ಸಿಎಂ ಬದಲಾದರೇ ಇಡೀ ಸಂಪುಟವೇ ಬದಲು! ಮಹತ್ವದ ಬದಲಾವಣೆಗೆ ಸಿದ್ಧವಾಗಿದೆ ಪ್ಲಾನ್

ಕರ್ನಾಟಕದಲ್ಲಿ ಸಿಎಂ ಬದಲಾವಣೆಯಾದರೆ ಅದರ ಬೆನ್ನಲ್ಲೇ ಇಡೀ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದ್ದು, ಅಸಮಾಧಾನ ಶಮನಗೊಳಿಸಲು ಸಿಎಂ ಪುತ್ರ ಡಾ. ಯತೀಂದ್ರ ಸೇರಿದಂತೆ ನಾಲ್ವರಿಗೆ ಡಿಸಿಎಂ ಪಟ್ಟ ಹಾಗೂ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ಹೊಸ ಸೂತ್ರ ಸಿದ್ಧಪಡಿಸಿದೆ ಎಂಬುದು ಮೂಲಗಳಿಂತ ತಿಳಿದುಬಂದಿದೆ.

ಸಿಎಂ ಬದಲಾದರೇ ಇಡೀ ಸಂಪುಟವೇ ಬದಲು! ಮಹತ್ವದ ಬದಲಾವಣೆಗೆ ಸಿದ್ಧವಾಗಿದೆ ಪ್ಲಾನ್
ಮುಖ್ಯಮಂತ್ರಿ ಬದಲಾದರೇ ಇಡೀ ತಂಡವೇ ಬದಲು!
Image Credit source: tv9
Edited By:

Updated on: May 28, 2026 | 7:18 AM

ಬೆಂಗಳೂರು, ಮೇ 28: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಪ್ರಕ್ರಿಯೆ ಬೆನ್ನಲ್ಲೇ, ರಾಜ್ಯ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಬದಲಾವಣೆಗಳಿಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ ಎಂಬುದು ತಿಳಿದುಬಂದಿದೆ. ಸಾಂವಿಧಾನಿಕ ನಿಯಮಗಳ ಪ್ರಕಾರ, ಮುಖ್ಯಮಂತ್ರಿಯೊಬ್ಬರು ರಾಜೀನಾಮೆ ನೀಡಿದ ತಕ್ಷಣ ಅವರ ಇಡೀ ಸಚಿವ ಸಂಪುಟವು ಸ್ವಯಂಚಾಲಿತವಾಗಿ ರದ್ದಾಗುತ್ತದೆ ಮತ್ತು ಸಚಿವರು ತಮ್ಮ ಸ್ಥಾನಗಳನ್ನು ಕಳೆದುಕೊಳ್ಳುತ್ತಾರೆ. ಹೊಸ ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡ ನಂತರವೇ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಬೇಕಾಗುತ್ತದೆ. ಈ ತಾಂತ್ರಿಕ ಪ್ರಕ್ರಿಯೆಯನ್ನೇ ಬಳಸಿಕೊಂಡು ಕಾಂಗ್ರೆಸ್ ಹೈಕಮಾಂಡ್ ಇಡೀ ತಂಡವನ್ನೇ ಬದಲಾಯಿಸಲು ಮುಂದಾಗಿದ್ದು, ಜಿದ್ದಾಜಿದ್ದಿಗೆ ಬಿದ್ದಿರುವ ಬಣಗಳನ್ನು ಶಾಂತಗೊಳಿಸಲು ಭಾರಿ ಜಾತಿ ಸಮೀಕರಣದ ಹೊಸ ಸೂತ್ರವನ್ನು ಸಿದ್ಧಪಡಿಸಿದೆ ಎನ್ನಲಾಗಿದೆ.

ಮುಖ್ಯಾಂಶಗಳು

  • ಮುಖ್ಯಮಂತ್ರಿ ರಾಜೀನಾಮೆಯಿಂದ ಇಡೀ ಸಚಿವ ಸಂಪುಟ ರದ್ದು.
  • ನೂತನ ಸಿಎಂ ನೇತೃತ್ವದಲ್ಲಿ ಹೊಸ ಟೀಮ್ ರಚನೆಗೆ ಕಸರತ್ತು.
  • ಸಿಎಂ ಪುತ್ರ ಡಾ. ಯತೀಂದ್ರಗೆ ಡಿಸಿಎಂ ಪಟ್ಟ ನೀಡಲು ಹೈಕಮಾಂಡ್ ಒಲವು.

