AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಭೇಟಿಯಾದ ಸಿದ್ದರಾಮಯ್ಯ: ಪ್ರಧಾನಿ ಮುಂದೆ ಸಿಎಂ ಇಟ್ಟ ಬೇಡಿಕೆಗಳೇನು..?

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕುಮಾರ್​ ದೆಹಲಿ ಪ್ರವಾಸದಲ್ಲಿದ್ದು, ಪಕ್ಷದ ಕೆಲ ವಿಚಾರಗಳ ಬಗ್ಗೆ ಹೈಕಮಾಂಡ್​ ನಾಯಕರ ಜೊತೆ ಮಹತ್ವದ ಸಭೆ ಮಾಡಿದ್ದಾರೆ. ಇದರ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಅವರ ಮುಂದೆ ಕೆಲ ಬೇಡಿಕೆಗಳನ್ನು ಇಟ್ಟಿದ್ದಾರೆ.

ಮೋದಿ ಭೇಟಿಯಾದ ಸಿದ್ದರಾಮಯ್ಯ: ಪ್ರಧಾನಿ ಮುಂದೆ ಸಿಎಂ ಇಟ್ಟ ಬೇಡಿಕೆಗಳೇನು..?
ಮೋದಿ ಭೇಟಿಯಾದ ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on: Nov 29, 2024 | 4:07 PM

Share

ನವದೆಹಲಿ, (ನವೆಂಬರ್ 29): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು(ನವೆಂಬರ್ 29) ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ, ಉಭಯ ನಾಯಕರು ಕುಶಲೋಪರಿ ವಿಚಾರಿಸಿದರು. ಇನ್ನು ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಪ್ರಮುಖ ವಿಷಯಗಳ ಕುರಿತು ಚರ್ಚಿಸಿ ಅನುದಾನ ಒದಗಿಸುವಂತೆ ಮೋದಿಗೆ ಅವರಿಗೆ ಮನವಿ ಮಾಡಿದ್ದಾರೆ. ಅನುದಾನ, ಕರ್ನಾಟಕದ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಮೋದಿ ಮುಂದೆ ಬೇಡಿಕೆ ಇಟ್ಟಿದ್ದಾರೆ.

ನಬಾರ್ಡ್‌ನ ನೆರವು ಕಡಿತ ಮಾಡಿರುವುದನ್ನು ಸರಿಪಡಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದಂತೆ ಅನುದಾನವನ್ನು ಕೂಡಲೇ ಒದಗಿಸಬೇಕು.ಮಹದಾಯಿ ಸಹಿತ ಕರ್ನಾಟಕದ ನೀರಾವರಿ ಯೋಜನೆಗೆ ಅನುಮತಿ ಕೊಡಿಸಬೇಕು. ಕರ್ನಾಟಕದ ಎಲ್ಲಾ ಮಹಾನಗರಗಳ ಅಭಿವೃದ್ದಿಗೆ ಪೂರಕವಾಗಿ ಅನುದಾನವನ್ನು ಒದಗಿಸಬೇಕೆಂದು ಮೋದಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರಧಾನಿ ಸಹ ಪೂರಕವಾಗಿಯೇ ಸ್ಪಂದಿಸಿದ್ದಾರೆ.

ಇದನ್ನೂ ಓದಿ: ಸದ್ಯಕ್ಕಿಲ್ಲ ಕರ್ನಾಟಕ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಕಾಂಗ್ರೆಸ್ ಹೈಕಮಾಂಡ್ ತಡೆ

ಮೋದಿ ಮುಂದೆ ಸಿದ್ದರಾಮಯ್ಯ ಇಟ್ಟ 4 ಬೇಡಿಕೆಗಳಾವುವು?

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಯಾವೆಲ್ಲಾ ಬೇಡಿಕೆ ಇಡಲಾಗಿದೆ ಎನ್ನುವ ಬಗ್ಗೆ ಹಂಚಿಕೊಂಡಿದ್ದು, ಅವು ಈ ಕೆಳಗಿನಂತಿವೆ.

