ಕರ್ನಾಟಕ ಸಿಇಟಿ ಪರೀಕ್ಷೆ ಮತ್ತು ಜನಿವಾರ ವಿವಾದ: ಈವರೆಗೆ ನಡೆದಿದ್ದೇನು? ಇಲ್ಲಿದೆ ವಿವರ

ಕರ್ನಾಟಕ ಜನಿವಾರ ವಿವಾದ: ವೃತ್ತಿಪರ ಕೋರ್ಸ್‌ಗಳ ಆಯ್ಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಇದಕ್ಕೆ ಕಾರಣ, ಶಿವಮೊಗ್ಗ ಹಾಗೂ ಬೀದರ್​​ನಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದು. ಶಿವಮೊಗ್ಗದಲ್ಲಿ ವಿದ್ಯಾರ್ಥಿಯ ಜನಿವಾರ ತುಂಡರಿಸಿ ಕಸದ ಬುಟ್ಟಿಗೆ ಎಸೆಯಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಬೀದರ್​​​ನಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿಲ್ಲ. ಸದ್ಯ, ರಾಜಕೀಯವಾಗಿಯೂ ಸದ್ದು ಮಾಡಲಾರಂಭಿಸಿದ ‘ಜನಿವಾರ’ ಪ್ರಕರಣದ ಸಮಗ್ರ ಮಾಹಿತಿ ಇಲ್ಲಿದೆ.

ಕರ್ನಾಟಕ ಸಿಇಟಿ ಪರೀಕ್ಷೆ ಮತ್ತು ಜನಿವಾರ ವಿವಾದ: ಈವರೆಗೆ ನಡೆದಿದ್ದೇನು? ಇಲ್ಲಿದೆ ವಿವರ
ತೀರ್ಥಹಳ್ಳಿಯ ಬ್ರಾಹ್ಮಣ ವಿದ್ಯಾರ್ಥಿ ಅಭಿಜ್ಞಾ ಹಾಗೂ ಬೀದರ್​ನ ಸುಚಿವೃತ ಕುಲಕರ್ಣಿ

Updated on: Apr 18, 2025 | 3:12 PM

ಬೆಂಗಳೂರು, ಏಪ್ರಿಲ್ 18: ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ (Brahmin Students) ಜನಿವಾರ ತೆಗೆಸಲಾಗಿದೆ ಎಂದು ಪೋಷಕರು ಆರೋಪಿಸಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಶಿವಮೊಗ್ಗದಲ್ಲಿ ವಿದ್ಯಾರ್ಥಿಯ ಜನಿವಾರ (Sacred Thread/ Janivaraಮತ್ತು ಕೈಗೆ ಕಟ್ಟಿದ್ದ ಕಾಶಿ ದಾರವನ್ನು ತೆಗೆಸಿ ಅಧಿಕಾರಿಗಳು ಕಸದ ಬುಟ್ಟಿಗೆ ಎಸೆದಿದ್ದಾರೆ ಎಂಬ ಆರೋಪ ವ್ಯಕ್ತವಾಗಿದ್ದು, ಬೀದರ್‌ನಲ್ಲಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿಲ್ಲ. ಅಧಿಕಾರಿಗಳ ಈ ಕ್ರಮದ ವಿರುದ್ಧ ಬ್ರಾಹ್ಮಣ ಮಹಾಸಭಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮಹಾಸಭಾದ ಅಧ್ಯಕ್ಷ ಎಸ್​​ ರಘುನಾಥ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ಪ್ರತಿಭಟನೆಗೂ ಕರೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ವೇಳೆ ನಡೆದಿದ್ದೇನು?

ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ತೀರ್ಥಹಳ್ಳಿಯ ಬ್ರಾಹ್ಮಣ ವಿದ್ಯಾರ್ಥಿ ಅಭಿಜ್ಞಾ ಧರಿಸಿದ್ದ ಜನಿವಾರ ಮತ್ತು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿ ದಾರವನ್ನು ತೆಗೆಸಿದ್ದಾರೆ. ಈ ವಿಚಾರ ಕ್ಷಣಮಾತ್ರದಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು ಪರೀಕ್ಷಾ ಸಿಬ್ಬಂದಿಯ ನಡೆಯನ್ನು ಖಂಡಿಸಿದ್ದಾರೆ.