4 ಡಿಸಿಎಂ ಹುದ್ದೆಗಳ ಭಾರಿ ಲೆಕ್ಕಾಚಾರ

ಸಿದ್ದರಾಮಯ್ಯ ರಾಜಕೀಯ ಹಿರಿತನ ಹಾಗೂ ಗೌರವಕ್ಕೆ ಯಾವುದೇ ಧಕ್ಕೆ ಬಾರದಂತೆ ನೋಡಿಕೊಳ್ಳಲು ಹೈಕಮಾಂಡ್ ಹಲವು ಪ್ರಮುಖ ಭರವಸೆಗಳನ್ನು ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೊಸದಾಗಿ ಸೃಷ್ಟಿಸಲು ಉದ್ದೇಶಿಸಿರುವ 4 ಡಿಸಿಎಂ ಹುದ್ದೆಗಳಲ್ಲಿ, ಒಬಿಸಿ (OBC) ಕೋಟಾದ ಅಡಿಯಲ್ಲಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲು ಗಂಭೀರ ಚಿಂತನೆ ನಡೆದಿದೆ. ಇನ್ನುಳಿದಂತೆ ದಲಿತ ಕೋಟಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅಥವಾ ಡಾ. ಜಿ. ಪರಮೇಶ್ವರ್, ಮುಸ್ಲಿಂ ಕೋಟಾದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅಥವಾ ಸ್ಪೀಕರ್ ಯು.ಟಿ. ಖಾದರ್, ಲಿಂಗಾಯತ ಕೋಟಾದಡಿ ಸಚಿವರಾದ ಈಶ್ವರ ಖಂಡ್ರೆ ಅಥವಾ ಎಂ.ಬಿ. ಪಾಟೀಲ್ ಹಾಗೂ ಅಲ್ಪಸಂಖ್ಯಾತ ಕೋಟಾದಲ್ಲಿ ಕೆ.ಜೆ. ಜಾರ್ಜ್ ಅವರ ಹೆಸರುಗಳು ರೇಸ್‌ನಲ್ಲಿವೆ ಎಂದು ಹೇಳಲಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಹೊಸ ಸಂಪುಟ ಕಸರತ್ತು

ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ನಿಶ್ಚಿತವಾಗಿರುವುದರಿಂದ, ಅವರು ಸದ್ಯ ಹೊಂದಿರುವ ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಿಸಬೇಕಾಗುತ್ತದೆ. ಮೊದಲಿನಿಂದಲೂ ಈ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಪಟ್ಟವೂ ಸಿಗುವ ದಟ್ಟ ಸಾಧ್ಯತೆಗಳಿವೆ. ಈ ನಡುವೆ ಶಾಸಕ ವಿಶ್ವಾಸ್ ವಸಂತ್ ವೈದ್ಯ ಅವರು ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದು, ಅವರಿಗೆ ಅಧ್ಯಕ್ಷ ಸ್ಥಾನ ನೀಡಿದರೆ ಪಕ್ಷ ಸಂಘಟನೆಗೆ ಮತ್ತಷ್ಟು ಅನುಕೂಲವಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಮತ್ತೊಂದೆಡೆ, ಸಚಿವರಾದ ಜಮೀರ್ ಅಹ್ಮದ್ ಮತ್ತು ಸತೀಶ್ ಜಾರಕಿಹೊಳಿ ಈಗಾಗಲೇ ಪ್ರತ್ಯೇಕವಾಗಿ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಒಟ್ಟಾರೆ ಹೊಸ ಸಂಪುಟದಲ್ಲಿ ಹಾಲಿ ಕಾರ್ಯಾಧ್ಯಕ್ಷರಿಗೆ ಹಾಗೂ ಹೊಸ ಶಾಸಕರಿಗೆ ಸಚಿವ ಸ್ಥಾನ ಮತ್ತು ನಿಗಮ ಮಂಡಳಿಗಳಲ್ಲಿ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಮುಂದಾಗಿದ್ದು, ಇಂದಿನ ರಾಜಕೀಯ ಬೆಳವಣಿಗೆಗಳ ಮೇಲೆ ಎಲ್ಲವೂ ನಿರ್ಧಾರವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us