  1. ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ ಒದಗಿಸಿರುವ ನಬಾರ್ಡ್ ನೆರವು ಕಡಿತಗೊಳಿಸಿರುವುದರಿಂದ ರಾಜ್ಯದ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಿದೆ. 2023-24ರ ಸಾಲಿನಲ್ಲಿ ರೂ.5600 ಕೋಟಿಗಳನ್ನು ಮಂಜೂರು ಮಾಡಲಾಗಿತ್ತು. 2024 -25ರ ಸಾಲಿನಲ್ಲಿ ರೂ. 2,340 ಕೋಟಿಗಳನ್ನು ಮಂಜೂರು ಮಾಡಲಾಗಿದೆ. ಇದರಿಂದಾಗಿ ನಬಾರ್ಡ್ ನೆರವು ಪ್ರಸಕ್ತ ಸಾಲಿನಲ್ಲಿ ಶೇ.58 ರಷ್ಟು ಕಡಿತವಾಗಿದೆ. ರಾಜ್ಯವು ಹೆಚ್ಚುವರಿ ಬಡ್ಡಿ ಸಹಾಯಧನವನ್ನು ನೀಡದ ಹೊರತು, ಇದು ರಾಜ್ಯದ ರೈತಾಪಿ ವರ್ಗದ ಆರ್ಥಿಕ ವೆಚ್ಚದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ, ರಾಜ್ಯದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಈ ಕೂಡಲೇ ಇದನ್ನು ಪರಾಮರ್ಶಿಸಿ ನಬಾರ್ಡ್ ನೆರವು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ರಾಜ್ಯದ ರೈತರು ಅಲ್ಪಾವಧಿ ಬೆಳೆ ಸಾಲಗಳನ್ನು ಪಡೆಯಲು ಯಾವುದೇ ರೀತಿಯ ತೊಂದರೆಯಾಗದಂತೆ ತಾವು ಹಣಕಾಸು ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.
  2. 2. ಈ ಮೊದಲೇ ತಮ್ಮಲ್ಲಿ ಮನವಿ ಮಾಡಿರುವಂತೆ, ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 2023-24 ರ ಕೇಂದ್ರ ಬಜೆಟ್ ನಲ್ಲಿ ಅನುಮೋದನೆಯಾಗಿರುವ ರೂ. 5300 ಕೋಟಿ ಅನುದಾನ ಬಿಡುಗಡೆ ಮಾಡುವ ಕೇಂದ್ರ ಹಣಕಾಸು ಸಚಿವರ ಭರವಸೆ ಈವರೆಗೆ ಈಡೇರಿಲ್ಲ. ತ್ವರಿತ ನೀರಾವರಿ ಲಾಭ ಕಾರ್ಯಕ್ರಮದಡಿ ನೆರವು ಒದಗಿಸಲು ಸಚಿವ ಸಂಪುಟದ ಟಿಪ್ಪಣಿಯನ್ನು ಸಿದ್ದಮಾಡಿರುವ ಬಗ್ಗೆ ತಿಳಿದುಬಂದಿದೆ. ಪ್ರಸಕ್ತ ಯೋಜನೆ ಶೀಘ್ರ ಅನುಮೋದನೆಗೊಂಡಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಒಳಪಡುವ ಮಧ್ಯ ಕರ್ನಾಟಕದ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ. ಆದ್ದರಿಂದ ಈ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡುವಂತೆ ಮೋದಿಗೆ ಮನವಿ ಮಾಡಿದ್ದಾರೆ.