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಷ್ಟೇ ಅಲ್ಲದೆ, ಸಿಬ್ಬಂದಿ ಅದನ್ನು ತುಂಡು ಮಾಡಿ ಕಸದ ಬುಟ್ಟಿಗೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹಿಂದೂ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
ಜನಿವಾರ ತೆಗೆಸಿದ್ದೇ ಆದರೆ ಅತಿರೇಕ, ಕಠಿಣ ಕ್ರಮ ಕೈಗೊಳ್ತೇವೆ: ಸಚಿವ ಸುಧಾಕರ್
CET ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು
ಜಾತಿ ಸಂಖ್ಯೆಯಲ್ಲಿ ಸಾಕಷ್ಟು ವ್ಯತ್ಯಾಸ: ಜಾತಿ ಗಣತಿಯಲ್ಲಿ ಒಳಪಂಗಡ ಗೊಂದಲ
ಮುಸ್ಲಿಮರಲ್ಲಿಯೂ 93 ಉಪಜಾತಿಗಳಿವೆ: ಜಯಪ್ರಕಾಶ್ ಹೆಗ್ಡೆ

ಬೀದರ್​​ನಲ್ಲಿ ಜನಿವಾರ ತೆಗೆಯದ ವಿದ್ಯಾರ್ಥಿ ಪರೀಕ್ಷಾ ಕೇಂದ್ರದಿಂದ ಹೊರಕ್ಕೆ

ಬೀದರ್​​ನಲ್ಲಿ ಸುಚಿವೃತ ಕುಲಕರ್ಣಿ ಎಂಬ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಒಪ್ಪದ ಕಾರಣ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಬೀದರ್​ನ ಮನ್ನಳ್ಳಿ ರಸ್ತೆಯಲ್ಲಿರುವ ಸಾಯಿಸ್ಫೂರ್ತಿ ಕಾಲೇಜಿನಲ್ಲಿ ಗುರುವಾರ ಈ ಘಟನೆ ನಡೆದಿದೆ. ಈ ವಿಚಾರವಾಗಿ ಬಾಲಕನ ತಾಯಿ ನೀತಾ ಕುಲಕರ್ಣಿ ‘ಟಿವಿ9’ ಜತೆ ಮಾತನಾಡಿ, ನನ್ನ ಮಗನ ಭವಿಷ್ಯದ ಜೊತೆಗೆ ಪರೀಕ್ಷಾ ಸಿಬ್ಬಂದಿ ಚೆಲ್ಲಾಟವಾಡಿದ್ದಾರೆ. ನನ್ನ ಮಗ ಸಿಇಟಿ ಬರೆದು ದೊಡ್ಡ ಇಂಜಿನಿಯರ್ ಆಗಬೇಕೆಂದು ಕನಸು ಕಂಡಿದ್ದ. ಆದರೆ ಜನಿವಾರ ತೆಗೆಯದ್ದಕ್ಕೆ ಮಗನಿಗೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿಲ್ಲ. ನನ್ನ ಮಗನನ್ನು ಪರೀಕ್ಷೆ ಪ್ರಾಧಿಕಾರವೇ ಎಂಜಿನಿಯರಿಂಗ್ ಕಾಲೇಜ್​​ಗೆ ಸೇರಿಸಬೇಕು ಎಂದು ಆಗ್ರಹಿಸಿದ್ದಾರೆ.

ಪರೀಕ್ಷೆ ವಂಚಿತ ವಿದ್ಯಾರ್ಥಿ ಹೇಳಿದ್ದೇನು?

ನಾನು ಜನಿವಾರ ಹಾಕಿದ್ದಕ್ಕಾಗಿ ನನಗೆ ಪರೀಕ್ಷೆ ಬರೆಯಲಿಕ್ಕೆ ಅವಕಾಶ ಕೊಟ್ಟಿಲ್ಲ ಎಂದು ಸುಚಿವೃತ ಕುಲಕರ್ಣಿ ಆರೋಪಿಸಿದ್ದಾನೆ. ಜನಿವಾರ ತೆಗೆದರೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕೊಡುವುದಾಗಿ ಹೇಳಿದರು. ಆದರೆ, ನಮ್ಮ ಬ್ರಾಹ್ಮಣ ಸಂಪ್ರದಾಯದಲ್ಲಿ ಜನಿವಾರಕ್ಕೆ ಬಹಳ ಮಹತ್ವ ಇದೆ. ಹೀಗಾಗಿ ‌ನಾನು ಜನಿವಾರ ತೆಗೆಯುವುದಿಲ್ಲ ಎಂದೆ. ಹೀಗಾಗಿ ನನ್ನನ್ನು ಹೊರ ಕಳುಹಿಸಿದರು ಎಂದು ಸುಚಿವೃತ ಕುಲಕರ್ಣಿ ಹೇಳಿದ್ದಾನೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಖಂಡನೆ

ಬೀದರ್ ಹಾಗೂ ಶಿವಮೊಗ್ಗದ ಘಟನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಸರ್ಕಾರ ಈ ಕೂಡಲೇ ಬೇಷರತ್ ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಜನಿವಾರ ತೆಗೆಸಿದ ಕ್ರಮದ ವಿರುದ್ಧ ಹಿಂದೂಗಳು ಒಂದಾಗಿ ಹೋರಾಟ ಮಾಡಬೇಕು ಎಂದು ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಕರೆ ನೀಡಿದ್ದಾರೆ.

