AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಂಜೆಯೇ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಸಾಧ್ಯತೆ! ರಣದೀಪ್ ಸುರ್ಜೇವಾಲ, ಡಿಕೆಶಿ ತುರ್ತು ಮಾತುಕತೆ

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸಂಧಾನದ ಬಳಿಕ ಸಚಿವ ರಾಮಲಿಂಗಾ ರೆಡ್ಡಿ ಸಂಜೆ ವೇಳೆಗೆ ರಾಜೀನಾಮೆ ವಾಪಸ್ ಪಡೆಯುವ ಮುನ್ಸೂಚನೆ ನೀಡಿದ್ದಾರೆ. ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರು ಮುನಿಯಪ್ಪಗೆ ಸಣ್ಣ ನೀರಾವರಿ ಹೆಚ್ಚುವರಿ ಖಾತೆ ನೀಡುವಂತೆ ಸಿಎಂ ಡಿಕೆಶಿ ಬಳಿ ಮಾತುಕತೆ ನಡೆಸಿದ್ದಾರೆ.

ಇಂದು ಸಂಜೆಯೇ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಸಾಧ್ಯತೆ! ರಣದೀಪ್ ಸುರ್ಜೇವಾಲ, ಡಿಕೆಶಿ ತುರ್ತು ಮಾತುಕತೆ
ರಾಮಲಿಂಗಾ ರೆಡ್ಡಿImage Credit source: tv9
Sunil MH
| Edited By: |

Updated on: Jun 06, 2026 | 12:23 PM

Share

ಬೆಂಗಳೂರು, ಜೂನ್ 6: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದಲ್ಲಿ ಉದ್ಭವಿಸಿರುವ ಖಾತೆ ಹಂಚಿಕೆ ಬಿಕ್ಕಟ್ಟು ಸದ್ಯ ಶಮನಗೊಳ್ಳುವ ಹಂತಕ್ಕೆ ತಲುಪಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂಡಾಯವೆದ್ದಿದ್ದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಸಂಜೆ ವೇಳೆಗೆ ರಾಜೀನಾಮೆಯನ್ನು ವಾಪಸ್ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಎಐಸಿಸಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಧ್ಯಪ್ರವೇಶಿಸಿ ಸಂಧಾನ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಅವರು ಅಸಮಾಧಾನಗೊಂಡಿರುವ ಮುನಿಯಪ್ಪ ಹಾಗೂ ರಾಮಲಿಂಗಾ ರೆಡ್ಡಿ ಪರವಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಳಿ ಮಾತುಕತೆ ನಡೆಸಿದ್ದಾರೆ.

ಮುಖ್ಯಾಂಶಗಳು

  • ಸಂಜೆ ವೇಳೆಗೆ ರೆಡ್ಡಿ ರಾಜೀನಾಮೆ ವಾಪಸ್ ಸಾಧ್ಯತೆ.
  • ಸುರ್ಜೇವಾಲ ಜೊತೆ ಸಿಎಂ ಡಿಕೆಶಿ ತುರ್ತು ಚರ್ಚೆ.
  • ಮುನಿಯಪ್ಪಗೆ ಹೆಚ್ಚುವರಿ ಖಾತೆ ನೀಡಲು ಸತೀಶ್ ಆಗ್ರಹ.

ಸುರ್ಜೇವಾಲ ಭೇಟಿಯಾದ ರಾಮಲಿಂಗಾ ರೆಡ್ಡಿ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾ ರೆಡ್ಡಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಭೇಟಿಯಾಗಿ ಅಸಮಾಧಾನಕ್ಕೆ ಕಾರಣವನ್ನು ಸುದೀರ್ಘವಾಗಿ ವಿವರಿಸಿದ್ದಾರೆ. ‘ಬೆಂಗಳೂರು ಅಭಿವೃದ್ಧಿ ಖಾತೆಯನ್ನು ನೀಡುವುದಿಲ್ಲ ಎಂದಿದ್ದರೆ ನನಗೆ ಮೊದಲೇ ಹೇಳಬೇಕಿತ್ತು. ಮಾತು ಕೊಟ್ಟು ಈಗ ಹೀಗೆ ಮಾಡುವುದು ಸರಿಯಲ್ಲ. ಬೇರೆ ಖಾತೆ ನೀಡಲಾಗುತ್ತದೆ ಎಂದು ಮೊದಲೇ ತಿಳಿದಿದ್ದರೆ ನಾನು ಸಚಿವ ಸ್ಥಾನವನ್ನೇ ಸ್ವೀಕರಿಸುತ್ತಿರಲಿಲ್ಲ’ ಎಂದು ರೆಡ್ಡಿ ತೀವ್ರ ಬೇಸರ ಹೊರಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸುರ್ಜೇವಾಲ, ‘ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಈ ಸಮಸ್ಯೆಯನ್ನು ಸರಿಪಡಿಸಲಾಗುವುದು’ ಎಂಬ ಭರವಸೆ ನೀಡಿದ್ದಾರೆ. ಈ ಭರವಸೆಯ ಬೆನ್ನಲ್ಲೇ, ‘ನಾನು ಸಂಜೆವರೆಗೂ ಕಾಯುತ್ತೇನೆ, ಆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ತಾಜ್ ವೆಸ್ಟ್ ಎಂಡ್‌ನಲ್ಲಿ ಡಿಕೆಶಿ-ಸುರ್ಜೇವಾಲ ತುರ್ತು ಸಭೆ

