕೊಂಡು ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ಮೊದಲ ಹಂತದ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬೀಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಸಂಭಾವ್ಯ ಸಚಿವರ ಪಟ್ಟಿ ಮತ್ತು ಜಾತಿ ಸಮೀಕರಣ

ಸಂಭಾವ್ಯ ಸಚಿವರ ಪಟ್ಟಿಯ ಪ್ರಕಾರ, ಹತ್ತರಿಂದ ಹನ್ನೆರಡು ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಹೈಕಮಾಂಡ್ ಕೈ ಸೇರಿರುವ ಸಂಭಾವ್ಯ ಪಟ್ಟಿಯಲ್ಲಿ ಕೆಲವು ಪ್ರಮುಖ ಹೆಸರುಗಳು ಇಲ್ಲಿವೆ;

  • ಸತೀಶ್ ಜಾರಕಿಹೊಳಿ: ಬೆಳಗಾವಿ ಭಾಗದ ಪ್ರಭಾವಿ ನಾಯಕ ಹಾಗೂ ಹಿಂದುಳಿದ ವರ್ಗದ ಮುಖಂಡ.
  • ಡಾ. ಜಿ. ಪರಮೇಶ್ವರ: ಕೆಪಿಸಿಸಿ ಅಧ್ಯಕ್ಷರಾಗಿ ಎರಡು ಬಾರಿ ಸೇವೆ ಸಲ್ಲಿಸಿದ ಹಿರಿಯ ದಲಿತ ನಾಯಕ.
  • ಯು.ಟಿ. ಖಾದರ್: ಮಾಜಿ ಸ್ಪೀಕರ್ ಆಗಿ ಉತ್ತಮ ಕೆಲಸ ಮಾಡಿದವರು, ಮಾಜಿ ಸಚಿವರು.
  • ಪ್ರಿಯಾಂಕ್ ಖರ್ಗೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ.
  • ರಾಮಲಿಂಗ ರೆಡ್ಡಿ: ಬೆಂಗಳೂರಿನ ಹಿರಿಯ ನಾಯಕ.
  • ಎಂ.ಬಿ. ಪಾಟೀಲ್: ಲಿಂಗಾಯತ ಸಮುದಾಯದ ಪ್ರಮುಖ ನಾಯಕ.
  • ಕೃಷ್ಣ ಭೈರೇಗೌಡ: ಕಂದಾಯ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
  • ಕೆ.ಜೆ. ಜಾರ್ಜ್: ಕಾಂಗ್ರೆಸ್‌ನ ಹಿರಿಯ ಸಚಿವರು, ಹೈಕಮಾಂಡ್‌ನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
  • ಈಶ್ವರ್ ಖಂಡ್ರೆ: ಲಿಂಗಾಯತ ಸಮುದಾಯದ ಮತ್ತೊಬ್ಬ ಪ್ರಮುಖ ನಾಯಕ.
  • ಜಮೀರ್ ಅಹಮದ್ ಖಾನ್: ಮುಸ್ಲಿಂ ಸಮುದಾಯದ ಕೋಟಾದಿಂದ ಪ್ರಮುಖ ಹೆಸರು.

ಸಚಿವ ಸಂಪುಟ ರಚನೆಯಲ್ಲಿ ಜಾತಿ ಸಮೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಎಸ್ಸಿ, ಎಸ್ಟಿ, ಒಕ್ಕಲಿಗ, ಲಿಂಗಾಯತ, ಅಲ್ಪಸಂಖ್ಯಾತರು (ಮುಸ್ಲಿಂ ಸೇರಿದಂತೆ) ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೀಡಿರುವ ಪ್ರತ್ಯೇಕ ಪಟ್ಟಿಗಳಲ್ಲಿ ಕೆಲ ಸಾಮಾನ್ಯ ಹೆಸರುಗಳು ಇರಬಹುದಾಗಿದ್ದರೂ, ತಮ್ಮ ಬೆಂಬಲಿಗರನ್ನು ಸಂಪುಟದಲ್ಲಿ ಒಳಗೊಳ್ಳುವಂತೆ ನೋಡಿಕೊಳ್ಳಲು ಇಬ್ಬರೂ ಶ್ರಮಿಸುತ್ತಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಸಂಪುಟ ಸೇರಲು ಆಕಾಂಕ್ಷಿಗಳ ಭರ್ಜರಿ ಲಾಬಿ, ದೆಹಲಿ ದಂಡಯಾತ್ರೆ: ಸ್ಪೀಕರ್ ಆಗಲು ನಾಯಕರ ಹಿಂದೇಟು

ಒಟ್ಟಿನಲ್ಲಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಜತೆಗಿನ ಸಭೆಯ ಬಳಿಕ ಅಂತಿಮ ಪಟ್ಟಿ ಸಿದ್ಧವಾಗಲಿದೆ. ಬಂಡಾಯ ಅಥವಾ ಗೊಂದಲಗಳನ್ನು ತಪ್ಪಿಸಲು, ಪಟ್ಟಿಯನ್ನು ನಾಳೆ (ಜೂನ್ 3) ಬೆಳಗ್ಗೆ ಲೋಕಭವನಕ್ಕೆ ರವಾನಿಸುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us