ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ: ರಾಜೀನಾಮೆ ಸಾಧ್ಯತೆ

ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಈ ಬೆಳವಣಿಗೆ ಕಾಂಗ್ರೆಸ್‌ನಲ್ಲಿ ಮತ್ತೆ ಆಂತರಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಅಲ್ಲದೆ, ಎಲ್ಲವನ್ನೂ ಹೈಕಮಾಂಡೇ ನಿರ್ಧರಿಸುತ್ತಿದೆಯೇ ಎಂಬ ಪ್ರಶ್ನೆಯೂ ಕಾಡಿದೆ.

ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ: ರಾಜೀನಾಮೆ ಸಾಧ್ಯತೆ
ರಾಮಲಿಂಗಾ ರೆಡ್ಡಿ ಅಸಮಾಧಾನ
Image Credit source: tv9
Edited By:

Updated on: Jun 05, 2026 | 9:01 AM

ಬೆಂಗಳೂರು, ಜೂನ್ 5: ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತಿಯ ಅಲೆ ಎದ್ದಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಕಾರಣ, ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿದೆ.

ರಾಮಲಿಂಗಾ ರೆಡ್ಡಿಗೆ ಮಾತು ಕೊಟ್ಟಿದ್ದ ಡಿಕೆ ಶಿವಕುಮಾರ್

ರಾಮಲಿಂಗಾ ರೆಡ್ಡಿ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದರು. 2023 ರಲ್ಲಿ ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿದ್ದಾಗ, ರಾಮಲಿಂಗಾ ರೆಡ್ಡಿಗೆ ಸಾರಿಗೆ ಇಲಾಖೆ ನೀಡಿದ ಸಂದರ್ಭದಲ್ಲಿ, ‘ನಾನು ಮುಖ್ಯಮಂತ್ರಿಯಾದಾಗ ಬೆಂಗಳೂರು ನಗರಾಭಿವೃದ್ಧಿ ಖಾತೆ ನನ್ನ ಬಳಿ ಇರುತ್ತದೆ, ಅದನ್ನೇ ನಿಮಗೆ ನೀಡುತ್ತೇನೆ’ ಎಂದು ಭರವಸೆ ನೀಡಿದ್ದರು. ಈ ಭರವಸೆಯನ್ನು ಉಳಿಸಿಕೊಳ್ಳುವಂತೆ ರಾಮಲಿಂಗಾ ರೆಡ್ಡಿ ಈಗ ಡಿಕೆ ಶಿವಕುಮಾರ್ ಬೆನ್ನುಬಿದ್ದಿದ್ದಾರೆ ಎನ್ನಲಾಗಿದೆ.

ಬೆಂಗಳೂರು ನಗರಾಭಿವೃದ್ಧಿ ಖಾತೆಯು ಕೃಷ್ಣ ಬೈರೇಗೌಡರ ಪಾಲಾಗಿದೆ. ಜಲಸಂಪನ್ಮೂಲ ಖಾತೆ ರಾಮಲಿಂಗಾ ರೆಡ್ಡಿ ಅವರಿಗೆ ಲಭಿಸಿದೆ. ರಾಮಲಿಂಗಾ ರೆಡ್ಡಿ ಅವರನ್ನು ಮನವೊಲಿಸಲು ಗುರುವಾರ ಡಿಕೆ ಶಿವಕುಮಾರ್ ಪ್ರಯತ್ನಿಸಿದ್ದರು. ಆದರೆ, ಹೈಕಮಾಂಡ್ ನಾಯಕರಾದ ಸುರ್ಜೆವಾಲಾ ಮತ್ತು ಕೆಸಿ ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿದ ನಂತರವೂ ಹೈಕಮಾಂಡ್‌ನಿಂದ ಅನುಮೋದನೆ ದೊರೆಯದ ಕಾರಣ, ಡಿಕೆ ಶಿವಕುಮಾರ್ ಪ್ರಯತ್ನ ಫಲಕಾರಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಸಂಬಂಧವಿಲ್ಲದ ಖಾತೆ ಬೇಡ: ರಾಮಲಿಂಗಾ ರೆಡ್ಡಿ ಪಟ್ಟು