ರಾಮಲಿಂಗಾ ರೆಡ್ಡಿ ಭೇಟಿಯ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಧಾವಿಸಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದಾರೆ. ರಾಮಲಿಂಗಾ ರೆಡ್ಡಿಯೊಂದಿಗೆ ತಾವು ನಡೆಸಿದ ಮಾತುಕತೆಯ ವಿವರಗಳನ್ನು ಸಿಎಂ ಡಿಕೆಶಿ ಅವರು ಉಸ್ತುವಾರಿಗಳಿಗೆ ವಿವರಿಸಿದ್ದಾರೆ. ಉಭಯ ನಾಯಕರು ಹೈಕಮಾಂಡ್ ಸೂಚನೆಯಂತೆ ಮುಂದಿನ ಕಾರ್ಯತಂತ್ರದ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ.

ಮುನಿಯಪ್ಪ, ರೆಡ್ಡಿ ಪರ ಸತೀಶ್ ಜಾರಕಿಹೊಳಿ ಬ್ಯಾಟಿಂಗ್

ಖಾತೆ ಹಂಚಿಕೆಯ ಬೆನ್ನಲ್ಲೇ ಹಿರಿಯ ಸಚಿವರಲ್ಲಿ ಉಂಟಾಗಿರುವ ಅಸಮಾಧಾನದ ಕುರಿತು ಸಚಿವ ಸತೀಶ್ ಜಾರಕಿಹೊಳಿ ಶುಕ್ರವಾರ ರಾತ್ರಿ ಪ್ರತ್ಯೇಕವಾಗಿ ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಚರ್ಚೆಯ ವೇಳೆ ಕೆ.ಎಚ್. ಮುನಿಯಪ್ಪ ಅವರ ಪರವಾಗಿ ಪ್ರಬಲವಾಗಿ ಧ್ವನಿ ಎತ್ತಿರುವ ಸತೀಶ್, ‘ಮುನಿಯಪ್ಪ ದಲಿತ ಎಡಗೈ ಸಮುದಾಯದ ಅತ್ಯಂತ ಪ್ರಮುಖ ಮತ್ತು ಹಿರಿಯ ನಾಯಕರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜೊತೆಯಲ್ಲಿಟ್ಟುಕೊಳ್ಳುವುದು ಪಕ್ಷಕ್ಕೆ ಅನಿವಾರ್ಯ. ಆದ್ದರಿಂದ ಅವರಿಗೆ ಆಹಾರ ಇಲಾಖೆಯ ಜೊತೆಗೆ ಹೆಚ್ಚುವರಿಯಾಗಿ ‘ಸಣ್ಣ ನೀರಾವರಿ’ ಖಾತೆಯನ್ನು ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ, ರಾಮಲಿಂಗಾ ರೆಡ್ಡಿ ಕುರಿತೂ ಮಾತನಾಡಿದ ಸತೀಶ್ ಜಾರಕಿಹೊಳಿ, ‘ರಾಮಲಿಂಗಾ ರೆಡ್ಡಿ ಬೆಂಗಳೂರಿನ ಪ್ರಮುಖ ಮತ್ತು ಪ್ರಭಾವಿ ನಾಯಕರು. ಬೆಂಗಳೂರು ನಗರದ ರಾಜಕೀಯವನ್ನು ನಿಭಾಯಿಸಲು ಅವರೇ ಸೂಕ್ತ ವ್ಯಕ್ತಿ. ಆದ್ದರಿಂದ ಅವರನ್ನು ಯಾವುದೇ ಕಾರಣಕ್ಕೂ ಕಡೆಗಣಿಸದೆ ವಿಶ್ವಾಸಕ್ಕೆ ಪಡೆಯುವುದು ಸೂಕ್ತ’ ಎಂದು ಮುಖ್ಯಮಂತ್ರಿಗಳಿಗೆ ಕಿವಿಮಾತು ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಟೀಕೆಗೆ ಸಿಎಂ ಡಿಕೆಶಿ ತಿರುಗೇಟು

ಕಾಂಗ್ರೆಸ್ ಸಂಪುಟದ ಆಂತರಿಕ ಭಿನ್ನಮತವನ್ನು ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಟೀಕಿಸಿರುವ ವಿಚಾರವಾಗಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೂತನ ಸರ್ಕಾರ ರಚನೆಯಾದಾಗ ನನಗೆ ವೈಯಕ್ತಿಕವಾಗಿ ಶುಭ ಹಾರೈಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಆದರೆ, ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನಾವು ಮತ್ತು ಅವರು ರಾಜಕೀಯ ಮಾಡುವುದು ಬೇಡ. ನಮ್ಮ ಸರ್ಕಾರ ಇರುವುದು ಜನರ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆ: ರಾಜೀನಾಮೆ ಹಿಂಪಡೆಯೋ ವಿಚಾರ ಮಾತ್ರ ಸಸ್ಪೆನ್ಸ್!

ಅಲ್ಲದೆ, ರಾಜ್ಯದ ಪ್ರಮುಖ ನೀರಾವರಿ ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ಶೀಘ್ರದಲ್ಲೇ ದೆಹಲಿಗೆ ತೆರಳಿ ಪ್ರಧಾನಿ ಮೋದಿಯನ್ನು ಖುದ್ದಾಗಿ ಭೇಟಿ ಮಾಡಿ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sunil MH
Sunil MH