ಸರ್ಕಾರ, ಸಚಿವರು ಹೇಳಿದ್ದೇನು?

ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಹೇಳಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡ ಪ್ರತಿಕ್ರಿಯಿಸಿ, ಸಂಬಂಧಪಟ್ಟ ಇಲಾಖೆ ಜತೆ ಚರ್ಚಿಸಿ ಕ್ರಮಕ್ಕೆ ಸೂಚಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದೇ ಆದರೆ ಅತಿರೇಕ, ಕಠಿಣ ಕ್ರಮ ಕೈಗೊಳ್ಳುತ್ತೇವೆ: ಸಚಿವ ಎಂಸಿ ಸುಧಾಕರ್

ರಾಜ್ಯದಾದ್ಯಂತ ಹೋರಾಟಕ್ಕೆ ಬ್ರಾಹ್ಮಣ ಮಹಾಸಭಾ ಕರೆ

ಜನಿವಾರ ತೆಗೆಸಿದ ವಿಚಾರವಾಗಿ ಕರ್ನಾಟಕದಾದ್ಯಂತ ಜಿಲ್ಲಾ ಮಟ್ಟದಲ್ಲಿ ಹೋರಾಟಕ್ಕೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕರೆ ನೀಡಿದೆ. ಈ ವಿಚಾರವಾಗಿ ಬೆಂಗಳುರಿನ ಪ್ರೆಸ್​ಕ್ಲಬ್​ನಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ಪತ್ರಿಕಾಗೋಷ್ಠಿ ಕರೆಯಲಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್ ಮಾಹಿತಿ ನೀಡಿದ್ದಾರೆ.

ಜನಿವಾರ ಅಥವಾ ಯಜ್ಞೋಪವೀತ ಎಂದರೇನು?

ಜನಿವಾರ ಅಥವಾ ಯಜ್ಞೋಪವೀತ ಎಂಬುದು ಬ್ರಾಹ್ಮಣ ಸಮುದಾಯಕ್ಕೆ (ಇತರ ಕೆಲವು ಸಮುದಾಯಗಳೂ ಜನಿವಾರ ಧರಿಸುತ್ತವೆ) ಬಹಳ ಮಹತ್ವದ್ದಾಗಿದೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಉಪನಯನ ಸಂಸ್ಕಾರದ ಸಂದರ್ಭದಲ್ಲಿ ಗಾಯತ್ರಿ ಮಂತ್ರ ದೀಕ್ಷೆಯ ಜತೆಗೆ ಬ್ರಾಹ್ಮಣ ವಟುಗಳಿಗೆ ಧಾರಣೆ ಮಾಡಿಸುವ 3 ಎಳೆಗಳುಳ್ಳ ಪವಿತ್ರ ದಾರವೇ ಜನಿವಾರ. ಯಜ್ಞೋಪವೀತ ಧರಿಸಿದ ನಂತರ ಆತ ಗಾಯತ್ರಿ ಮಂತ್ರ ಉಪಾಸನೆ ಮಾಡಲು, ವೇದಗಳನ್ನು ಕಲಿಯಲು, ಯಜ್ಞ ಮಾಡಲು ಅರ್ಹನಾಗುತ್ತಾನೆ.

ಇದನ್ನೂ ಓದಿ: CET ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು: ಆಕ್ರೋಶ

ಜನಿವಾರ ತೆಗೆಯಬೇಕೆಂದಿಲ್ಲ: ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಸ್ಪಷ್ಟನೆ

ಜನಿವಾರ ತೆಗೆಸಿದ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದು, ಸಿಇಟಿ ಪರೀಕ್ಷೆ ಬರೆಯುವ ವೇಳೆ ಜನಿವಾರ ತೆಗೆಯಬೇಕೆಂದಿಲ್ಲ ಎಂದಿದ್ದಾರೆ. ವಸ್ತ್ರ ಸಂಹಿತೆ ನಿಗದಿಪಡಿಸಲಾಗಿದ್ದು, ಅದನ್ನು ವಿದ್ಯಾರ್ಥಿಗಳು ಪಾಲಿಸಬೇಕು. ಆದರೆ ಜನಿವಾರ ತೆಗೆಸಬೇಕೆಂದು ನಾವು ಸೂಚನೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:14 pm, Fri, 18 April 25

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us