  3.  ಶುಷ್ಕ ವಲಯಕ್ಕೆ ಸೇರಿದ ಕರ್ನಾಟಕದಂತಹ ರಾಜ್ಯದಲ್ಲಿ ನೀರಾವರಿ ಸೌಲಭ್ಯ ಸಾಮರ್ಥ್ಯಗಳನ್ನು ಸಬಲಗೊಳಿಸುವುದು ಅತ್ಯಗತ್ಯವಾಗಿದೆ. ಈ ಕಾರ್ಯವನ್ನು ಬಹುತೇಕ ರಾಜ್ಯವು ತನ್ನ ಸಂಪನ್ಮೂಲಗಳಿಂದಲೇ ಭರಿಸುತ್ತಿದೆ. ಆದರೆ, ಜಲ ಶಕ್ತಿ ಸಚಿವಾಲಯ ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಗಳಲ್ಲಿ ಯೋಜನೆಗಳ ತೀರುವಳಿ ಬಾಕಿ ಇರುವುದು ನಮ್ಮ ಯೋಜನೆಗಳನ್ನು ವಿಳಂಬ ಮಾಡಿದೆ. ಕಾವೇರಿ ನದಿ ಪಾತ್ರದ ಮೇಕೇದಾಟು ಯೋಜನೆ ಹಾಗೂ ಮಹದಾಯಿ ನದಿಯ ಕಳಸಾಬಂಡೂರಿ ಯೋಜನೆಗಳಗತ್ತ ತಾವು ತುರ್ತು ಗಮನ ಹರಿಸಬೇಕಿದೆ ಜಲಶಕ್ತಿ ಹಾಗೂ ಅರಣ್ಯ, ಪರಿಸರ ಸಚಿವಾಲಯಗಳಿಂದ ಶೀಘ್ರ ತೀರುವಳಿ ದೊರಕಿಸಿಕೊಡಲು ಕೋರಿದ್ದಾರೆ.
  4. ಕೊನೆಯದ್ದಾಗಿ, 15ನೇ ಹಣಕಾಸು ಆಯೋಗ ಕರ್ನಾಟಕ ರಾಜ್ಯಕ್ಕೆ ಸರಿಯಾದ ನ್ಯಾಯ ಒದಗಿಸುತ್ತಿಲ್ಲ ಎಂದು ನಾವು ನಿರಂತರವಾಗಿ ಪ್ರಸ್ತಾಪಿಸುತ್ತಾ ಬಂದಿದ್ದೇವೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯದ ಪಾಲನ್ನು ಶೇ.1ರಷ್ಟು ಕಡಿಮೆ ಮಾಡಿರುವ ಶಿಫಾರಸ್ಸನ್ನು ಹಣಕಾಸು ಇಲಾಖೆ ಸರಿಪಡಿಸಬೇಕಾಗಿದೆ. ಹಣಕಾಸು ಆಯೋಗವು ರಾಜ್ಯಕ್ಕೆ ಹಂಚಿಕೆ ಕಡಿಮೆಯಾಗಿರುವುದಕ್ಕೆ ಪರಿಹಾರವಾಗಿ ರೂ.5495 ಕೋಟಿ ಅನುದಾನ ಬಿಡುಗಡೆಗೆ ಮತ್ತು ಪೆರಿಫೆರಲ್ ರಿಂಗ್ ರಸ್ತೆ ಮತ್ತು ನೀರಿನ ಮೂಲಗಳ ಪುನರುಜ್ಜೀವನಕ್ಕೆ ರೂ.6ಸಾವಿರ ಕೋಟಿ ವಿಶೇಷ ಅನುದಾನ ನೀಡುವ ಬಗ್ಗೆ ಶಿಫಾರಸು ಮಾಡಿದೆ. ಕನಿಷ್ಟ ಪಕ್ಷ ಹಣಕಾಸು ಆಯೋಗ ಈ ಎರಡು ಶಿಫಾರಸ್ಸುಗಳನ್ನು ಒಪ್ಪಿಕೊಳ್ಳಬೇಕಾಗಿದೆ.ನಾವು ಇನ್ನೂ 15ನೇ ಹಣಕಾಸು ಆಯೋಗದ ಅವಧಿಯಲ್ಲಿರುವುದರಿಂದ ರಾಜ್ಯಕ್ಕೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ನಿರ್ದೇಶನ ನೀಡುವಂತೆ ಪುನಃ ಕೇಳಿಕೊಂಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