ಸ್ವಾಭಿಮಾನದ ಪ್ರಶ್ನೆಯನ್ನು ಎತ್ತಿರುವ ರಾಮಲಿಂಗಾ ರೆಡ್ಡಿ, ತಮಗೆ ಸಂಬಂಧವಿಲ್ಲದ ಖಾತೆ ಬೇಡ ಎಂದು ಹೇಳುತ್ತಿದ್ದಾರೆ. ಡಿಕೆ ಶಿವಕುಮಾರ್ ತಮ್ಮ ಮಾತನ್ನು ಉಳಿಸಿಕೊಳ್ಳಬೇಕಿತ್ತು ಎಂಬುದು ಅವರ ವಾದವಾಗಿದೆ. ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ನಡುವೆ ಅಸಮಾಧಾನ ಸ್ಫೋಟಗೊಂಡಿರುವುದು ಗಮನಾರ್ಹ. ಖಾತೆ ಹಂಚಿಕೆಯಲ್ಲಿ ಮುಖ್ಯಮಂತ್ರಿಗಳಿಗೆ ಪೂರ್ಣ ಅಧಿಕಾರವನ್ನು ಹೈಕಮಾಂಡ್ ನೀಡಿಲ್ಲವೇ ಎಂಬ ಪ್ರಶ್ನೆಯೂ ಈಗ ಎದುರಾಗಿದೆ. ಬೆಂಗಳೂರು ನಗರಾಭಿವೃದ್ಧಿ ಯಾರಿಗೆ ನೀಡಬೇಕು ಎಂಬುದನ್ನು ಡಿ ಕೆ ಶಿವಕುಮಾರ್ ನಿರ್ಧರಿಸಲು ಹೈಕಮಾಂಡ್ ಅವಕಾಶ ನೀಡಿಲ್ಲ ಎಂಬ ಅನುಮಾನಗಳು ಮೂಡಿವೆ.

ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆ: ಹಿರಿಯ ನಾಯಕರ ಅಸಮಾಧಾನ

ಸಂಪುಟಕ್ಕೆ ಸೇರ್ಪಡೆಯಾಗದ ಹಲವು ಹಿರಿಯ ನಾಯಕರೂ ಅಸಮಾಧಾನಗೊಂಡಿದ್ದಾರೆ. ದಿನೇಶ್ ಗುಂಡೂರಾವ್ ಅವರಂತಹ ನಾಯಕರು ಸಹ ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗದ ಕಾರಣ ಬೇಸರ ವ್ಯಕ್ತಪಡಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳು ಕಾಂಗ್ರೆಸ್‌ನಲ್ಲಿ ಆಂತರಿಕ ಬಿಕ್ಕಟ್ಟಿಗೆ ಕಾರಣವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ನೂತನ ಸಚಿವರಿಗೆ ಖಾತೆ ಹಂಚಿಕೆ:ಪ್ರಿಯಾಂಕ್​​ ಖರ್ಗೆಗೆ ಗೃಹ, ಇನ್ನುಳಿದ ಯಾರಿಗೆ ಯಾವ ಖಾತೆ?

ಎಲ್ಲವನ್ನು ದೆಹಲಿಯಿಂದಲೇ ನಿಯಂತ್ರಿಸುವ ಹೈಕಮಾಂಡ್ ನಿರ್ಧಾರ ಇಂತಹ ಅಸಮಾಧಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ರಾಮಲಿಂಗಾ ರೆಡ್ಡಿ ಅವರ ಅನುಭವವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಅವರ ನಿರ್ಧಾರ ಕಾಂಗ್ರೆಸ್ ಪಕ್ಷಕ್ಕೆ ದುಬಾರಿಯಾಗಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us